09 ಆಗಸ್ಟ್ 2023

ಆಗಸ್ಟ್ ಮಾಸದ ನೆನಪುಗಳು... ಭಾಗ _9 ಕ್ವಿಟ್ ಇಂಡಿಯಾ ಚಳುವಳಿ...

 

ಆಗಸ್ಟ್ ಮಾಸದ ನೆನಪುಗಳು...

ಭಾಗ _9
ಕ್ವಿಟ್ ಇಂಡಿಯಾ ಚಳುವಳಿ...

ನೂರಾರು ವರ್ಷಗಳ ಕಾಲದ
ಬಳಿಕ ಸ್ವಾತಂತ್ರ್ಯ ಹೋರಾಟಕ್ಕೆ
ದೊರಕಿತು ಸರಿಯಾದ ಹಳಿ|
ಅದುವೆ ಮಾಡು ಇಲ್ಲವೇ ಮಡಿ
ಎಂಬ ಘೋಷಣೆ ಮೊಳಗಿಸಿದ
ಕ್ವಿಟ್ ಇಂಡಿಯಾ ಚಳುವಳಿ||

ಅಹಿಂಸಾ ತತ್ವಗಳನ್ನು ಪಾಲಿಸುವ ಶಾಂತಿದೂತನಿಗೆ ಸಿಟ್ಟು ಬಂದಾಗ ಏನಾಗುತ್ತದೆ ಎಂಬುದಕ್ಕೆ ಉದಾಹರಣೆ  ಕ್ವಿಟ್ ಇಂಡಿಯಾ ಚಳುವಳಿ!  ಗುಲಾಮಗಿರಿಯ ಸಂಕೋಲೆ ಬಿಡಿಸಲು  ಮೊದಲಿನಿಂದಲೂ ಶಾಂತಿಯುತ ಪ್ರತಿಭಟನೆಗಳನ್ನು ಹಮ್ಮಿಕೊಂಡು ಬ್ರಿಟಿಷರ ಗಮನ ಸೆಳೆದ ಮಹಾತ್ಮ ಗಾಂಧೀಜಿಯವರು ಆಗಸ್ಟ್ 9 ರಂದು "ಮಾಡು ಇಲ್ಲವೇ ಮಡಿ" ಕರೋ ಯಾ ಮರೋ" ಎಂದು ಘರ್ಜಿಸಿ "ಬ್ರಿಟಿಷರೆ ಭಾರತ ಬಿಟ್ಟು ತೊಲಗಿ "ಎಂಬ  ನೇರ ಸಂದೇಶ ರವಾನಿಸಿದರು. ಆ ದಿನದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರ ದಿನವನ್ನು "ಕ್ವಿಟ್ ಇಂಡಿಯಾ ದಿನ " ವಾಗಿ ದೇಶಾದ್ಯಂತ ಆಚರಿಸುತ್ತೇವೆ.

1600 ರಲ್ಲಿ ವ್ಯಾಪಾರಕ್ಕೆ ಬಂದ ಆಂಗ್ಲರು ಕ್ರಮೇಣ ನಮ್ಮನ್ನು ಆಳಲು ಶುರು ಮಾಡಿದಾಗ ಅಲ್ಲಲ್ಲಿ ನಡೆದ ಕೆಲ  ಪ್ರತಿರೋಧಗಳು 1857 ರಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ರೂಪ ಪಡೆದ ಬ್ರಿಟಿಷರನ್ನು ನಡುಗಿಸಿದ್ದು ಸುಳ್ಳಲ್ಲ.ಇದರಿಂದ ಪ್ರೇರಣೆಗೊಂಡ ಭಾರತೀಯರು ಅಸಹಕಾರ ಚಳವಳಿ, ಕಾನೂನು ಭಂಗ ಚಳುವಳಿಗಳನ್ನು ಸಂಘಟಿಸಿದರು. ಆದರೂ ಬಗ್ಗದ ಆಂಗ್ಲರಿಗೆ 1948 ರ ಜುಲೈ 14 ರಂದು
ಖಡಕ್ ಸಂದೇಶ ಹೊರಡಿಸಿದ ಕಾಂಗ್ರೆಸ್ ಪಕ್ಷವು ಬ್ರಿಟನ್ನಿನಿಂದ ಸಂಪೂರ್ಣ ಸ್ವಾತಂತ್ರ್ಯಕ್ಕಾಗಿ ಗೊತ್ತುವಳಿ ಹೊರಡಿಸಿತು. ಈ ಬೇಡಿಕೆ ನೆರವೇರದಿದ್ದರೆ, ಅಸಹಕಾರ ಚಳುವಳಿಯನ್ನು ನಡೆಸುವುದಾಗಿಯೂ ಘೋಷಿಸಲಾಯಿತು. ಆದರೆ ಪಕ್ಷದಲ್ಲಿಯೇ ಹಲವಾರು ನಾಯಕರು ಇದನ್ನು ವಿರೋಧಿಸಿದರು. ಚಕ್ರವರ್ತಿ ರಾಜಗೋಪಾಲಾಚಾರಿಯವರು ಈ ಕಾರಣದಿಂದ ಹಲವಾರು ಪ್ರಾದೇಶಿಕ ನಾಯಕರುಗಳೊಂದಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದರು. ಜವಾಹರಲಾಲ್ ನೆಹರು ಮತ್ತು ಮೌಲಾನಾ ಆಜಾದ್ ಈ ಗೊತ್ತುವಳಿಯನ್ನು ಟೀಕಿಸದರೂ ಕೂಡ ತಮ್ಮ ಬೆಂಬಲ ಸೂಚಿಸಿ ಗಾಂಧೀಜಿಯ ನಾಯಕತ್ವದಲ್ಲಿ ವಿಶ್ವಾಸ ಸೂಚಿಸಿದರು. ಸರ್ದಾರ್ ಪಟೇಲ್ ಮತ್ತು ಡಾ. ರಾಜೇಂದ್ರ ಪ್ರಸಾದ್ ಈ ನಿಲುವಳಿಯನ್ನು ಬಹಿರಂಗವಾಗಿ ಬೆಂಬಲಿಸಿದರು.

ಆದರೆ ಬೇರೆ ಪಕ್ಷಗಳು ಇದಕ್ಕೆ ಸಹಮತ ಸೂಚಿಸಲಿಲ್ಲ. ಭಾರತೀಯ ಕಮ್ಯೂನಿಸ್ಟ್ ಪಕ್ಷ ಮತ್ತು ಹಿಂದೂ ಮಹಾಸಭಾ ಇದನ್ನು ವಿರೋಧಿಸಿದವು. ಮೊಹಮ್ಮದ್ ಅಲಿ ಜಿನ್ನಾರ ವಿರೋಧದ ಕಾರಣ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿ ಬ್ರಿಟಿಷರ ಪರವಾಗಿ ನಿಂತರು. ಇದರಿಂದ ಮುಸ್ಲಿಂ ಲೀಗ್ ಪಕ್ಷಕ್ಕೆ ಪ್ರಾಂತೀಯ ಸರ್ಕಾರಗಳಲ್ಲಿ ಅಧಿಕಾರ ದೊರೆಯಿತು.

  1942ರ  ಆಗಸ್ಟ್ 8   ರಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮುಂಬಯಿ ಅಧಿವೇಶನದಲ್ಲಿ ಭಾರತ ಬಿಟ್ಟು ತೊಲಗಿ  ಎಂಬ ಗೊತ್ತುವಳಿಯನ್ನು ಹೊರಡಿಸಲಾಯಿತು. ಗಾಂಧೀಜಿಯವರು ಮುಂಬಯಿಯ ಗೊವಾಲಿಯ ಮೈದಾನದಲ್ಲಿ ಭಾರತೀಯರಿಗೆ ಅಹಿಂಸಾತ್ಮಕ ಅಸಹಾಕಾರ ಮಾಡುವಂತೆ ಕರೆ ಕೊಟ್ಟರು. ಜನರಿಗೆ ಬ್ರಿಟಿಷ್ ಸರ್ಕಾರವನ್ನು ಅನುಸರಿಸದೇ ಸ್ವತಂತ್ರರಾಗಿ ಬಾಳುವುದಕ್ಕೆ ಕರೆಕೊಟ್ಟರು. ಗಾಂಧೀಜಿಯವರ ಈ ಕರೆಗೆ ಭಾರತೀಯರು ಬೃಹತ್ ಸಂಖ್ಯೆಯಲ್ಲಿ ಓಗೊಟ್ಟರು. ಬೆಂಬಲ ಸೂಚಿಸಿದವರಲ್ಲಿ ಗಾಂಧೀಜಿಯವರ ಅಹಿಂಸಾತ್ಮಕ ತತ್ವದ ವಿರೋಧಿಗಳಾದ ಕ್ರಾಂತಿಕಾರಿಗಳೂ ಸೇರಿದ್ದರು.  

ಬ್ರಿಟಿಷರು ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿಯವರನ್ನು ಬಂಧಿಸಿದರು. ಕಾಂಗ್ರೆಸ್ಸಿನ ಎಲ್ಲ ರಾಷ್ಟ್ರೀಯ ನಾಯಕರನ್ನೂ ಬಂಧಿಸಲಾಯಿತು. ನಂತರ ಕಾಂಗ್ರೆಸ್ ಪಕ್ಷವನ್ನು ನಿಷೇಧಿಸಲಾಯಿತು. ಇದರಿಂದ ಜನರಲ್ಲಿ ವಿರೋಧಿ ಭಾವನೆ ಇನ್ನೂ ಹೆಚ್ಚಾಯಿತು.  ಪಕ್ಷ ನಾಯಕತ್ವದ ಅಭಾವದ ಹೊರತಾಗಿಯೂ ಬೃಹತ್ ಪ್ರಮಾಣದಲ್ಲಿ ವಿರೋಧಿ ಪ್ರದರ್ಶನ ಮತ್ತು ಧರಣಿಗಳು ನಡೆದವು. ಆದರೆ ಎಲ್ಲ ವಿರೋಧಗಳು ಅಹಿಂಸಾತ್ಮಕವಾಗೇನೂ ಉಳಿಯಲಿಲ್ಲ. ಬಾಂಬುಗಳನ್ನು ಸ್ಫೋಟಿಸಲಾಯಿತು, ಸರ್ಕಾರೀ ಕಟ್ಟಡಗಳನ್ನು ಸುಡಲಾಯಿತು, ವಿದ್ಯುತ್ತನ್ನು ನಿಲ್ಲಿಸಲಾಯಿತು, ಮತ್ತು ಸಾರಿಗೆ ಮತ್ತು ಸಂಪರ್ಕಗಳನ್ನು ಸ್ಥಗಿತಗೊಳಿಸಲಾಯಿತು.

ಆದರೆ ಬ್ರಿಟಿಷರು ತ್ವರಿತವಾಗಿ ಪ್ರದರ್ಶನಕಾರರನ್ನು ಬಂಧಿಸಿದರು. ಒಂದು ಲಕ್ಷಕ್ಕಿಂತಲೂ ಹೆಚ್ಚು ಜನರನ್ನು ಬಂಧಿಸಲಾಯಿತು, ಬೃಹತ್ ಪ್ರಮಾಣದಲ್ಲಿ ದಂಡಗಳನ್ನು ವಿಧಿಸಲಾಯಿತು, ಬಾಂಬುಗಳನ್ನು ವಿರೋಧಿಗಳ ಮೇಲೆ ಬಳಸಲಾಯಿತು, ಮತ್ತು ಪ್ರದರ್ಶನಾಕಾರರನ್ನು ಸಾರ್ವಜನಿಕವಾಗಿ ದಂಡಿಸಲಾಯಿತು. ಬಹಳಷ್ಟು ರಾಷ್ಟ್ರೀಯ ನಾಯಕರು ಭೂಗತರಾಗಿ ರೇಡಿಯೋ ಸ್ಟೇಷನ್ ಗಳಿಂದ ಜನರಿಗೆ ಸಂದೇಶ ಕೊಡುತ್ತಿದ್ದರು. ಬ್ರಿಟಿಷರು ಇದರಿಂದ ಎಷ್ಟು ಕಂಗಾಲಾಗಿದ್ದರೆಂದರೆ, ಗಾಂಧೀಜಿ ಮತ್ತು ಇತರ ನಾಯಕರನ್ನು ಬಂಧಿಸಿ ದಕ್ಷಿಣ ಆಫ್ರಿಕಾ ಅಥವಾ ಯೆಮೆನ್ ದೇಶಕ್ಕೆ ಕೊಂಡೊಯ್ಯಲು ಯುದ್ಧನೌಕೆಯನ್ನು ಕರೆಸುವ ಏರ್ಪಾಡು ಮಾಡಲಾಯಿತು. ಆದರೆ ಇದರಿಂದ ಸಂಘರ್ಷಣೆ ಇನ್ನೂ ತೀವ್ರವಾಗುವುದೆಂಬ ಭಯದಿಂದ ಹೀಗೆ ಮಾಡದಿರಲು ನಿರ್ಧಾರ ಮಾಡಲಾಯಿತು. 

ಕಾಂಗ್ರೆಸ್ ಪಕ್ಷದ ನಾಯಕರು ಇಡೀ ಪ್ರಪಂಚದಿಂದ ಮೂರು ವರ್ಷಗಳ ಕಾಲ ಸಂಪರ್ಕ ಕಳೆದುಕೊಂಡರು. ಗಾಂಧೀಜಿಯವರ ಪತ್ನಿ ಕಸ್ತೂರ್ ಬಾ ಗಾಂಧಿ ಮತ್ತು ಕಾರ್ಯದರ್ಶಿ ಮಹಾದೇವ ದೇಸಾಯಿ ಮರಣದ ನಂತರ ಗಾಂಧಿಯವರ ಆರೋಗ್ಯ ಹದಗೆಟ್ಟಿತು. ಇದರ ಹೊರತಾಗಿಯೂ, ಮಹಾತ್ಮಾ ಗಾಂಧಿಯವರು 21 ದಿನಗಳ ಉಪವಾಸವನ್ನು ಕೈಗೊಂಡು ಚಳುವಳಿಯನ್ನು ಮುಂದುವರೆಸಿದರು ಅವರ ಆರೋಗ್ಯ ಇನ್ನೂ ಹದಗೆಟ್ಟ ಕಾರಣ ಬ್ರಿಟಿಷರು ಗಾಂಧಿಯವರನ್ನು ಬಿಡುಗಡೆಗೊಳಿಸಿದರೂ ಕೂಡ, ಅವರು ಕಾಂಗ್ರೆಸ್ ನಾಯಕರ ಬಿಡುಗಡೆಗೆ ಒತ್ತಾಯಿಸಿ ಧರಣಿಯನ್ನು ಮುಂದುವರೆಸಿದರು.

ಕೆಲವು ಚರಿತ್ರೆಕಾರರ ಪ್ರಕಾರ ಈ ಚಳುವಳಿಗೆ ಸೋಲುಂಟಾಯಿತು. ಕಾಂಗ್ರೆಸ್ ಪಕ್ಷವೂ ಕೂಡ ಆಗ ಇದೇ ನಿಲುವನ್ನು ಹೊಂದಿತ್ತು. ಸರ್ಕಾರದ ಕಾರ್ಯವನ್ನು ನಿಲ್ಲಿಸುವ ಇರಾದೆಯಲ್ಲಿ ಸೋಲುಂಟಾದರೂ, ಸರ್ಕಾರಕ್ಕೆ ಇದರಿಂದ ಸಾಕಷ್ಟು ಮುಜುಗರ ಮತ್ತು ಆತಂಕ ಉಂಟಾದವು. ಶೀಘ್ರವಾಗಿ ಸ್ವಾತಂತ್ರ್ಯ ಪಡೆಯುವುದರಲ್ಲಿ ಇದು ವಿಫಲವಾಯಿತು. ಆರಂಭದ ಐದು ತಿಂಗಳಲ್ಲಿಯೇ ಬಹುತೇಕವಾಗಿ ಸ್ತಬ್ಧವಾಯಿತು. ಇದಕ್ಕಿದ್ದ ಒಂದೇ ಕಾರಣವೆಂದರೆ ಸರ್ಕಾರದ ಪರವಾಗಿ ಸೇನೆಗಿದ್ದ ಸ್ವಾಮಿತ್ವ. ಬ್ರಿಟಿಷ್ ಪ್ರಧಾನಮಂತ್ರಿ ಕ್ಲೆಮೆಂಟ್ ಅಟ್ಲೀ ಪ್ರಕಾರ ಈ ಚಳುವಳಿಯ ಕಾಣಿಕೆ ಅತೀ ಕಡಿಮೆಯದ್ದಾಗಿತ್ತು. ಆದರೆ ಭಾರತೀಯ ವಾಯುಪಡೆಯ ಅತೃಪ್ತಿಯನ್ನು ಮುಖ್ಯವಾಗಿ ಉದಾಹರಿಸುತ್ತಾರೆ.

ರಾಷ್ಟ್ರೀಯ ಮಟ್ಟದಲ್ಲಿ ಚಳುವಳಿಗೆ ಯಶಸ್ಸು   ಸಿಗದಿದ್ದರೂ ಸತಾರಾ, ತಲಚೇರ್, ಮತ್ತು ಮಿಡ್ನಾಪುರಗಳಲ್ಲಿ ಬಹು ಯಶಸ್ವಿಯಾಯಿತು. ಮಿಡ್ನಾಪುರದಲ್ಲಿ ಜನರು ಪರ್ಯಾಯ ಸರ್ಕಾರವನ್ನೂ ಸ್ಥಾಪಿಸಿದರು. ನಂತರ ಗಾಂಧೀಜಿಯ ಕರೆಗೆ ಓಗೊಟ್ಟು ಇದನ್ನು ಬಿಟ್ಟುಕೊಟ್ಟರು.

ಕಲ್ಕತ್ತಾ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶರಾದ ಪಿ.ವಿ. ಚಕ್ರಬರ್ತಿಯವರ ಒಂದು ಲೇಖನದ ಪ್ರಕಾರ, "ನಾನು ಪಶ್ಚಿಮ ಬಂಗಾಳದ ರಾಜ್ಯಪಾಲನಾಗಿ 1956ರಲ್ಲಿ ನಿಯುಕ್ತನಾಗಿದ್ದಾಗ ಕ್ಲೆಮೆಂಟ್ ಅಟ್ಲೀಯವರನ್ನು ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಲು ಪ್ರಮುಖ ಕಾರಣವೇನೆಂದು ಕೇಳಿದಾಗ ದೊರೆತ ಉತ್ತರ: 'ಭಾರತ ಬಿಟ್ಟು ತೊಲಗಿ ಚಳುವಳಿ' ಎಂಬ ಉತ್ತರ ಬಂದಿದ್ದು ಈ ಚಳುವಳಿಯ ಯಶಸ್ಸು ತೋರಿಸುತ್ತದೆ"

ಭಾರತದ ಸ್ವಾತಂತ್ರ್ಯದ ನಿಜವಾದ ಕಾರಣ ಭಾರತೀಯರ ವಿರೋಧವೇ ಅಥವಾ ಸೈನಿಕರ ಬಂಡಾಯವೇ ಎಂಬುದು ವಿವಾದಾತ್ಮಕವಾಗಿದ್ದರೂ ನಿಸ್ಸಂಶಯವಾಗಿ ಹೇಳಬಹುದಾದ ಸಂಗತಿಯೆಂದರೆ ಲಕ್ಷಾಂತರ ಜನರು ಪ್ರೇರಿತರಾಗಿ ಸ್ವಾತಂತ್ರಕ್ಕಾಗಿ  ಹೋರಾಡಿದರೆಂಬುದು. ಬ್ರಿಟಿಷರ ಪ್ರತಿಯೊಂದು ನಡೆಯೂ ಇದನ್ನು ಮತ್ತಷ್ಟು ಪ್ರೇರೇಪಿಸಿತು.  ಸುಭಾಷ್ ಚಂದ್ರ ಬೋಸ್ ರ ಭಾರತೀಯ ರಾಷ್ಟ್ರೀಯ ಸೇನೆ ಮತ್ತು ಮುಂಬಯಿ ದಂಗೆ ಬ್ರಿಟಿಷ್ ಆಡಳಿತದ ಬುಡವನ್ನು ಅಲುಗಾಡಿಸಿದವು.  1946ರ ವೇಳೆಗೆ ಎಲ್ಲ ಬಂಧಿತ ರಾಜಕೀಯ ಅಪರಾಧಿಗಳನ್ನು ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟಕೊಡುವ   ಬಗ್ಗೆ ಸಾರ್ವಜನಿಕವಾಗಿ ಮಾತುಕತೆಗಳು ನಡೆದವು. 1947 ರ ಆಗಸ್ಟ್‌ 15 ರಂದು ಭಾರತವನ್ನು ಸ್ವತಂತ್ರ ದೇಶವೆಂದು ಘೋಷಿಸಲಾಯಿತು.

ಒಂದು ಹೊಸ ಯುವ ಪೀಳಿಗೆಯು ಗಾಂಧೀಜಿಯವರ ಕರೆಗೆ ಓಗೊಟ್ಟಿತ್ತು. ಈ ಚಳುವಳಿಯಲ್ಲಿ ಹೋರಾಡಿದ ಭಾರತೀಯರು ಸ್ವತಂತ್ರ ಭಾರತದ ಪ್ರಥಮ ಪೀಳಿಗೆಯವರಾಗಿ ವಸಾಹತುಶಾಹಿ ಕಾಲದ ನಂತರ ಪ್ರಪಂಚದ ಅತಿ ಗಟ್ಟಿಯಾದ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಇದನ್ನು ಮಾನವಕುಲದ ದೂರದರ್ಶಿತ್ವದ ಮಹತ್ತರ ಉದಾಹರಣೆಯೆಂದು ಹೇಳಬಹುದು.

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529.


ಸಿಹಿಜೀವಿಯ ಹಾಯ್ಕುಗಳು...

 


ಸಿಹಿಜೀವಿಯ ಹಾಯ್ಕುಗಳು..



ಅರ್ಥ ಮಾಡಿಕೋ 

ಕೌತುಕವು ಈ ಜಗ 

ಸರ್ವವೂ ಭಿನ್ನ .


ಅಜ್ಞಾನ ತೊರೆ 

ಕೌಶಲಗಳ  ಪಡೆ 

ಜೀವನ ಧನ್ಯ 


ಸಿಹಿಜೀವಿ ವೆಂಕಟೇಶ್ವರ

ತುಮಕೂರು

08 ಆಗಸ್ಟ್ 2023

ಆಗಸ್ಟ್ ಮಾಸದ ನೆನಪುಗಳು... ಭಾಗ _8 ಲಾಲಾ ಲಜಪತ ರಾಯ್...


 

ಆಗಸ್ಟ್ ಮಾಸದ ನೆನಪುಗಳು...

ಭಾಗ _8

ಲಾಲಾ ಲಜಪತ ರಾಯ್...

ಲಾಲ್ ಬಾಲ್ ಪಾಲ್ ತ್ರಿಮೂರ್ತಿಗಳು ಆಂಗ್ಲರ ನಿದ್ದೆಗೆಡಿಸಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು. ಈ ತ್ರಿಮೂರ್ತಿಗಳಲ್ಲಿ ಒಬ್ಬರು ಬ್ರಿಟಿಷರ ದುರಾಡಳಿತ ವಿರುದ್ಧವಾಗಿ ಸ್ವಾತಂತ್ರ್ಯ ಪಡೆಯುವ ಅದಮ್ಯ ಬಯಕೆಯೊಂದಿಗೆ  ಹೋರಾಟ ಮಾಡುವಾಗ ಬ್ರಿಟಿಷ್ ಅಧಿಕಾರಿಯ   ಲಾಟಿ ಏಟಿನಿಂದ  ಅಸುನೀಗಿದರು. ಆ  ಹಾನ್ ಚೇತನವೇ  ಲಾಲಾ ಲಜಪತ ರಾಯ್. 

ಲಾಲಾ ಲಜಪತ ರಾಯ್ ಅವರು ಪಂಜಾಬಿನ ಮೋಗಾ ಜಿಲ್ಲೆಗೆ ಸೇರಿದ ಧುಡಿಕೆ ಎಂಬ ಗ್ರಾಮದಲ್ಲಿ ಜನವರಿ 28, 1865ರಲ್ಲಿ  ಜನಿಸಿದರು. ‘ಲಾಲಾ’ ಎಂಬುದು ಭಾರತೀಯ ಸಂಸ್ಕೃತಿಯಲ್ಲಿ ಹಿರಿಯ ಮನೆತನದಿಂದ ಬಂದವರಿಗೆ ಸಲ್ಲುತ್ತಿದ್ದ ಗೌರವಯುತ ಸಂಬೋಧನೆ. ರಾಯ್ ಅವರ ಪ್ರಾರಂಭಿಕ ಶಿಕ್ಷಣ ಪ್ರಸಕ್ತದಲ್ಲಿ ಹರ್ಯಾಣದಲ್ಲಿರುವ ರೆವಾರಿ ಎಂಬ ಊರಿನಲ್ಲಾಯಿತು. ಲಜಪತ ರಾಯ್ ಅವರ ತಂದೆ ರಾಧಾ ಕೃಷ್ಣನ್ ಅವರು ಅಂದಿನ ದಿನಗಳಲ್ಲಿ ಉರ್ದು ಶಿಕ್ಷಕರಾಗಿದ್ದರು.
ಹಿಂದೂ ಧರ್ಮ ಮತ್ತು ಮನುಸ್ಮೃತಿಗಳಿಂದ ತೀವ್ರ ಪ್ರಭಾವಿತರಾದ ಲಾಲಾ ಲಜಪತ ರಾಯ್ ಅವರು ರಾಜಕೀಯ ಹೋರಾಟ ಮತ್ತು ಬರವಣಿಗೆಗಳ ಕಡೆಗೆ ಅಪಾರ ಒಲವು ಬೆಳೆಸಿಕೊಂಡರು. ಹಿಂದೂ ಮಹಾಸಭಾದ ಕಾರ್ಯಕರ್ತರಾಗಿದ್ದ ಅವರು, ಹಿಂದೂ ಧರ್ಮದಲ್ಲಿ ಶಾಂತಿಯುತ ಹೋರಾಟಕ್ಕೆ ಮಹತ್ವವಿದೆ ಎಂದು ನಂಬಿದ್ದರು. ಇದೇ ಆಧಾರದ ಮೇಲೆ ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಶಾಂತಿಯುತ ಚಳುವಳಿಗಳನ್ನು ಆಯೋಜಿಸತೊಡಗಿದರು.

ಆರ್ಯ ಸಮಾಜದಲ್ಲಿ ನಿಷ್ಠೆ ಹೊಂದಿದ್ದ ಅವರು ತಾವು ವಿದ್ಯಾರ್ಥಿಯಾಗಿದ್ದಾಗ  ‘ಆರ್ಯ ಗೆಜೆಟ್’ನ ಸಂಪಾದಕರಾಗಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದ ಮೇಲೆ ಅವರು ಪಂಜಾಬಿನಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಪ್ರಾರಂಭಿಸಿದರು. ಇದರಿಂದಾಗಿ ಬ್ರಿಟಿಷ್ ಆಡಳಿತ ಅವರನ್ನು ಬರ್ಮಾದ ಮಂಡಾಲೈ ಎಂಬಲ್ಲಿಗೆ ಗಡೀಪಾರು ಮಾಡಿತ್ತು. ಕೆಲವು ತಿಂಗಳ ನಂತರದಲ್ಲಿ ಲಾರ್ಡ್ ಮಿಂಟೋ ಅವರಿಗೆ ಲಾಲಾ ಲಜಪತ ರಾಯ್ ಅವರ ವಿರುದ್ಧ ಇರುವ ಆರೋಪಗಳಿಗೆ ಸರಿಯಾದ ಸಾಕ್ಷಾಧಾರಗಳಿಲ್ಲ ಎನಿಸಿ ಭಾರತಕ್ಕೆ ಹಿಂದಿರುಗಲು ಪರವಾನಗಿ ನೀಡಿದರು. 

1907ರಲ್ಲಿ ಅಮೆರಿಕಕ್ಕೆ ತೆರಳಿದ್ದ ಲಾಲಾ ಲಜಪತ್ ರಾಯ್ ಅವರು 1919ರಲ್ಲಿ ಭಾರತಕ್ಕೆ ಹಿಂದಿರುಗಿದರು. ಅವರು ರಚಿಸಿರುವ ಪ್ರವಾಸಿ ಕಥನದಲ್ಲಿ ಪ್ರಸಿದ್ಧ ಬರಹಗಾರರಾದ ಡಬ್ಲ್ಯೂ. ಇ. ಬಿ. ಡುಬೋಯಿಸ್ ಮತ್ತು ಫ್ರೆಡ್ರಿಕ್ ಡೌಗ್ಲಾಸ್ ಮುಂತಾದವರ ಅನೇಕ ಉಕ್ತಿಗಳನ್ನು ಯಥೇಚ್ಛವಾಗಿ ಉಲ್ಲೇಖಿಸಿದ್ದಾರೆ. ಲಜಪತ ರಾಯ್ ಅವರು ಲಾಹೋರಿನಲ್ಲಿ ಬ್ರಿಟಿಷ್ ವಿದ್ಯಾಸಂಸ್ಥೆಗಳಿಗೆ ಪರ್ಯಾಯವಾಗಿ ನ್ಯಾಷನಲ್ ಕಾಲೇಜು  ಪ್ರಾರಂಭಿಸಿದಾಗ ಅದರಲ್ಲಿ ಭಗತ್ ಸಿಂಗ್ ಅವರೂ ವಿದಾರ್ಥಿಯಾಗಿದ್ದರು.  1920ರಲ್ಲಿ  ಕಲ್ಕತ್ತಾದಲ್ಲಿ ನಡೆದ ವಿಶೇಷ ಕಾಂಗ್ರೆಸ್ ಅಧಿವೇಶನದಲ್ಲಿ ಲಾಲಾ ಲಜಪತ ರಾಯ್ ಆ ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಅಧಿವೇಶನದಲ್ಲಿ ಕೈಗೊಂಡ ನಿರ್ಣಯದ ಅನುಸಾರವಾಗಿ ಅಸಹಕಾರ ಚಳುವಳಿಯನ್ನು ಕೈಗೊಂಡಾಗ 1921ರಿಂದ 1923ರ ಅವಧಿಯವರೆಗೆ ಅವರು ಕಾರಾಗೃಹ ವಾಸವನ್ನು ಅನುಭವಿಸಿದರು. ಬಿಡುಗಡೆಯಾದ ಸಂದರ್ಭದಲ್ಲಿ ಅವರು ಲೆಜಿಸ್ಲೇಟಿವ್ ಅಸೆಂಬ್ಲಿಗೆ ಚುನಾಯಿತರಾದರು. ಪಂಜಾಬಿನ ವಿಭಜನೆಗೆ ಅವರು ಮಾತುಕತೆಗಳನ್ನು ಆಯೋಜಿಸಿದರು. ಈ ಕುರಿತು ಅವರು 1924ರ ವರ್ಷದಲ್ಲಿ ‘ದಿ ಟ್ರಿಬ್ಯೂನ್ ಪತ್ರಿಕೆಯಲ್ಲಿ ಬರೆದ ಲೇಖನದಲ್ಲಿ ಸಿಖ್ ಮತ್ತು ಮುಸ್ಲಿಂ ಜನಸಂಖ್ಯೆಯನ್ನು ಆಧರಿಸಿ ಪಂಜಾಬನ್ನು ಪೂರ್ವ ಮತ್ತು ಪಶ್ಚಿಮ ಪಂಜಾಬುಗಳಾಗಿ ವಿಂಗಡಿಸಬೇಕೆಂಬ ವಾದವನ್ನು ಮಂಡಿಸಿದರು. ಅದೇ ರೀತಿಯಲ್ಲಿ ಅವರು ವಾಯವ್ಯ ಸೀಮಾ ಪ್ರದೇಶ, ಸಿಂದ್ ಮತ್ತು ಪೂರ್ವ ಬಂಗಾಳಗಳಲ್ಲಿ ಮುಸ್ಲಿಂ ರಾಜ್ಯಗಳನ್ನು ಪ್ರತ್ಯೇಕಿಸಬೇಕೆಂದು ಪ್ರತಿಪಾದಿಸಿದ್ದರು.

1928ರಲ್ಲಿ  ಭಾರತದಲ್ಲಿನ ಪರಿಸ್ಥಿತಿಯನ್ನು ವರದಿ ಮಾಡಲು ನಿಯೋಜನೆಗೊಂಡಿದ್ದ  ಸರ್ ಜಾನ್ ಸೈಮನ್ ನೇತೃತ್ವದ ಆಯೋಗದಲ್ಲಿ ಒಬ್ಬರೇ ಒಬ್ಬರೂ ಭಾರತೀಯ ಪ್ರತಿನಿಧಿಗಳು ಇರಲಿಲ್ಲ ಎಂಬ ನಿಟ್ಟಿನಲ್ಲಿ ಭಾರತೀಯ ಸಂಘಟನೆಗಳು ಅದನ್ನು ಬಹಿಷ್ಕರಿಸಲು ತೀರ್ಮಾನ ಕೈಗೊಂಡು ದೇಶದಾದ್ಯಂತ ಚಳುವಳಿಯನ್ನು ನಡೆಸಿದವು. ಅಕ್ಟೋಬರ್ 30, 1928ರಂದು ಸೈಮನ್ ಆಯೋಗವು ಲಾಹೋರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಲಾಲಾ ಲಜಪತರಾಯ್ ಅವರು ಶಾಂತಿಯುತ ಮೆರವಣಿಗೆಯ ನೇತೃತ್ವ ವಹಿಸಿದರು. ಆ ಸಂದರ್ಭದಲ್ಲಿ ಪೋಲಿಸ್ ಸೂಪರಿಂಟೆಂಡೆಂಟ್ ಜೇಮ್ಸ್ ಎ. ಸ್ಕಾಟ್ ಎಂಬ ದುರಹಂಕಾರಿಯು ಮೆರವಣಿಗೆಯಲ್ಲಿ ಹೋಗುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡುವ ಆದೇಶವಿತ್ತದ್ದೇ ಅಲ್ಲದೆ ಲಾಲಾ ಲಜಪತ ರಾಯ್ ಅವರ ಮೇಲೆ ಸ್ವಯಂ ಆಕ್ರಮಣ ನಡೆಸಿ ಅವರು ತೀವ್ರವಾಗಿ ಗಾಯಗೊಳ್ಳುವುದಕ್ಕೆ ಕಾರಣನಾದನು. ಈ ತೀವ್ರ ಪೆಟ್ಟುಗಳಿಂದ ಹೊರಬರಲಾಗದ ಲಾಲಾ ಲಜಪತ ರಾಯ್ ಅವರು ನವೆಂಬರ್ 17, 1928ರಂದು ಹೃದಯಾಘಾತದಿಂದ ನಿಧನರಾದರು. ಸ್ಕಾಟನ ಈ ದುಷ್ಕೃತ್ಯ ಮಹಾನ್ ದೇಶಭಕ್ತ, ವಿದ್ವಾಂಸ, ಅಹಿಂಸಾ ಪ್ರವೃತ್ತಿಯ ಶಾಂತಿದೂತರೆನಿಸಿದ್ದ ಲಾಲಾ ಲಜಪತ ರಾಯ್ ಅವರ ಮರಣಕ್ಕೆ ಕಾರಣವಾಯಿತು. ಇದರಿಂದ ತೀವ್ರವಾಗಿ ನೊಂದ ಭಗತ್ ಸಿಂಗ್, ರಾಜ ಗುರು, ಸುಖದೇವ್ ಥಾಪರ್, ಚಂದ್ರಶೇಖರ್ ಆಜಾದ್ ಅಂತಹ ವೀರರು ತೀವ್ರ ಹೋರಾಟಕ್ಕಿಳಿದು ರಾಷ್ಟ್ರ ಸ್ವಾತಂತ್ರ್ಯ ಪಡೆಯಲು ಕಾರಣವಾಯಿತು.

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529

06 ಆಗಸ್ಟ್ 2023

ಆಗಸ್ಟ್ ಮಾಸದ ನೆನಪುಗಳು... ಭಾಗ _7 ಮದನ ಮೋಹನ ಮಾಳವೀಯ


 

ಆಗಸ್ಟ್ ಮಾಸದ ನೆನಪುಗಳು...

ಭಾಗ _7

ಮದನ ಮೋಹನ ಮಾಳವೀಯ

ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣತಜ್ಞ, ಬಹುಮುಖ ವ್ಯಕ್ತಿತ್ವದ ಪ್ರತಿಭೆ , ಸ್ವಾತಂತ್ರ್ಯ ಹೋರಾಟದ ವೇಳೆ ಸೌಮ್ಯವಾದಿಗಳು ಮತ್ತು ತೀವ್ರವಾದಿಗಳ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸಿದವರು,ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸ್ಥಾಪಿಸಿದವರೇ ಮದನ ಮೋಹನ ಮಾಳವೀಯ. 
ಮಾಳವೀಯರು 1861 ನೇ ಡಿಸೆಂಬರ್ 25 ಅಲಹಾಬಾದ್ ನಲ್ಲಿ  'ಶ್ರೀ ಗೌಡ್ ಬ್ರಾಹ್ಮಣ ಕುಟುಂಬ'ದಲ್ಲಿ ಜನಿಸಿದರು. ಅವರ ತಂದೆ 'ಪಂಡಿತ್ ಬ್ರಿಜ್ ನಾಥ್', ಮತ್ತು ತಾಯಿ 'ಮೂನಾ ದೇವಿ'. ಮೂಲತಃ ಅವರು ಮಧ್ಯಪ್ರದೇಶದ 'ಮಾಲ್ವಾ'ದವರು. ಅವರ ಪೂರ್ವಜರು ಸಂಸ್ಕೃತ ಪಾಂಡಿತ್ಯದಲ್ಲಿ ಹೆಸರುವಾಸಿಯಾಗಿದ್ದರು.

ಮಾಳವೀಯ  ರವರು ಸಾಂಪ್ರದಾಯಿಕವಾಗಿ ಎರಡು ಸಂಸ್ಕೃತ ಪಾಠಶಾಲೆಯಲ್ಲಿ ವ್ಯಾಸಂಗ ಮಾಡಿದರು. ನಂತರ ಒಂದು ಇಂಗ್ಲೀಷ್ ಶಾಲೆಯಲ್ಲಿ ಶಿಕ್ಷಣ ಮುಂದುವರಿಸಿದರು.   ತಮ್ಮ ಪ್ರಾಥಮಿಕ ಶಿಕ್ಷಣವನ್ನು 'ಹರದೇವ ಧರ್ಮ ಜ್ಞಾನೋಪದೇಶ ಪಾಠಶಾಲೆ'ಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದರು. ನಂತರ  'ವಿದ್ಯಾವರ್ಧಿನಿ ಸಭಾ ಶಾಲೆ'ಯಲ್ಲಿ ಓದು ಮುಂದುವರೆಸಿದರು. ಅನಂತರ ಅಲಹಾಬಾದ್ ಜಿಲ್ಲಾ ಶಾಲೆಗೆ ಸೇರಿದರು. ಅಲ್ಲಿದ್ದಾಗ ಮಕರಂದ್ ಕಾವ್ಯನಾಮದ ಅಡಿಯಲ್ಲಿ ಕವನಗಳನ್ನು ಬರೆಯಲು ಪ್ರಾರಂಭಿಸಿದರು.

ಅವು ನಂತರದಲ್ಲಿ ಪತ್ರಿಕೆಗಳಲ್ಲಿ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡವು.  ಅಲಹಾಬಾದ್ ವಿಶ್ವವಿದ್ಯಾಲಯದ 'ಮುಯಿರ್ ಸೆಂಟ್ರಲ್ ಕಾಲೇಜ್‍'ನಲ್ಲಿ 1879 ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದರು. ಆಗ 'ಹ್ಯಾರಿಸನ್ ಕಾಲೇಜ್`ನ ಪ್ರಾಂಶುಪಾಲರು ಅವರ ಕುಟುಂಬದ ಆರ್ಥಿಕ ಕಷ್ಟಗಳನ್ನು ಎದುರಿಸುತ್ತಿರುವುದನ್ನು ನೋಡಿ, ಮಾಳವೀಯರಿಗೆ ಒಂದು 'ಮಾಸಿಕ ವಿದ್ಯಾರ್ಥಿವೇತನ' ಒದಗಿಸಿದರು. ತಮ್ಮ 'ಬಿಎ ಪದವಿ'ಯನ್ನು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದರು. ಅವರಿಗೆ ಸಂಸ್ಕೃತ ಎಂ.ಎ. ಮಾಡುವ ಆಸೆ ಇತ್ತು. ಆದಾಗ್ಯೂ ತನ್ನ ಕುಟುಂಬ ಪರಿಸ್ಥಿತಿಗಳು ಮತ್ತು ತನ್ನ ತಂದೆ ಅವರ ಕುಟುಂಬ ನಿರ್ವಹಣೆಗೆ ಭಾಗವತ ಕಥಾ ನಿರೂಪಣೆಯ ವೃತ್ತಿ ಪಡೆಯಲು ಬಯಸಿದರು. 1884 ರಲ್ಲಿ  ಅಲಹಾಬಾದ್ನಲ್ಲಿ ಸರ್ಕಾರದ ಪ್ರೌಢಶಾಲೆಯಲ್ಲಿ  ಶಿಕ್ಷಕನಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು.ಆದರೆ  ವಿದ್ಯಾಭ್ಯಾಸ ಮುಂದುವರಿಸುವ ದೃಷ್ಟಿಯಿಂದಾಗಿ ಅವರು ವೃತ್ತಿ ಯನ್ನು ತೊರೆದರು. ಬಳಿಕ ಕಾನೂನು ಕಲಿತ ಮಾಳವೀಯರು ಜಿಲ್ಲಾ ನ್ಯಾಯಾಲಯದಲ್ಲಿ ವಕೀಲಿ ವೃತ್ತಿಯನ್ನೂ ನಡೆಸಿದರು.

ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದ ಮಾಳವೀಯ ರವರು 50 ವರ್ಷಗಳ ಕಾಲ ಭಾರತೀಯ ಕಾಂಗ್ರೆಸ್ಸಿನ ಸದಸ್ಯರಾಗಿ ಸ್ವಾತಂತ್ರ್ಯ ಹೋರಾಟಕ್ಕೆ ದಿಗ್ದರ್ಶಕರಾಗಿದ್ದವರು.  ಸ್ವಾತಂತ್ರ್ಯ ಹೋರಾಟಗಾರರಾದ ಗೋಪಾಲ ಕೃಷ್ಣ ಗೋಖಲೆ, ಮತ್ತು ಸಮಾಜ ಸುಧಾರಕರೂ ಆದ 'ಬಾಲಗಂಗಾಧರ ತಿಲಕ'ರ ಅನುಯಾಯಿಯಾಗಿದ್ದರು.
1930 ರಲ್ಲಿ ಮಹಾತ್ಮಾ ಗಾಂಧಿಯವರು ಕರೆ ನೀಡಿದ್ದ ಉಪ್ಪಿನ ಸತ್ಯಾಗ್ರಹ ಮತ್ತು ಕಾನೂನು ಭಂಗ ಚಳವಳಿಯಲ್ಲಿ ಮಾಳವೀಯರು ಸಕ್ರಿಯವಾಗಿ ಭಾಗಿಯಾಗಿದ್ದರು. ಪರಿಣಾಮ ಅವರನ್ನು ಬ್ರಿಟಿಷರು ಬಂಧಿಸಿ ಜೈಲಿಗಟ್ಟಿದರು. ಸ್ವಾತಂತ್ರ್ಯ ಹೋರಾಟಕ್ಕೆ ಮಾಳವೀಯರ ಕೊಡುಗೆಯನ್ನು ಗೋಖಲೆಯವರು ಒಂದೆಡೆ ಹೀಗೆ ನೆನೆಯುತ್ತಾರೆ-'ಮಾಳವೀಯರು ನಿಜವಾದ ತ್ಯಾಗ ಜೀವಿ. ಕೈತುಂಬ ಸಂಬಳ, ಐಷಾರಾಮದ ಜೀವನ ನಡೆಸಬಹುದಾಗಿದ್ದ ಅವರು ದೇಶದ ಕಷ್ಟನಿವಾರಣೆಗೆ ಜೀವನ ಮುಡುಪಿಟ್ಟವರು. ಆದರೆ ಹೋರಾಟದ ಜೀವನ ಅವರನ್ನು ಬಡತನಕ್ಕೆ ನೂಕಿತು."

ಮಾಳವೀಯರು ಪತ್ರಕರ್ತರೂ ಆಗಿದ್ದರು. 1909 ರಲ್ಲಿ ಅಲಹಾಬಾದ್ನಲ್ಲಿ ಇಂಗ್ಲಿಷ್ ಪತ್ರಿಕೆ 'ದಿ ಲೀಡರ್' ಆರಂಭಿಸಿದರು. ಸಮಾಜಪರ, ಸ್ವಾತಂತ್ರ್ಯ ಹೋರಾಟಕ್ಕೆ ಪ್ರೋತ್ಸಾಹಕರವಾದ ವಿಚಾರಗಳನ್ನು ಈ ಪತ್ರಿಕೆಯಲ್ಲಿ ಬರೆಯುತ್ತಿದ್ದರು.  1903 ರಿಂದ 1918 ರವರೆಗೆ ಅಲಹಾಬಾದ್ ನಗರ ಪಾಲಿಕೆಯ ಸದಸ್ಯರಾಗಿ, ಪ್ರಾದೇಶಿಕ ಶಾಸಕಾಂಗ ಸಮಿತಿಯ ಸದಸ್ಯರಾಗಿ ಮಾಳವೀಯರು ಸೇವೆ ಸಲ್ಲಿಸಿದ್ದರು.
1937  ರಲ್ಲಿ ಸಕ್ರಿಯ ರಾಜಕೀಯವರನ್ನು ತೊರೆದ ಅವರು ಬಳಿಕ ಸಮಾಜ ಸುಧಾರಣೆಯತ್ತ ಗಮನ ಕೇಂದ್ರೀಕರಿಸಿದರು. ಮಹಿಳೆಯರ ಶಿಕ್ಷಣ, ವಿಧವಾ ವಿವಾಹ, ಬಾಲ್ಯವಿವಾಹ, ಡಾಂಭಿಕ ಆಚರಣೆಗಳ ವಿರುದ್ಧ ದನಿ ಎತ್ತಿದರು.

ಮಹಾತ್ಮ ಗಾಂಧಿಯವರು ಅತಿ ಹೆಚ್ಚು ಗೌರವ ಹೊಂದಿದ್ದ ಮೂವರಲ್ಲಿ ಮಾಳವೀಯ ಒಬ್ಬರು. ತಿಲಕ್ ಮತ್ತು ಗೋಖಲೆ ಇತರ ಇಬ್ಬರು. ಲಂಡನ್ನಲ್ಲಿ ನಡೆದ ಎರಡನೇ ದುಂಡು ಮೇಜಿನ ಪರಿಷತ್ತಿನಲ್ಲಿ ಗಾಂಧೀಜಿ ಅವರೊಂದಿಗೆ ಭಾಗವಹಿಸಿದ್ದರು. ಖುದ್ದು ಸಂಸ್ಕೃತ ವಿದ್ವಾಂಸರು, ಆದರೆ, ಇಂಗ್ಲಿಷ್ ಮೇಲೆ ಅಷ್ಟೇ ಪ್ರಭುತ್ವ ಹೊಂದಿದವರು. ಅಲ್ಲಿ ನೀಡಿದ ಭಾಷಣದೊಂದಿಗೆ ಬ್ರಿಟಿಷರನ್ನು ಅಚ್ಚರಿಗೊಳಿಸಿದರು. ಆಕ್ಸ್ಫರ್ಡ್, ಕೇಂಬ್ರಿಜ್ನಲ್ಲಿ ಓದದಿದ್ದರೂ ಇಂಗ್ಲಿಷ್ ಮೇಲೆ ಹೊಂದಿರುವ ಹಿಡಿತದ ಬಗ್ಗೆ ಬಹಿರಂಗವಾಗಿ ಪ್ರಶಂಸೆ ವ್ಯಕ್ತಪಡಿಸಿದರಂತೆ ಬ್ರಿಟನ್ನ ರಾಜಕಾರಣಿ ಗಳು. ಭಾರತೀಯ ಶಾಸನಸಭೆಯ ಸದಸ್ಯರಾಗಿದ್ದ ಮಾಳವೀಯ ಅವರು ಜಲಿಯನ್ವಾಲಾಭಾಗ್ ಹತ್ಯಾಕಾಂಡವನ್ನು ಅತ್ಯುಗ್ರವಾಗಿ ಖಂಡಿಸಿದರು.  ಸಂಪ್ರದಾಯಸ್ಥ  ಎನಿಸಿಕೊಂಡರೂ ಬದಲಾವಣೆಗೆ ಸದಾ ತೆರೆದು ಕೊಂಡಿದ್ದರು. ಇದರಿಂದಾಗಿಯೇ ಮಹಾಮನ ಎಂದು ಕರೆಸಿಕೊಂಡಿದ್ದರು.
ಭಾರತ ಸ್ವಾತಂತ್ರ್ಯ ಪಡೆಯುವ ಮುನ್ನವೇ ಅಂದರೆ 1946 ರ ನವೆಂಬರ್ 12 ಮಾನವೀಯ ರವರು   ಇಹಲೊಕ ತ್ಯಜಿಸಿದರು. ಮರಣೋತ್ತರವಾಗಿ ಶ್ರೀಯುತರಿಗೆ  2014  ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ.

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529.

ಸ್ನೇಹಿತರ ದಿನದ ಹಾಯ್ಕುಗಳು..

 *ಹಾಯ್ಕುಗಳು...*



ಜೊತೆಗಿದ್ದರೆ

ಗೆಳೆಯರ ದಂಡು

ಸ್ವರ್ಗವೇತಕೆ 



ನನ್ನ ಸ್ನೇಹಿತ 

ಜೊತೆಗಿದ್ದರೆನಗೆ 

ಅದುವೇ ಹಿತ ...



*ಸಿಹಿಜೀವಿ ವೆಂಕಟೇಶ್ವರ*

ತುಮಕೂರು