03 ಆಗಸ್ಟ್ 2023

ಆಗಸ್ಟ್ ಮಾಸದ ನೆನಪುಗಳು...* ಭಾಗ _3 *ಲೋಕಮಾನ್ಯ ಬಾಲ ಗಂಗಾಧರ ತಿಲಕ್

 

*ಆಗಸ್ಟ್ ಮಾಸದ ನೆನಪುಗಳು...*

ಭಾಗ _3

*ಲೋಕಮಾನ್ಯ  ಬಾಲ ಗಂಗಾಧರ ತಿಲಕ್*

ಭಾರತದ ಚಳುವಳಿಯ ಜನಕ ಎಂಬ ಬಿರುದು ಪಡೆದ ನಾಯಕ, ಗಣೇಶ ಚತುರ್ಥಿ ಮತ್ತು ಶಿವಾಜಿ ಜಯಂತಿಗಳನ್ನು ರಾಷ್ಟ್ರೀಯತೆ ಬಿತ್ತುವ ಹಬ್ಬಗಳಾಗಿ ಪರಿವರ್ತಿಸಿದ ಮಹಾನಾಯಕ ,  ಸ್ವರಾಜ್ಯ ನನ್ನ ಜನ್ಮ ಸಿದ್ದ ಹಕ್ಕು ಅದನ್ನು ಪಡೆದೇ ತೀರುವೆ ಎಂದು ಘರ್ಜಿಸಿದ ಹುಲಿ,    ಜನಮಾನಸದಲ್ಲಿ  ಲೋಕಮಾನ್ಯ ಎಂದೇ ನೆಲೆಯೂರಿದ್ದ ಬಾಲ ಗಂಗಾಧರ ತಿಲಕ್ ರವರು ಪ್ರಾತಃ ಸ್ಮರಣೀಯರು. ಆಗಸ್ಟ್ ಮಾಸದ ಈ ಕಾಲದಲ್ಲಿ ತಿಲಕ್ ರವರ ತ್ಯಾಗ ಬಲಿದಾನ ನೆನೆಯುತ್ತಾ ಮಾಸದ ನೆನಪುಗಳ ಮೆಲುಕು ಹಾಕುತ್ತಾ ಮುಂದಿನ ಪೀಳಿಗೆಗೆ ಇಂತಹ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅರಿವು ಮೂಡಿಸೋಣ.

ಬಾಲ ಗಂಗಾಧರ  ತಿಲಕರು ಹುಟ್ಟಿದ್ದು 1856ರ ಜುಲೈ 23ರಂದು ಮಹಾರಾಷ್ತ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದ ಇವರು  ಚತುರ ವಿದ್ಯಾರ್ಥಿಯಾಗಿದ್ದರು. ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು. ಪದವಿ ಪಡೆದ ಬಳಿಕ ಪುಣೆಯ ಖಾಸಗೀ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿ ಸೇರಿದ ತಿಲಕರು ನಂತರ ಅದನ್ನು ಬಿಟ್ಟು ಪತ್ರಕರ್ತರಾದರು. ಪಾಶ್ಚಿಮಾತ್ಯ ಶಿಕ್ಷಣ ಪಧ್ಧತಿಯು ಭಾರತೀಯ ಪರಂಪರೆಯನ್ನು ಅವಹೇಳಿಸುವಂಥಾದ್ದೂ ಹಾಗೂ ಭಾರತದ ವಿದ್ಯಾರ್ಥಿಗಳನ್ನು ಕೀಳುಗಳೆಯುವಂಥಾದ್ದು ಎಂಬ ನಿರ್ಧಾರಕ್ಕೆ ಬಂದ ಅವರು ಈ ಪಧ್ಧತಿಯ ತೀವ್ರ ಟೀಕಾಕಾರರಾದರು. ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪುಣೆಯಲ್ಲಿ ಡೆಕ್ಕನ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.

ತಿಲಕರು ಸ್ಥಾಪಿಸಿದ "ಕೇಸರಿ"  ಮತ್ತು  ಮರಾಠ ಪತ್ರಿಕೆಗಳು ಬಹುಬೇಗ ಜನಸಾಮಾನ್ಯರ ಮನೆಮಾತಾದವು. ಅಭಿಪ್ರಾಯ ಸ್ವಾತಂತ್ರ್ಯವನ್ನು, ಅದರಲ್ಲೂ ಮುಖ್ಯವಾಗಿ, 1905ರ ಬಂಗಾಳದ ವಿಭಜನೆಯ ವಿರೋಧವನ್ನು  ಹತ್ತಿಕ್ಕಿದ ಭಾರತದ ನಾಗರೀಕರನ್ನು  ಸಂಸೃತಿಯನ್ನು, ಪರಂಪರೆಯನ್ನು ಹೀಯಾಳಿಸುವ ಬ್ರಿಟಿಷ್ ಆಡಳಿತದ ವಿರುದ್ಧ ತೀವ್ರ ಟೀಕೆಯನ್ನು ಅವರು ಕೇಸರಿಯಲ್ಲಿ ಮಾಡುತ್ತಿದ್ದರು. ಭಾರತೀಯರಿಗೆ ಸ್ವರಾಜ್ಯದ ಹಕ್ಕನ್ನು ಬಿಟ್ಟುಕೊಡಬೇಕೆಂದು ಅವರು ಪ್ರತಿಪಾದಿಸಿದರು. 1890ರ ದಶಕದಲ್ಲಿ ತಿಲಕರು ಕಾಂಗ್ರೆಸ್ ಸೇರಿದರಾದರೂ  ಬಹುಬೇಗ  ಅದರ ಕೆಲ ನೀತಿಗಳನ್ನು ವಿರೋಧಿಸಿ ಹೊರನಡೆದರು. ಲಾಲ್ ಬಾಲ್ ಪಾಲ್ ಎಂದೇ ಖ್ಯಾತರಾದ
 ಬಿಪಿನ ಚಂದ್ರ ಪಾಲ್ ಹಾಗೂ ಪಂಜಾಬಿನ ಲಾಲಾ ಲಜಪತ ರಾಯ್  ರವರ ಜೊತೆಗೂಡಿ ಸ್ವಾತಂತ್ರ್ಯ ಚಳುವಳಿಯಲ್ಲಿ ತೊಡಗಿಕೊಂಡರು.
1907 ರ ಸೂರತ್ ಅಧಿವೇಶನದಲ್ಲಿ  ಲಾಲ್ ಬಾಲ್ ಪಾಲ್  ನೇತ್ಳತ್ವದಲ್ಲಿ "ಗರಂ ದಳ" ವನ್ನು ಸ್ಥಾಪಿಸಿ ಹೋರಾಟವನ್ನು ಚುರುಕುಗೊಳಿಸಿದರು.
  ವಿವಿಧ ಮೊಕದ್ದಮೆಗಳ ಅಡಿಯಲ್ಲಿ  ಬ್ರಿಟಿಷ್ ನ್ಯಾಯಾಧೀಶರಿಂದ ಅಪರಾಧಿ ಎಂದು ಘೋಷಿಸಲ್ಪಟ್ಟು, 1908 ರಿಂದ 1914 ರವರೆಗೆ ಬರ್ಮಾ ದೇಶದ ಮಂಡಾಲೆಯಲ್ಲಿ ಸೆರೆವಾಸ ಅನುಭವಿಸಿದರು. ಬಿಡುಗಡೆಯಾದ ನಂತರ ತಮ್ಮ ಸಹ- ರಾಷ್ಟ್ರೀಯವಾದಿಗಳನ್ನು ಕೂಡಿಕೊಂಡ ತಿಲಕರು  ಅಖಿಲ ಭಾರತ ಹೋಂ ರೂಲ್ ಲೀಗನ್ನು ಸ್ಥಾಪಿಸುವಲ್ಲಿ ಆನಿ ಬೆಸೆಂಟ್ ಮತ್ತು ಮಹಮದ್ ಆಲಿ ಜಿನ್ನಾರಿಗೆ ಸಹಕಾರ ನೀಡಿದರು. ಅದರ ಮೂಲಕ ಸ್ವಾತಂತ್ರ ಹೋರಾಟವನ್ನು ಮತ್ತೂ ಚುರುಕುಗೊಳಿಸಿದರು.

ತಿಲಕರು ಮೂಲತಃ ಅದ್ವೈತ ವೇದಾಂತದ ಪ್ರತಿಪಾದಕರಾಗಿದ್ದರೂ, ಸಾಂಪ್ರದಾಯಿಕ ಅದ್ವೈತದ "ಜ್ಙಾನವೊಂದರಿಂದಲೇ ಮುಕ್ತಿ" ಎಂಬ ನಂಬುಗೆಯು ಅವರಿಗೆ ಒಪ್ಪಿಗೆಯಿರಲಿಲ್ಲ. ಅದಕ್ಕೆ ಸರಿಸಮನಾಗಿ ಹಾಗೂ ಪೂರಕವಾಗಿ ಅವರು ಕರ್ಮಯೋಗವನ್ನೂ ಸೇರಿಸಿದರು. ವಿವಾಹಕ್ಕೆ ಕನಿಷ್ಠ ವಯೋಮಿತಿಯೇ ಮೊದಲಾಗಿ ತಿಲಕರು ಅನೇಕ ಸಾಮಾಜಿಕ ಸುಧಾರಣೆಗಳನ್ನು  ಮುಂದಿಟ್ಟರು. ಮದ್ಯಪಾನ ನಿಷೇಧದ ಪರವಾಗಿ ಅವರಿಗೆ ಅತ್ಯಂತ ಕಳಕಳಿಯಿತ್ತು. ಶಿಕ್ಷಣ ಹಾಗೂ ರಾಜಕೀಯ ಜೀವನದ ಬಗ್ಗೆ ಅವರ ವಿಚಾರಗಳು ಬಹಳ ಪ್ರಭಾವಶಾಲಿಯಾಗಿದ್ದವು ದೇವನಾಗರಿ ಲಿಪಿಯಲ್ಲಿ ಬರೆಯಲಾಗುವ ಹಿಂದಿ ಭಾಷೆಯು ಭಾರತದ ರಾಷ್ಟ್ರ ಭಾಷೆಯಾಗ  ಬೇಕು ಎಂದು ಮೊದಲು ಸೂಚಿಸಿದವರು ತಿಲಕರು. ಗಾಂಧೀಜಿ ಇದನ್ನು ಮುಂದೆ ಬಲವಾಗಿ ಅನುಮೋದಿಸಿದರು. ಆದರೆ, ತಿಲಕರು ಸಂಪೂರ್ಣವಾಗಿ ಭಾರತದಿಂದ ನಿರ್ಮೂಲನ ಮಾಡಬೇಕೆಂದು ಇಚ್ಛೆ ಪಟ್ಟಿದ್ದ ಇಂಗ್ಲೀಷ್  ಭಾಷೆ ಇಂದಿಗೂ ಸಂವಹನದ ಒಂದು ಮುಖ್ಯ ಸಾಧನವಾಗಿ ಉಳಿದುಕೊಂಡು ಬಂದಿದೆ.ಆದರೂ ಹಿಂದಿ ಮತ್ತು ಇತರ ಭಾರತೀಯ ಭಾಷೆಗಳನ್ನು ಜನಸಾಮಾನ್ಯರ ಮಟ್ಟದಲ್ಲಿ ಬಳಕೆ ಮತ್ತು ಬ್ರಿಟಿಷರ ಕಾಲದಿಂದ ಇಂದಿನವರೆಗೂ ನೀಡಲಾಗುತ್ತಿರುವ ಪ್ರೋತ್ಸಾಹಕ್ಕೆ ತಿಲಕರು ಅಂದು ಪ್ರಾರಂಭಿಸಿದ ಪುನರುಜ್ಜೀವನವೇ ಕಾರಣ ಎನ್ನಲಾಗುತ್ತದೆ. ತಿಲಕರ ಮತ್ತೊಂದು ದೊಡ್ಡ ಕಾಣಿಕೆಯೆಂದರೆ, ಸಾರ್ವಜನಿಕ ಗಣೇಶೋತ್ಸವ. ಭಾದ್ರಪದ ಶುಕ್ಲ ಚತುರ್ಥಿಯಿಂದ ಹಿಡಿದು ಅನಂತ ಚತುರ್ದಶಿಯವರೆಗಿನ 11 ದಿನಗಳ ಈ ಉತ್ಸವ, ಖಾಸಗೀ ಧಾರ್ಮಿಕ ಆಚರಣೆಯನ್ನು ಜನಸಾಮಾನ್ಯರು ಒಟ್ಟುಗೂಡಿ ಆಚರಿಸುವ, ನಾಯಕರುಗಳಿಗೆ ಜನಸಾಮಾನ್ಯರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವಾಗಿ ಬದಲಾಯಿಸಿತು. ತಿಲಕರು ಪ್ರಾರಂಭಿಸಿದ ಈ ಪರಂಪರೆ ದೇಶದ ಅನೇಕ ಕಡೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಹಾರಾಷ್ಟ್ರದಲ್ಲಿ ಇಂದಿಗೂ ಮುಂದುವರಿಯುತ್ತಿದೆ.ಪರದೇಶೀ ವಸ್ತುಗಳನ್ನು ಬಹಿಷ್ಕರಿಸುವಂತೆ ಅವರು ನೀಡಿದ ಕರೆ ಬಹಳಷ್ಟು ಭಾರತೀಯರಲ್ಲಿ ದೇಶಭಕ್ತಿಯನ್ನು ಉಕ್ಕಿಸಿತು.

ತಿಲಕರು ಮಹಾತ್ಮಾ ಗಾಂಧಿಯವರ ಅಹಿಂಸಾತ್ಮಕ , ಅಸಹಕಾರ ಚಳುವಳಿಯ ಟೀಕಾಕಾರರಾಗಿದ್ದರು. ಒಂದು ಕಾಲದಲ್ಲಿ ತೀವ್ರವಾದಿ ಕ್ರಾಂತಿಕಾರಿಯೆಂದು ಪರಿಗಣಿಸಲ್ಪಟ್ಟಿದ್ದರೂ, ನಂತರದ ವರ್ಷಗಳಲ್ಲಿ ಅವರು ಗಮನಾರ್ಹವಾಗಿ ಬದಲಾಗಿದ್ದರು. ಭಾರತದ ಸ್ವಾತಂತ್ರ ಗಳಿಸಲು, ಮಾತುಕತೆಗಳ ಮೂಲಕವೇ ಹೆಚ್ಚು ಪರಿಣಾಮಕಾರಿ ಎಂಬ ಬಗ್ಗೆಯೆ ಅವರಿಗೆ ಒಲವಿತ್ತು.  ಸ್ವರಾಜ್ಯ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಜನಸಾಮಾನ್ಯರವರೆಗೆ ಕೊಂಡೊಯ್ದ ತಿಲಕರನ್ನು ಸ್ವಾತಂತ್ರ್ಯ ಚಳುವಳಿಯ ಜನಕ ಎಂದು ಪರಿಗಣಿಸಲಾಗಿದೆ. ಭಾರತೀಯ ಸಂಸ್ಕೃತಿ, ಇತಿಹಾಸ ಹಾಗೂ ಧರ್ಮದ ಬಗ್ಗೆ ಲೇಖನಗಳಿಂದ ಲಕ್ಷಾಂತರ ಭಾರತೀಯರಿಗೆ ತಮ್ಮ ಭವ್ಯ ಪರಂಪರೆಯ ಹಾಗೂ ನಾಗರೀಕತೆಗಳ ಅರಿವು ಮಾಡಿಕೊಟ್ಟು, ಅವರ ಪ್ರಜ್ಙೆಯಲ್ಲಿ ತಮ್ಮ ನಾಡಿನ ಬಗ್ಗೆ ಅಭಿಮಾನವನ್ನು ಮೂಡಿಸಿದರು . ತಿಲಕರನ್ನು ಭಾರತದ ರಾಜಕೀಯ ಹಾಗೂ ಆಧ್ಯಾತ್ಮಿಕ  ನಾಯಕರನ್ನಾಗಿಯೂ, ಮಹಾತ್ಮಾ ಗಾಂಧಿಯವರನ್ನು ಇವರ ಉತ್ತರಾಧಿಕಾರಿಯಾಗಿಯೂ ಅನೇಕರು ಪರಿಗಣಿಸುತ್ತಾರೆ. 1920ರಲ್ಲಿ ತಿಲಕರು ತೀರಿಕೊಂಡಾಗ, ಅವರ ಅಂತ್ಯಕ್ರಿಯೆಯಲ್ಲಿ  ಎರಡು ಲಕ್ಷಕ್ಕೂ ಹೆಚ್ಚು ಜನರು  ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಮಹಾತ್ಮಾ ಗಾಂಧಿಯವರು ತಿಲಕರನ್ನು "ಭಾರತದಲ್ಲಿ ಚಳುವಳಿಯ ಜನಕ"   ಎಂದು ಬಣ್ಣಿಸಿದರು.

*ಸಿಹಿಜೀವಿ ವೆಂಕಟೇಶ್ವರ*
ತುಮಕೂರು
9900925529


02 ಆಗಸ್ಟ್ 2023

ಹಾಯ್ಕುಗಳು..

 ಸ್ಪರ್ಧೆಗೆ...


*ಹಾಯ್ಕುಗಳು*



ನೀನು ಮಾನವ

ಕೃತಜ್ಞತೆಯಿರಲಿ 

ಜೀವಿಗಳಿಗೆ 



ಪರಿಸರಕೆ 

ಕೃತಘ್ನನಾಗಬೇಡ 

ನೀನಳಿಯುವೆ 


*ಸಿಹಿಜೀವಿ ವೆಂಕಟೇಶ್ವರ*

ತುಮಕೂರು

01 ಆಗಸ್ಟ್ 2023

ಆಗಸ್ಟ್ ಮಾಸದ ನೆನಪುಗಳು....ಖುದಿರಾಮ್ ಬೋಸ್..



ಆಗಸ್ಟ್ ಮಾಸದ ನೆನಪುಗಳು...

೨ ಖುದಿರಾಮ್ ಬೋಸ್...

  ಟೀನೇಜ್ ನಲ್ಲಿ ಹುಡುಗರು ತಮ್ಮದೇ ಲೋಕದಲ್ಲಿ ಮುಳುಗಿ ವೈಯಕ್ತಿಕ ಆಸೆ ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಲು ಹಾತೊರೆಯುತ್ತಾರೆ. ಇದಕ್ಕೆ ವಿರುದ್ಧವಾಗಿ ಹದಿನೆಂಟರ ಹರೆಯದಲ್ಲೇ ಬ್ರಿಟಿಷರ ವಿರುದ್ಧ ಕ್ರಾಂತಿಯ  ಕಿಡಿಯೆಬ್ಬಿಸಿ  ದೇಶಕ್ಕಾಗಿ ತನ್ನ ತಲೆಯನ್ನು ನೇಣುಗಂಬಕ್ಕೆ ಒಡ್ಡಿಕೊಂಡ  ಮಹಾನ್ ಚೇತನವೇ ಖುದಿರಾಮ್ ಬೋಸ್.

1889 ರ  ಡಿಸೆಂಬರ್ ಮೂರರಂದು ಮಿಡ್ನಾಪುರ ಜಿಲ್ಲೆಯ ಅಬೀಬ್ ಪುರದಲ್ಲಿ  ಜನ್ಮತಾಳಿದ ಖುದಿರಾಮ್ ಬೋಸ್ ರವರು  ಚಿಕ್ಕ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡರು. ಅವರ ಅಕ್ಕ ಭಾವನ ಅಕ್ಕರೆಯಲ್ಲಿ ಬೆಳೆದ ಖುದಿರಾಮ್ ಬೋಸರು ಅತಿ ಚಿಕ್ಕ ವಯಸ್ಸಿನಲ್ಲಿಯೇ ಕ್ರಾಂತಿಕಾರಿಗಳೊಂದಿಗೆ ಗುರುತಿಸಿಕೊಂಡರು. ಬಂಕಿಮಚಂದ್ರರು ಬರೆದ ‘ಆನಂದ ಮಠ’ ಮತ್ತು ‘ಆನಂದದಾತ’ ಕಾದಂಬರಿಗಳೂ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದವು. `ವಂದೇ ಮಾತರಂ’ ಗೀತೆಯಂತೂ ಇವರ ನರನಾಡಿಗಳಲ್ಲಿ ದೇಶ ಭಕ್ತಿ ಉಕ್ಕಿ ಹರಿಯುವಂತೆ ಮಾಡಿತ್ತು. ಹೀಗಾಗಿ ಸುಮಾರು ಹದಿನೈದರ ಹರೆಯದಲ್ಲಿಯೇ ದೇಶಭಕ್ತಿಯನ್ನು ಮೈಗೂಡಿಸಿಕೊಂಡ ಬೋಸ್ ಕ್ರಾಂತಿಕಾರಿ ಸಂಘಟನೆಗಳ ಜೊತೆಗೆ ನಿಕಟ ಸಂಬಂಧವನ್ನಿಟ್ಟುಕೊಂಡುದೇ ಅಲ್ಲದೇ ಅದರ ಪ್ರಚಾರ ಕಾರ್ಯಕ್ಕೆ ತೊಡಗಿ ಕರಪತ್ರಗಳನ್ನು ಹಂಚುತ್ತಿದ್ದಾಗ ಸಿಕ್ಕಿಬಿದ್ದು ಪುನಃ ಬಿಡುಗಡೆಗೊಂಡರು.

 ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚು ಕಾಳ್ಗಿಚ್ಚಾಗಿ ಭುಗಿಲೆದ್ದ ಕಾಲವದು. ಇದಕ್ಕೆ ಹಲವಾರು ಪತ್ರಿಕೆಗಳು ಕುಮ್ಮಕ್ಕು ನೀಡುತ್ತಿದ್ದವು. ಹೀಗಾಗಿ ಬ್ರಿಟಿಷರ ವಿರುದ್ಧವಾಗಿ ಬರೆದ ಪತ್ರಿಕೆಗಳ ಮೇಲೆ ಮೊಕದ್ದಮೆ ಹೂಡಲಾಗುತ್ತಿತ್ತು. ಅರವಿಂದ ಘೋಷರ ಪ್ರಕಾಶನದಲ್ಲಿ ಹೊರಬರುತ್ತಿದ್ದ ‘ವಂದೇ ಮಾತರಂ’ ಪತ್ರಿಕೆಯೂ ಬ್ರಿಟಿಷರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಮೊಕದ್ದಮೆಯ ವಿಚಾರಣೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ನಿರಾಯುಧ ಗುಂಪಿನ ಮೇಲೆ ಬ್ರಿಟಿಷರು ಅನವಶ್ಯಕವಾಗಿ ಲಾಠಿ ಪ್ರಹಾರ ಮಾಡಿದರು. ಇದರಿಂದ ಕೆರಳಿದ ಹದಿನೈದು ವರ್ಷದ ಸುಶೀಲ್ ಸೇನ್ ಬ್ರಿಟಿಷ್ ಅಧಿಕಾರಿಗೆ ತಿರುಗಿಸಿ ಹೊಡೆದರು. ಇದರಿಂದ ರೊಚ್ಚಿಗೆದ್ದ ಬ್ರಿಟಿಷ್ ಅಧಿಕಾರಿ ಕಿಂಗ್ಸ್ ಫೋರ್ಡನು ಆ ಯುವಕನನ್ನು ಮ್ಯಾಜಿಸ್ಟ್ರೇಟ್ ಮುಂದೆ ನಿಲ್ಲಿಸಿ ಆತನ ವಯಸ್ಸನ್ನು ಲೆಕ್ಕಿಸದೆ 15 ಛಡಿ ಏಟಿನ ಶಿಕ್ಷೆ ವಿಧಿಸಿ ವಿಕೃತಿ ಮೆರೆದನು.

ಸುಶೀಲ್ ಕುಮಾರರೇನೋ ಶಿಕ್ಷೆಯನ್ನು ಸಂತೋಷದಿಂದಲೇ ಸ್ವೀಕರಿಸಿದರು. ಆದರೆ ಈ ಅಪ್ರಾಪ್ತ ಬಾಲಕನ ಮೇಲೆ ಲಾಠಿ ಬೀಸಿದ್ದಲ್ಲದೆ, ಉಗ್ರಶಿಕ್ಷೆಗಳನ್ನು ನೀಡುತ್ತಿದ್ದ ಬ್ರಿಟಿಷರ ದಬ್ಬಾಳಿಕೆಯನ್ನು ಸಹಿಸದ ಕ್ರಾಂತಿಕಾರಿಗಳು ಕಿಂಗ್ಸ್ ಫೋರ್ಡನನ್ನು ಮುಗಿಸಲು ತೀರ್ಮಾನಿಸಿದರು. ಇದರ ಸುಳಿವು ಹತ್ತಿದ ಬ್ರಿಟಿಷ್ ಸರ್ಕಾರ ಕಿಂಗ್ಸ್ ಫೋರ್ಡನನ್ನು ಮುಜಾಫರಪುರಕ್ಕೆ ವರ್ಗ ಮಾಡಿತು.

ಹೇಗಾದರಾಗಲಿ ಕಿಂಗ್ಸ್ ಫೋರ್ಡನನ್ನು ಕೊಲ್ಲಲೇಬೇಕು ಎನ್ನುವ ದೃಢ ನಿರ್ಧಾರ ಮಾಡಿದ್ದ ಕ್ರಾಂತಿಕಾರಿಗಳು, ಈ ಕಾರ್ಯವನ್ನು `ಯುಗಾಂತರ ಗುಂಪಿನ ನಾಯಕರಾದ ಸತ್ಯೇಂದ್ರನಾಥ ಬೋಸ್, ಖುದಿರಾಮ್ ಬೋಸ್ ಮತ್ತು ಆತನ ಸಹ ಕ್ರಾಂತಿಕಾರಿ ಪ್ರಫುಲ್ಚಾಕಿಗೆ ವಹಿಸಿದರು. ಆಜ್ಞೆಯಂತೆ ತೆರಳಿದ ಈ ಕ್ರಾಂತಿಕಾರಿಗಳು ಕಿಂಗ್ಸ್ ಫೋರ್ಡನ ಚಲನವಲನಗಳನ್ನು ಗಮನಿಸತೊಡಗಿದರು.

ಕಿಂಗ್ಸ್ ಫೋರ್ಡನು ಸಂಜೆ ಕ್ಲಬ್ಬಿನಿಂದ ಮನೆಗೆ ಬರುವ ದಾರಿಯಲ್ಲಿ ಕಾರಿನ ಮೇಲೆ ಬಾಂಬ್ ಹಾಕಲು ನಿರ್ಧರಿಸಲಾಗಿತ್ತು. ಎಂದಿನಂತೆ ಕಾರು ಹೊರಟು ಬಂದಿತು. ಅದರೊಳಗೆ ಯಾರಿದ್ದಾರೆಂದು ಗಮನಿಸದೆ ಬೋಸ್ ಮತ್ತು ಚಾಕಿ ಬಾಂಬ್ ಎಸೆದರು. ಕಿಂಗ್ಸ್ ಫೋರ್ಡ್ ಬದಲಾಗಿ ಅದರಲ್ಲಿದ್ದ ಇಬ್ಬರು ಮಹಿಳೆಯರು ಅಸುನೀಗಿದರು. ಇತ್ತ ಕಿಂಗ್ಸ್ ಫೋರ್ಡನನ್ನು ಕೊಂದೆವೆಂದುಕೊಂಡ ಈ ಹುಡುಗರು ಒಂದೊಂದು ದಿಕ್ಕಿಗೊಬ್ಬರು ಓಡಿದರು.

ಕ್ರಾಂತಿಕಾರಿಗಳು ಎಸೆದ ಬಾಂಬು ಕಿಂಗ್ಸ್ ಫೋರ್ಡನನ್ನು ಕೊಲ್ಲಲಿಲ್ಲವಾದರೂ, ಇಡೀ ಬ್ರಿಟಿಷ್ ಸಾಮ್ರಾಜ್ಯಕ್ಕೇ ಮೊದಲ ನಡುಕ ಹುಟ್ಟಿಸಿಬಿಟ್ಟಿತ್ತು. ಈ ಹುಡುಗರು ಎಸೆದ ಬಾಂಬು ಕೇವಲ ಕಿಂಗ್ಸ್ ಫೋರ್ಡನ ವಾಹನ ಚೂರು ಚೂರು ಮಾಡಿದ್ದಲ್ಲದೆ ಬ್ರಿಟಿಷ್ ಸಾಮ್ರಾಜ್ಯದ ಅಹಂಕಾರ ಮತ್ತು ದರ್ಪವನ್ನು ನುಚ್ಚುನೂರು ಮಾಡಿತ್ತು.ಇದರಿಂದ ರೊಚ್ಚಿಗೆದ್ದ ಬ್ರಿಟಿಷರು ಖುದಿರಾಮ್ ಬೋಸ್ ಮತ್ತು ಸಂಗಡಿಗರನ್ನು ಸೆರೆಹಿಡಿಯಲು ಸತತವಾಗಿ ಪ್ರಯತ್ನಿಸಿದರು.ಭೂಗತರಾದ ಅವರು ಅಷ್ಟು ಸುಲಭವಾಗಿ ಸಿಗಲಿಲ್ಲ. ಕೊನೆಗೆ
ಮುಜಾಫುರದಿಂದ ಸುಮಾರು ,25  ಮೈಲುಗಳಾಚೆ ಯುವಕ ಖುದಿರಾಮ್ ಬೋಸರನ್ನು ಸೆರೆಹಿಡಿಯಲಾಯಿತು. ತಪ್ಪಿಸಿಕೊಳ್ಳಲು ಆತ ಮಾಡಿದ ಎಲ್ಲ ಸಾಹಸಗಳು ವ್ಯರ್ಥವಾಗಿ ಬಂಧನವಾಗಿ ಹೋಯಿತು. ಅವರ ಮೇಲೆ ವಿಚಾರಣೆ ಎಂಬ ನಾಟಕ ನಡೆದು ಕೊನೆಗೆ ಮರಣದಂಡನೆಯನ್ನು ವಿಧಿಸಲಾಯಿತು. 1908ರ  ಆಗಸ್ಟ್ 11ರಂದು ಅವರನ್ನು  ಗಲ್ಲಿಗೇರಿಸಲಾಯಿತು.

ಸಿಹಿಜೀವಿ ವೆಂಕಟೇಶ್ವರ
ತುಮಕೂರು.
9900925529

 

31 ಜುಲೈ 2023

ಬಯಕೆ

 


ಬಯಕೆ..


ಅವನಿಗೂ ತನ್ನ ಪ್ರೇಯಸಿಯ

ಎತ್ತಿ ಮುದ್ದಾಡಬೇಕೆಂಬ ಬಯಕೆ|

ದೂರದಲ್ಲೇ ನಿಂತು ಪ್ಲೈಯಿಂಗ್ ಕಿಸ್

ನೀಡುವನು ಅವಳ ತೂಕದ ಭಯಕೆ ||


ಸಿಹಿಜೀವಿ ವೆಂಕಟೇಶ್ವರ

ತುಮಕೂರು

ಆಗಸ್ಟ್ ಮಾಸದ ನೆನಪುಗಳು ಭಾಗ ೧ .#ಚಂದ್ರಶೇಖರ್ ಆಜಾದ್


 


ಸ್ವಾತಂತ್ರ್ಯದ ಹಣತೆಗಳು ..

ಭಾಗ ೧
ಚಂದ್ರಶೇಖರ ಆಜಾದ್.

ಚಂದ್ರಶೇಖರ ಸೀತಾರಾಮ ತಿವಾರಿಯವರು ಭಾರತದ
ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ನಾಗರಿಕ ಶಾಸನಭಂಗದ ಆಧಾರದ ಮೊಕದ್ದಮೆಯಲ್ಲಿ   ಬಂಧಿತರಾದಾಗ ,  ನ್ಯಾಯಾಧೀಶರು  ಅವರ ಹೆಸರೇನೆಂದು ಕೇಳಿದಾಗ, ಅವರು "ಆಜಾದ್ " ಎಂದು ಹೇಳಿದರು. ಈ ಉದ್ಧಟತನಕ್ಕಾಗಿ ಅವರಿಗೆ ಹದಿನೈದು ಛಡಿಏಟುಗಳ ಶಿಕ್ಷೆಯನ್ನು ನೀಡಲಾಯಿತು.ಆದರೂ ತಮ್ಮ ಹೆಸರು ಆಜಾದ್ ಎಂದೇ ಹೇಳಿದರು. ಅಂದಿನಿಂದ ಚಂದ್ರಶೇಖರ ಆಜಾದ್ ಆಗಿಯೇ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಪ್ರಮುಖವಾದ ಗುರುತು ಮೂಡಿಸಿದರು.
ಚಂದ್ರಶೇಖರ ಆಜಾದ್ರವರು 23 ಜುಲೈ 1906ರಂದು  ಮಧ್ಯಪ್ರದೇಶದ ಜಬುವಾ ಜಿಲ್ಲೆಯಲ್ಲಿರುವ ಭವ್ರಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ತಂದೆ ಪಂಡಿತ್ ಸೀತಾರಾಮ್ ತಿವಾರಿಯವರು  ಜಾಗ್ರಣೀ ದೇವಿಯವರು ಅವರ ತಾಯಿ. ಭಾವರಾ ಮತ್ತು ವಾರಾಣಸಿಯ ಸಂಸ್ಕೃತ ಪಾಠಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದರು. ವಿದ್ಯಾರ್ಥಿದೆಸೆಯಲ್ಲಿಯೇ ಮಹಾತ್ಮಾ ಗಾಂಧಿಯವರ ಮೋಡಿಗೊಳಗಾಗಿ ಕಾಂಗ್ರೆಸ್ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. 





ಆಜಾದರು  ಆಕ್ರಮಣಶಾಲಿ ಹಾಗೂ ಉಗ್ರ ಕ್ರಾಂತಿಕಾರಿ ಆದರ್ಶಗಳಿಂದ ಆಕರ್ಷಿತರಾದರು. ಯಾವುದೇ ಮಾರ್ಗದಿಂದಾದರೂ ಸಂಪೂರ್ಣ ಸ್ವಾತಂತ್ರ್ಯ ಪಡೆಯುವ ಧ್ಯೇಯಕ್ಕೆ ತಮ್ಮನ್ನೇ  ಮುಡಿಪಾಗಿಡಲು ನಿರ್ಧರಿಸಿದರು.
ಈ ನಿಟ್ಟಿನೆಡೆಗೆ ಮುಂದುವರೆಯುವ ಪ್ರಥಮ ಹೆಜ್ಜೆಯಾಗಿ ಅವರು ಹಿಂದೂಸ್ತಾನ್ ಸಮಾಜವಾದಿ ಪ್ರಜಾಪ್ರಭುತ್ವವಾದಿ ಸಂಘಟನೆ  ಆರಂಭಿಸಿದರಲ್ಲದೇ ಭಗತ್ ಸಿಂಗ್, ಸುಖ್ದೇವ್, ಬಟುಕೇಶ್ವರ ದತ್  ಮತ್ತು ರಾಜ್ಗುರುರಂತಹಾ ಕ್ರಾಂತಿಕಾರಿಗಳಿಗೆ ಮಾರ್ಗದರ್ಶಕರಾದರು.  
ಆಜಾದರು ಭಾರತದ ಭವಿಷ್ಯವು ಸಮಾಜವಾದದಲ್ಲಿಯೇ ಇದೆ ಎಂದು  ನಂಬಿದ್ದರು. ಪಂಡಿತ್ ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಜ್ಯೋತಿ ಶ್ರೀವಾಸ್ತವ್ ರೊಂದಿಗೆ ಉತ್ತಮ ಸ್ನೇಹತ್ವ ಸಂಪಾದಿಸಿದ್ದರು.

1925 ರಲ್ಲಿ  ಕಾಕೊರಿ ರೈಲು ದರೋಡೆ , 1926ರಲ್ಲಿ  ವೈಸ್ರಾಯ್  ರೈಲನ್ನು ಸ್ಫೋಟಿಸಲು ನಡೆಸಿದ ವಿಫಲ ಯತ್ನ , ಮತ್ತು ಲಾಲಾ ಲಜಪತ್ ರಾಯ್ರನ್ನು ಕೊಂದುದರ ಪ್ರತೀಕಾರವಾಗಿ ಲಾಹೋರ್ನಲ್ಲಿ 1928 ರಲ್ಲಿ  ಜಾನ್ ಪಾಯಂಟ್ಜ್ ಸಾಂಡರ್ಸ್ನನ್ನು ಗುಂಡು ಹಾರಿಸಿ ಕೊಂದಂತಹಾ ಅನೇಕ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಅವರು ಭಾಗಿಯಾಗಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾದರು.
24 ವರ್ಷಗಳ ಅಲ್ಪಾವಧಿಯ ಜೀವಿತದಲ್ಲಿ, ಚಂದ್ರಶೇಖರ ಆಜಾದ್ರವರು ಗಮನಾರ್ಹ ಅವಧಿಯವರೆಗೆ ಝಾನ್ಸಿಯನ್ನು ತಮ್ಮ ಸಂಘಟನೆಯ ಕೇಂದ್ರಸ್ಥಳವನ್ನಾಗಿ ಮಾಡಿಕೊಂಡಿದ್ದರು. ಇದರ ಸಮೀಪವಿರುವ ಅರಣ್ಯವನ್ನು ಗುಂಡು ಹಾರಿಸುವುದನ್ನು ಅಭ್ಯಾಸ ಮಾಡಲು ಆಯ್ಕೆ ಮಾಡಿಕೊಂಡಿದ್ದರು.

ಅವರು ಗುಂಡು ಹಾರಿಸುವುದರಲ್ಲಿ ಅದ್ಭುತ ಗುರಿಕಾರರಾಗಿದ್ದರು ಹಾಗೂ ತಮ್ಮ ತಂಡದ ಇತರೆ ಸದಸ್ಯರಿಗೆ ಈ ಸ್ಥಳದಲ್ಲಿಯೇ ಅವರು ತರಬೇತಿ ನೀಡುತ್ತಿದ್ದರು. ಅರಣ್ಯದ ಸಮೀಪ ಸಾತಾರ್ ಎಂದು ಕರೆಯಲ್ಪಡುತ್ತಿದ್ದ ಸಣ್ಣ ನದಿಯ ತೀರದಲ್ಲಿರುವ ಹನುಮಾನ್ ದೇವರ ದೇವಸ್ಥಾನದ ಬಳಿ, ಆಜಾದರು ಒಂದು ಸಣ್ಣ ಗುಡಿಸಲನ್ನು ಕಟ್ಟಿಕೊಂಡಿದ್ದರು. ಅವರು ಅಲ್ಲಿ ಪಂಡಿತ್ ಹರಿಶಂಕರ್ ಬ್ರಹ್ಮಚಾರಿ ಎಂಬ ಹೆಸರಿನಿಂದ ಮಾರುವೇಷದಲ್ಲಿ ವಾಸಿಸಲು  ಆರಂಭಿಸಿದರು.  
ಸಮೀಪದ ಧಿಮಾರ್ಪುರ ಎಂಬ ಹಳ್ಳಿಯ ಮಕ್ಕಳಿಗೆ ಪಾಠ ಮಾಡಲು ಆರಂಭಿಸಿದರಲ್ಲದೇ ಸ್ಥಳೀಯ ನಿವಾಸಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದರು. ಧಿಮಾರ್ಪುರ ಎಂಬ ಆ ಹಳ್ಳಿಗೆ ಈಗ ಅವರದೇ ಹೆಸರಿಡಲಾಗಿದ್ದು, ಅದೀಗ ಆಜಾದ್ಪುರ ಎಂಬ ಹೆಸರನ್ನು ಹೊಂದಿದೆ. ಝಾನ್ಸಿಯಲ್ಲಿ ದಂಡುಪ್ರದೇಶದಲ್ಲಿರುವ ಸಾದರ್ ಬಜಾರ್ ಎಂಬಲ್ಲಿದ್ದ ಬುಂದೇಲ್ಖಂಡ್ ಮೋಟಾರ್ ಗ್ಯಾರೇಜಿನಲ್ಲಿ ಅವರು ಕಾರನ್ನು ಚಲಾಯಿಸಲು ಕಲಿತರು.
ಸದಾಶಿವರಾವ್ ಮಲ್ಕಾಪುರ್ಕರ್, ವಿಶ್ವನಾಥ್ ವೈಶಂಪಾಯನ್, ಭಗವಾನ್ ದಾಸ್ ಮಾಹೌರ್ರವರುಗಳನ್ನು ಝಾನ್ಸಿಯಲ್ಲಿಯೇ ಅವರು ಭೇಟಿಯಾಗಿದ್ದು, ತದನಂತರ ಇವರುಗಳೆಲ್ಲಾ ಅವರ ಕ್ರಾಂತಿಕಾರಿ ತಂಡದ ಅವಿಭಾಜ್ಯ ಅಂಗವಾದರು. ಝಾನ್ಸಿ ಮೂಲದ ಆಗಿನ ಕಾಂಗ್ರೆಸ್ ಪಕ್ಷದ ನಾಯಕರುಗಳಾದ ಪಂಡಿತ್ ರಘುನಾಥ್ ವಿನಾಯಕ್ ಧುಲೇಕರ್ ಮತ್ತು ಪಂಡಿತ್ ಸೀತಾರಾಮ್ ಭಾಸ್ಕರ್ ಭಾಗವತ್ರವರುಗಳು ಕೂಡಾ ಚಂದ್ರಶೇಖರ ಆಜಾದ್ರ ನಿಕಟ ಸಹಾಯಕರಾಗಿದ್ದರು.
1931ರ ವೇಳೆಗೆ ಆಜಾದರು ಅಲಹಾಬಾದ್ನಲ್ಲಿ ವಾಸಿಸುತ್ತಿದ್ದರು. 27 ಫೆಬ್ರವರಿ 1931ರಂದು, ಪೊಲೀಸ್ ಮಾಹಿತಿದಾರರು ಆಜಾದ್ ಮತ್ತು ಸುಖ್ದೇವ್ ರವರು ಆಲ್ಫ್ರೆಡ್ ಉದ್ಯಾನದಲ್ಲಿ ಕೆಲ ಯೋಜನೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದುದನ್ನು ಗಮನಿಸಿ ಬ್ರಿಟಿಷ್ ಆಡಳಿತದ ಗಮನಕ್ಕೆ ತಂದರು.
ಕೆಲವೇ ನಿಮಿಷಗಳಲ್ಲಿ ನೂರಾರು ಪೊಲೀಸರು  ಇಡೀ ಉದ್ಯಾನವನ್ನು ಸುತ್ತುವರೆದು ಅವರನ್ನು ಸೆರೆ ಹಿಡಿಯಲು ಮುಂದಾದರು.
ಜಾಗೃತರಾದ ಇಬ್ಬರೂ  ಪ್ರತಿರೋಧ ತೋರಿದರು.
ಹೋರಾಟದ ಆರಂಭದಲ್ಲಿಯೇ, ಆಜಾದರ ತೊಡೆಗೆ ಗುಂಡು ತಗುಲಿ ಗಾಯವಾಯಿತಾದ್ದರಿಂದ ಅವರಿಗೆ ತಪ್ಪಿಸಿಕೊಳ್ಳಲು ಕಷ್ಟಸಾಧ್ಯವಾಗಿತ್ತು. ಆದರೆ ಅವರು ಸುಖ್ದೇವ್ ರವರು ತಪ್ಪಿಸಿಕೊಳ್ಳಲು ಅವಕಾಶವಾಗುವಂತೆ ಅವರಿಗೆ ರಕ್ಷಣೆಯನ್ನು ಒದಗುವಂತೆ ಗುಂಡುಹಾರಿಸತೊಡಗಿದರು. ಸುಖ್ದೇವ್ರವರು ತಪ್ಪಿಸಿಕೊಂಡ ನಂತರ ಆಜಾದರು ಸಾಕಷ್ಟು ಹೊತ್ತಿನವರೆಗೆ ಪೊಲೀಸರು ಮೇಲೆರಗದಂತೆ ಹೋರಾಟ ಮಾಡಿದರು.  
ಅಂತಿಮವಾಗಿ, ಸಂಪೂರ್ಣವಾಗಿ ಸುತ್ತುವರೆಯಲ್ಪಟ್ಟು ಪೋಲೀಸರ ಸಂಖ್ಯಾಬಲವು ಹೆಚ್ಚುತ್ತಲೇ ಇತ್ತು.
ಏಕಾಂಗಿ ಹೋರಾಟ ವ್ಯರ್ಥ ಎಂಬ ಅರಿವು ಆಜಾದ್ ರವರಿಗೆ ಆಗಿತ್ತು. ಅವರ ಪಿಸ್ತೂಲಿನಲ್ಲಿ ಒಂದೇ ಒಂದು ಗುಂಡು ಉಳಿದಿರುವುದು ಗಮನಕ್ಕೆ ಬಂದು  ಬ್ರಿಟಿಷರಿಗೆ ಶರಣಾಗುವ ಬದಲಿಗೆ ತಮ್ಮ ಮೇಲೆಯೇ ಗುಂಡು ಹಾರಿಸಿಕೊಂಡು ಪ್ರಾಣಾರ್ಪಣೆ ಮಾಡಿಕೊಂಡು ತಮ್ಮನ್ನು ಜೀವಂತವಾಗಿ ಯಾರೂ ಸೆರೆಹಿಡಿಯಲಾರರೆಂಬ ತಮ್ಮ ಪ್ರತಿಜ್ಞೆಯನ್ನು ಕಾಪಾಡಿಕೊಂಡರು.

ಸಿಹಿಜೀವಿ ಸಿ ಜಿ ವೆಂಕಟೇಶ್ವರ
ತುಮಕೂರು.
9900925529