14 ಸೆಪ್ಟೆಂಬರ್ 2023

ಪ್ರಜಾಪ್ರಭುತ್ವ ದಿನ... ಸೆಪ್ಟಂಬರ್ 15:


 

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆಪ್ಟೆಂಬರ್ 15



ರಾಜಪ್ರಭುತ್ವ, ನಿರಂಕುಶ ಪ್ರಭುತ್ವ, ಪ್ರಜಾಪ್ರಭುತ್ವ ಹೀಗೆ 
ಪ್ರಪಂಚದಲ್ಲಿ ವಿವಿಧ ರೀತಿಯ ಸರ್ಕಾರಗಳು ಅಸ್ತಿತ್ವದಲ್ಲಿವೆ.ಈ ಎಲ್ಲಾ ಪ್ರಭುತ್ವಗಳಿಗೆ ಹೋಲಿಸಿದರೆ  ಪ್ರಜಾಪ್ರಭುತ್ವ ಉತ್ತಮ ಸರ್ಕಾರ ಪಧ್ಧತಿ ಎಂದು ಎಲ್ಲರೂ ಒಪ್ಪುತ್ತಾರೆ.
ವಿಶ್ವ ಸಂಸ್ಥೆಯ ಸಾಮನ್ಯ ಸಭೆಯು 2007 ರ ಸೆಪ್ಟೆಂಬರ್ 15 ರಂದು ಒಂದು ನಿರ್ಣಯ ಕೈಗೊಳ್ಳುವ ಮೂಲಕ ಪ್ರತಿವರ್ಷವೂ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವವುದು ಈ ದಿನಾಚರಣೆಯ ಪ್ರಮುಖ ಉದ್ದೇಶಗಳಲ್ಲೊಂದು.

ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ. ಹಾಗೂ ಪ್ರಜಾ ಪ್ರಭುತ್ವವನ್ನು ಅಬ್ರಹಾಂ ಲಿಂಕನ್ ರವರು ಹೇಳಿರುವಂತೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಸರಕಾರವೇ ಪ್ರಜಾಪ್ರಭುತ್ವ.ಪುರಾತನ ಕಾಲದಲ್ಲಿ ಗ್ರೀಕ್ ನಗರ ರಾಜ್ಯವಾದ ಆತೆನ್ಸ್ನಲ್ಲಿ ಪ್ರತ್ಯಕ್ಷ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿತ್ತು.  ಅಲ್ಲದೆ ಪ್ರಾಚೀನ ಭಾರತದಲ್ಲಿದ್ದ ಗಣರಾಜ್ಯಗಳ ಬಗ್ಗೆ ಸಾಕಷ್ಟು ಸಂಶೋಧನೆಯಾಗಿದೆ. ಇತರ ಕೆಲವು ದೇಶಗಳಲ್ಲೂ ಇಂಥ ಪ್ರಜಾಪ್ರಭುತ್ವವಿದ್ದುದನ್ನು ಕಾಣಬಹುದಾಗಿದೆ.

ಪ್ರಜಾಪ್ರಭುತ್ವ ಸರ್ಕಾರದ ರಚನೆಯ ಪ್ರಶ್ನೆ ಮೊಟ್ಟಮೊದಲು ಉದ್ಭವವಾದದ್ದು 19ನೆಯ ಶತಮಾನದಲ್ಲಿ. 18ನೆಯ ಶತಮಾನದವರೆಗೆ ಇದರ ಪೂರ್ಣ ಪರಿಕಲ್ಪನೆಯಿರಲಿಲ್ಲ. ಸಾಮಾಜಿಕ ಜೀವನದಲ್ಲೂ ರಾಜಕೀಯ ಜೀವನದಲ್ಲೂ ಸಮಾನತೆಗಾಗಿ ಕಾರ್ಖಾನೆಗಳ ಮಾಲಿಕರಿಗೂ ಕಾರ್ಮಿಕರಿಗೂ ಘರ್ಷಣೆ ಮೊದಲಾಗಿ ಸಮಾನತೆಯನ್ನು ಪ್ರಜಾಪ್ರಭುತ್ವದ ತತ್ವವಾಗಿ ಪರಿಗಣಿಸಲಾದ್ದು 18ನೆಯ ಶತಮಾನದಿಂದ ಈಚೆಗೆ. ಆ ಕಾಲದಲ್ಲಿ ಪ್ರಜಾಪ್ರಭುತ್ವ ಪ್ರಚಲಿತವಾಗಿರಲಿಲ್ಲ. ಆಧುನಿಕ ಕಾಲದವರೆಗೆ ಪ್ರಚಲಿತವಾಗಿದ್ದ ಪ್ರಮುಖ ರಾಜ್ಯ ಪದ್ಧತಿ ಎಂದರೆ ಅರಸೊತ್ತಿಗೆ. ಆದರೆ ಇಂದಿನ ಪರಿಸ್ಥಿತಿಯೇ ಬೇರೆ. ಹದಿನಾರನೆಯ ಶತಮಾನದಿಂದೀಚೆಗೆ ಅರಸೊತ್ತಿಗೆ ಕ್ಷೀಣಿಸುತ್ತ ಬಂದಿದೆ. ಈಗ ಪ್ರಜಾಪ್ರಭುತ್ವದ ತತ್ವಗಳು, ಆದರ್ಶಗಳು ಆಳವಾಗಿ ಬೇರೂರಿಕೊಂಡಿವೆ. ಪ್ರಪಂಚದ ಕೆಲವು ಭಾಗಗಳನ್ನು ಬಿಟ್ಟರೆ ಎಲ್ಲೆಡೆಯಲ್ಲೂ ಸರ್ಕಾರಗಳನ್ನು ಪ್ರಜಾಪ್ರಭುತ್ವದ ಕೆಲವು ತತ್ವಗಳಿಗೆ ಅನುಕೂಲವಾಗಿ ರಚಿಸಲಾಗಿದೆ. ಅವುಗಳ ಸ್ವರೂಪದಲ್ಲಿ ಭಿನ್ನತೆಗಳಿದ್ದರೂ ಕೆಲವು ತತ್ವಗಳೂ ಆಚರಣೆಗಳೂ ವಿವಾದಾಸ್ಪದವಾಗಿದ್ದರೂ ಪ್ರಜಾಪ್ರಭುತ್ವ ಪದ್ಧತಿಗೆ ಬಹುತೇಕ ಎಲ್ಲರೂ ನಿಷ್ಠೆ ತೋರಿಸುತ್ತಿದ್ದಾರೆ.

ಪ್ರಜಾಪ್ರಭುತ್ವ ಅರಸೊತ್ತಿಗೆಯಂತೆ ನಿರಂಕುಶ ಪ್ರಭುತ್ವವಲ್ಲ, ಅಥವಾ ಶ್ರೀಮಂತ ವರ್ಗದ ರಾಜ್ಯವಲ್ಲ, ಇದು ಪ್ರಜೆಗಳ ರಾಜ್ಯ. ಲೋಕವಾಣಿಯೇ ದೇವವಾಣಿ ಎಂದು ಪ್ರತಿಪಾದಿಸುವ ಪದ್ಧತಿ ಇದು. ಇಂದಿನ ಪ್ರಜಾಪ್ರಭುತ್ವದಲ್ಲಿ ಆಳುವವರೂ ಆಳಲ್ಪಡುವವರೂ ಪ್ರಜೆಗಳೇ ಆಗಿರುವುದರಿಂದ ಹೆಚ್ಚು ಕಡಿಮೆ ಎಂಬ ತಾರತಮ್ಯವಿಲ್ಲ.

ಇಂದು ಜಾರಿಯಲ್ಲಿರುವ ಪ್ರಾತಿನಿಧಿಕ ಅಥವಾ ಪರೋಕ್ಷ ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಯೇ ಆಗಲಿ ಕೆಲವು ವ್ಯಕ್ತಿಗಳೇ ಆಗಲಿ ಸ್ವೇಚ್ಛೆಯಾಗಿ ಆಳಲು ಎಡೆಯಿಲ್ಲ. ಪ್ರಜೆಗಳ ಪ್ರತಿನಿಧಿಗಳು ಪ್ರಜೆಗಳ ಹತೋಟಿಯೊಳಗೆ ಇರಬೇಕಾಗುತ್ತದೆ. ಇಂಥ ಹತೋಟಿಗಳನ್ನು ಪರಿಣಾಮಕಾರಿಯಾಗಿಸಲು  ಸಂವಿಧಾನದಲ್ಲಿ ಮತ್ತು ಶಾಸನಗಳಲ್ಲಿ ಸೂಕ್ತ ನಿರ್ದೇಶನಗಳಿರುತ್ತವೆ.  ಸಂವಿಧಾನ ಹಾಗೂ ಕಾನೂನುಗಳ ಆಚೆಗೂ ಹಲವಾರು ಹತೋಟಿಗಳಿವೆ.




ಪ್ರಜೆಗಳು ಅದರಲ್ಲೂ ಮತದಾರರು ತಮ್ಮ ಪ್ರತಿನಿಧಿಗಳ ಮೇಲೆ ಪರಿಣಾಮಕಾರಿ ನಿಯಂತ್ರಣವನ್ನಿಟ್ಟುಕೊಳ್ಳಲು ಪ್ರಾತಿನಿಧಿಕ ಪ್ರಜಾಪ್ರಭುತ್ವ ಅನುವು ಮಾಡಿಕೊಡುತ್ತದೆ. ನಿಯಮಿತ ಕಾಲದಲ್ಲಿ ಚುನಾವಣೆಗಳು ನಡೆಯುತ್ತವೆ. ಪ್ರತಿನಿಧಿಗಳು ನಿಶ್ಚಿತ ಅವಧಿಯಲ್ಲಿ ಮಾತ್ರ ಅಧಿಕಾರದಲ್ಲಿರುತ್ತಾರೆ. ಇಂದಿನ ಪ್ರತಿನಿಧಿಗಳು ಚೆನ್ನಾಗಿ ಕಾರ್ಯ ಮಾಡದಿದ್ದರೆ, ತಮ್ಮ ಕ್ಷೇತ್ರಗಳ ಬಗ್ಗೆ ಉಪೇಕ್ಷೆ ತೋರಿದರೆ ಮುಂದಿನ ಚುನಾವಣೆಗಳಲ್ಲಿ ಅವರ ಬದಲಾಗಿ ಬೇರೆ ಅಭ್ಯರ್ಥಿಗಳನ್ನು ಆರಿಸಬಹುದಾಗಿದೆ. ಅಯೋಗ್ಯನೆನಿಸಿದ ಪ್ರತಿನಿಧಿಯನ್ನು ಅವಧಿ ಮುಗಿಯುವ ಮುಂಚೆಯೇ ಕರೆಯಿಸಿಕೊಳ್ಳುವ ಅಧಿಕಾರ ಕೆಲವು ದೇಶಗಳಲ್ಲಿ ಮತದಾರರಿಗೆ ಇರುತ್ತದೆ. ಜಾಗೃತ ಶಾಸಕರು ಕಾರ್ಯಾಂಗದ ವಿವಿಧ ಚಟುವಟಿಕೆಗಳನ್ನು ಗಮನವಿಟ್ಟು ನೋಡುತ್ತಿರುತ್ತಾರೆ. ಲೋಪದೋಷಗಳು ಕಂಡುಬಂದರೆ ಶಾಸನ ಸಭೆಗಳಲ್ಲಿ ಟೀಕೆ, ಟಿಪ್ಪಣೆ ಮಾಡುತ್ತಾರೆ ಸೂಚನೆಗಳನ್ನು ನೀಡುತ್ತಾರೆ. ಸರ್ಕಾರದ ಇಂಥ ಲೋಪದೋಷಗಳನ್ನು ಪತ್ರಿಕೆಗಳು ಪ್ರಕಟಿಸುವುದರಿಂದ ಅವು ಜನತೆಯ ಗಮನಕ್ಕೆ ಬರುವುದು ಸಹಜ.




ಮತ ಎಂಬುದು ಪ್ರಜೆಗಳ ಕೈಯಲ್ಲಿಯ ಒಂದು ಪ್ರಬಲ ಅಸ್ತ್ರ. ಅದನ್ನು ಜಾಣತನದಿಂದ ಪರಿಣಾಮಕಾರಿಯಾಗಿ ಉಪಯೋಗಿಸದಿದ್ದರೆ ಜನತಂತ್ರ ಸರಿಯಾಗಿ ನಡೆಯಲಾರದು. ಪ್ರಜೆಗಳು ರಾಜಕೀಯ ವಿಷಯಗಳ ಬಗ್ಗೆ ಅನಾಸಕ್ತಿ ತೋರುವುದರಿಂದ ಅವರಿಗೆ ಹಾನಿ. ತಮ್ಮ ರಾಜ್ಯದಲ್ಲಿ, ರಾಷ್ಟ್ರದಲ್ಲಿ ಪ್ರಪಂಚದಲ್ಲಿ ಏನು ನಡೆದಿದೆ ಎಂಬುವುದರ ಅರಿವು ಅವರಿಗಿರಬೇಕಾಗುತ್ತದೆ.

ಚಿರಂತನ ಜಾಗೃತಿಯೇ ಪ್ರಜಾಪ್ರಭುತ್ವದ ಬೆಲೆ. ತಮಗೆ ಹಕ್ಕುಗಳೊಂದಿಗೆ ಕರ್ತವ್ಯಗಳೂ ಇವೆ ಅನ್ನುವುದರ ಪ್ರಜ್ಞೆ ಪ್ರಜೆಗಳಿಗಿರಬೇಕು. ಪ್ರಜೆಗಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸಿ ಉಳಿಸಿಕೊಳ್ಳುವುದರಲ್ಲಿ ಸ್ವತಂತ್ರ ಹಾಗೂ ನಿರ್ಭೀತ ಪತ್ರಿಕೆಗಳ ಪಾತ್ರ ಹಿರಿಯದು. ರಾಜಕೀಯ ಪಕ್ಷಗಳು ಪತ್ರಿಕೆಗಳಂತೆ ಪ್ರಜಾಪ್ರಭುತ್ವದ ಜೀವಾಳವಾಗಿವೆ. ಅವು ಜನರ ಹಾಗೂ ಸರ್ಕಾರದ ನಡುವಣ ಸೇತುವೆಗಳು. ಚುನಾವಣೆಗೆ ಮುನ್ನ ನೀಡಿದ ಆಶ್ವಾಸನೆಗಳನ್ನು ಪೂರೈಸಲು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನದಲ್ಲಿ ತರುವ ಅತಿ ಮುಖ್ಯ ಕಾರ್ಯ ರಾಜಕೀಯ ಪಕ್ಷಗಳದ್ದಾಗಿದೆ. ಅಧಿಕಾರರೂಢ ಪಕ್ಷವಷ್ಟೇ ವಿರೋಧ ಪಕ್ಷವೂ ಪ್ರಜಾಪ್ರಭುತ್ವ ಪದ್ಧತಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಇಂದಿನ ಪ್ರಜಾಪ್ರಭುತ್ವವನ್ನು ಬಹುಮತದ ಸರ್ಕಾರವೆಂದು ಕರೆಯಲಾಗಿದೆ. ಬಹುಮತ ಗಳಿಸಿದ ಪಕ್ಷ ಸರ್ಕಾರ ರಚಿಸಿದರೂ ಅಲ್ಪಸಂಖ್ಯಾತರಿಗೆ ಹಾಗೂ ರಾಜಕೀಯ ವಿರೋಧಿಗಳಿಗೆ ತೊಂದರೆ, ಅನಾನುಕೂಲತೆಗಳು ಒದಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿರುತ್ತದೆ. ಪರಸ್ಪರ ತಿಳಿವಳಿಕೆ, ವಿಚಾರ ವಿನಿಮಯಗಳು ಪ್ರಜಾಪ್ರಭುತ್ವದ ಮುಖ್ಯ ಲಕ್ಷಣಗಳು.

ಭಾರತದಂತಹ ರಾಷ್ಟ್ರಗಳಲ್ಲಿ  ಪ್ರಜಾಪ್ರಭುತ್ವ ಒಂದು ಜೀವನ ವಿಧಾನವೇ ಆಗಿದೆ. ಆರ್ಥಿಕ ಸಾಮಾಜಿಕ ಸಮಾನತೆ ಹಾಗೂ ರಾಜಕೀಯ ಸ್ವಾತಂತ್ರ್ಯ ಒದಗಿಸಿಕೊಡಲು ಅದು ಹೋರಾಡುತ್ತದೆ. ನಾಗರಿಕರಲ್ಲಿ ಪರಸ್ಪರ ತಿಳಿವಳಿಕೆ, ವಿಚಾರ ವಿನಿಮಯ, ಸಹಕಾರ, ಸಹಾನುಭೂತಿ, ರಚನಾತ್ಮಕ ವಿಮರ್ಶೆ ಜೀವಂತ ಪ್ರಜಾಪ್ರಭುತ್ವದ ಲಕ್ಷಣಗಳಾಗಿರುತ್ತವೆ.

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529

ಇಂಜಿನಿಯರ್ ದಿನ....

 


ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ.

ಜಗತ್ತು ಕಂಡ ಶ್ರೇಷ್ಠ ಇಂಜಿನಿಯರ್, ದಕ್ಷ ಆಡಳಿತಗಾರ, ಭಾರತದ ಯೋಜನೆಯ ಪಿತಾಮಹ ಸರ್ ಎಂ ವಿಶ್ವೇಶ್ವರಯ್ಯ ಹೆಸರು ಕೇಳದವರಿಲ್ಲ.ಭಾರತಕ್ಕೆ ಅವರ ಅಸಾಧಾರಣ ಕೊಡುಗೆ ಸ್ಮರಿಸುತ್ತಾ ಅವರ ಹುಟ್ಟಿದ ದಿನವಾದ ಸೆಪ್ಟೆಂಬರ್15 ನ್ನು ಪ್ರತಿ ವರ್ಷ "ಇಂಜಿನಿಯರ್ ಗಳ ದಿನ" ಎಂದು ಆಚರಿಸುತ್ತಾ ಬಂದಿದ್ದೇವೆ.

ವಿಶ್ವೇಶ್ವರಯ್ಯನವರು ಜನಿಸಿದ್ದು ಸೆಪ್ಟೆಂಬರ್ 15,1860 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ. ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ಅವರ ಪೂರ್ವಜರು ಈಗಿನ ಆಂದ್ರಪ್ರದೇಶದ 'ಮೋಕ್ಷಗುಂಡಂ' ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯ ನವರ ತಂದೆ ಸಂಸ್ಕೃತ ವಿದ್ವಾಂಸರು. ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು 15 ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. 1881 ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.
1884 ರಲ್ಲಿ  ಮುಂಬಯಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು. ಇದಾದ ಮೇಲೆ ಭಾರತೀಯ ನೀರಾವರಿ ಆಯೋಗದಿಂದ ಅವರಿಗೆ ಆಮಂತ್ರಣ ಬಂದಿತು. ಈ ಆಯೋಗವನು ಸೇರಿದ ನಂತರ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ 18ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟಾದ ಗ್ರಾಂಡ್ ಅಣಿಕಟ್ ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು. ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೂಂದನ್ನು ಕಂಡು ಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ 1903 ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು.
1908ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. 1917ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು.ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.
ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟೀಷ ಸರ್ಕಾರ ಅವರಿಗೆ "ಸರ್" ಪದವಿಯನ್ನು ನೀಡಿತು.

1955 ರಲ್ಲಿ ಭಾರತ ಸರ್ಕಾರದ ಅತ್ಯುಚ್ಚ ಗೌರವವಾದ ಭಾರತ ರತ್ನ ಲಭಿಸಿತು. ಸರ್. ಎಂ. ವಿಶ್ವೇಶ್ವರಯ್ಯನವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು
ಕರ್ನಾಟಕದಲ್ಲಿ ಹೆಚ್ಚಿನ ಶಾಲಾ ಕಾಲೇಜುಗಳು, ಐ.ಟಿ.ಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಇವರ ಹೆಸರಿಟ್ಟು ಗೌರವಿಸಲಾಗಿದೆ.

ನಾನು   ಗೌರಿಬಿದನೂರಿನಲ್ಲಿ ಪ್ರೌಢಶಾಲಾ ಶಿಕ್ಷಕನಾಗಿ ಕಾರ್ಯ ನಿರ್ವಹಿಸುವಾಗ ವಿಶ್ವೇಶ್ವರಯ್ಯ ರವರ ಹುಟ್ಟೂರಾದ ಮುದ್ದೇನಹಳ್ಳಿಗೆ ಮಕ್ಕಳನ್ನು ಪ್ರವಾಸ ಕರೆದುಕೊಂಡುಹೋಗಿದ್ದೆ.ಅಲ್ಲಿಯ ಅವರ ಮನೆಯು ವಸ್ತು ಸಂಗ್ರಾಹಾಲಯವಾಗಿ ಮಾರ್ಪಾಡಾಗಿದೆ.ಅಲ್ಲಿರುವ ಭಾರತ ರತ್ನ ಪದಕ ಮುಟ್ಟಿ ಪುಳಕಗೊಂಡಿದ್ದೆನು.
ಸರ್ ಎಂ ವಿಶ್ವೇಶ್ವರಯ್ಯ ರವರು ಮುಂದಿನ ಅನೇಕ ಪೀಳಿಗೆಗೆ ಮಾದರಿ ಮತ್ತು ಸ್ಪೂರ್ತಿದಾಯಕ ವ್ಯಕ್ತಿತ್ವ .

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529




11 ಸೆಪ್ಟೆಂಬರ್ 2023

ವಿಭಿನ್ನವಾಗಿ ಯೋಚಿಸಿ...

 ವಿಭಿನ್ನವಾಗಿ ಯೋಚಿಸಿ....


ವಿಭಿನ್ನವಾಗಿ ಯೋಚಿಸಿ ಕಾರ್ಯಪ್ರವೃತ್ತರಾಗುವವರಿಗೆ ಎಂದಿಗೂ ಸೋಲಾಗುವುದಿಲ್ಲ ಎಂಬುದಕ್ಕೆ ದಿನಕ್ಕೊಂದು ಸ್ಟಾರ್ಟಪ್, ಯೂನಿಕಾರ್ನ್ ಕಂಪನಿಗಳು ಹುಟ್ಟಿ ಕೋಟಿಗಳ ಲೆಕ್ಕದಲ್ಲಿ ವ್ಯವಹಾರ ಮಾಡುತ್ತ ನೂರಾರು ಜನರಿಗೆ ಉದ್ಯೋಗವನ್ನು ನೀಡಿ ನವೋದ್ಯಮಿಗಳಿಗೆ ಲಾಭವನ್ನು ತಂದುಕೊಡುತ್ತಿವೆ. ಇದಕ್ಕೆ ಉದಾಹರಣೆಯಾಗಿ  ಅಮೇಜಾನ್ ,ಪ್ಲಿಪ್ ಕಾರ್ಟ್,  ಜೊಮ್ಯಾಟೊ, ರೆಡ್ ಬಸ್, ಇತ್ಯಾದಿ ನೂರಾರು ಹೇಳಬಹುದು. ಹೀಗೆ ವ್ಯವಹಾರದಲ್ಲಿ ಯಶಸ್ವಿಯಾಗಲು ಕೊಂಚ ವಿಭಿನ್ನವಾಗಿ ಆಲೋಚಿಸಿ ಧೈರ್ಯದಿಂದ ಮುನ್ನುಗ್ಗಿದವರೇ ಮುಂದೊಂದು ದಿನ ಯದ್ಯಮಿಗಳಾಗಿ ಹೊರಹೊಮ್ಮುತ್ತಾರೆ. 


ಬಹುಕಾಲದ ಹಿಂದೆ ಚೀನಾದಲ್ಲಿ ಒಬ್ಬ ಯಶಸ್ವೀ ಉದ್ಯಮಿ ಇದ್ದರು. ಅವರದ್ದು ಬಾಚಣಿಗೆ ಬ್ಯುಸಿನೆಸ್. ಅವರಿಗೆ ವಯಸ್ಸಾಗಿತ್ತು. 

ಇನ್ನೇನು ನಿವೃತ್ತಿ ಹತ್ತಿರವಾಗಿತ್ತು. 

ಅವರಿಗೆ ಮೂರು ಮಂದಿ ಗಂಡು ಮಕ್ಕಳಿದ್ದರು. ತನ್ನ ಉದ್ಯಮವನ್ನು ಸುರಕ್ಷಿತ ಕೈಗಳಲ್ಲಿ ಇಡಬೇಕು ಎಂಬ ಆಸೆಯಿಂದ ಅವರು ಮಕ್ಕಳಿಗೆ ಒಂದು ಸಣ್ಣ ಪರೀಕ್ಷೆಯನ್ನು ಒಡ್ಡಿದರು. 

"ನೀವು ಒಂದು ಬೌದ್ಧ ಆಶ್ರಮಕ್ಕೆ ಹೋಗಿ ಅಲ್ಲಿನ ಸನ್ಯಾಸಿಗಳಿಗೆ ಬಾಚಣಿಗೆ ಮಾರಿ ಬರಬೇಕು" ಎಂದರು ತಂದೆ. ಮೂರು ದಿನದ ಬಳಿಕ  ವರದಿ ನೀಡಬೇಕು ಎಂದರು.


ಮಕ್ಕಳಿಗೆ ಆಘಾತ. ಸನ್ಯಾಸಿಗಳಿಗೆ ತಲೆ ಕೂದಲೇ ಇರುವುದಿಲ್ಲ. ಅವರಿಗೆ ಬಾಚಣಿಗೆ ಯಾಕೆ? ಯಾಕಾದರೂ ಅವರು ತೆಗೆದುಕೊಂಡಾರು ಎಂದು ಯೋಚಿಸಿದರು. ಅಷ್ಟಾದರೂ ಅಪ್ಪನ ಮಾತು ಮೀರಲಾರದೆ ಆಶ್ರಮಕ್ಕೆ ತೆರಳಿದರು.ಮೂರು ದಿನಗಳ ಬಳಿಕ ಒಬ್ಬ ಮಗ ಬಂದ. "ನನಗೆ ಎರಡು ಬಾಚಣಿಗೆ ಮಾರಲು ಸಾಧ್ಯವಾಯಿತು ಅಪ್ಪ"ಅಂದ. ಅಪ್ಪ ಕುತೂಹಲದಿಂದ ಕೇಳಿದ" ಬಾಚಣಿಗೆ ತೆಗೆದುಕೊಳ್ಳುವಂತೆ ಹೇಗೆ ಅವರನ್ನು ಒಪ್ಪಿಸಿದೆ ಮಗನೇ?"ಮಗ ಹೇಳಿದ "ನಿಮಗೇನಾದರೂ ಬೆನ್ನು ತುರಿಸಿದರೆ ಆಗ ತುರಿಸಿಕೊಳ್ಳಲು ಅನುಕೂಲವಾಗುತ್ತದೆ" ಎಂದು 


ಅಷ್ಟು ಹೊತ್ತಿಗೆ ಎರಡನೇಯವನು ಬಂದ. ಅವನು 10 ಬಾಚಣಿಗೆ ಮಾರಿಬಂದಿದ್ದ.

ಅವನು ಹೇಳಿದ"ನೀವು ಈ ಬಾಚಣಿಗೆಗಳನ್ನು ಖರೀದಿ ಆಶ್ರಮದಲ್ಲಿ ಇಟ್ಟರೆ ಬರುವ ಪ್ರವಾಸಿಗರಿಗೆ ಅನುಕೂಲವಾದೀತು ಅಂದೆ. ಎಲ್ಲೋ ದೂರದಿಂದ ಬಂದಿರ್ತಾರೆ,  ಕೂದಲು ಕೆದರಿಕೊಂಡಿದ್ದರೆ ಇದರ ಮೂಲಕ ಬಾಚಿಕೊಳ್ಳಬಹುದು ಎಂದು ಅವರಿಗೆ ಹೇಳಿದೆ. ಒಮ್ಮೆ ನಿರಾಕರಿಸಿದರೂ ಕೊನೆಗೆ 10 ತೆಗೆದುಕೊಳ್ಳಲು ಒಪ್ಪಿದರು" ಅಂದ. 


ಅಷ್ಟು ಹೊತ್ತಿಗೆ ಮೂರನೇ ಮಗ ಬಂದ. "ಎಷ್ಟು ಬಾಚಣಿಗೆ ಮಾರಿದೆ ಮಗನೇ "ಅಂತ ಅಪ್ಪ ಕೇಳಿದ. "ಒಂದು ಸಾವಿರ ಬಾಚಣಿಗೆ ಸೇಲ್ ಆಯ್ತಪ್ಪ"ಅಂತ ಅವನು ಹೇಳುತ್ತಿದ್ದಂತೆಯೇ ಎಲ್ಲರಿಗೂ ಭಾರಿ ಅಚ್ಚರಿ!

ಇದು ಹೇಗೆ ಸಾಧ್ಯ ಎಂದು ಎಲ್ಲರೂ ಮುಖ ಮುಖ ನೋಡಿಕೊಂಡರು.

ಅಪ್ಪ ಕೇಳಿದರು"ಹೇಗಪ್ಪಾ ಇದು ಸಾಧ್ಯವಾಯಿತು, ಸ್ವಲ್ಪ ವಿವರಿಸಿ ಹೇಳು."


ಮಗ ವಿವರಿಸಿದ "ನಾನು ಆಶ್ರಮವಾಸಿ ಸನ್ಯಾಸಿಗಳ ಬಳಿಗೆ ಹೋಗಿ ಅವರಿಗೊಂದು ಐಡಿಯಾ ಕೊಟ್ಟೆ. ಅದೇನೆಂದರೆ, ಈ ಬಾಚಣಿಗೆಗಳಲ್ಲಿ ಬುದ್ಧನ ಸಂದೇಶವನ್ನು ಅಂಟಿಸಿದರೆ ಇಲ್ಲವೇ ಪ್ರಿಂಟ್ ಮಾಡಿದರೆ ಅದನ್ನು ಸಂದರ್ಶಕರು ಮತ್ತು ಭಕ್ತರಿಗೆ ಕಾಣಿಕೆಯಾಗಿ ಕೊಡಬಹುದು ಅಂದೆ. ಹಾಗೆ ಪಡೆದುಕೊಂಡವರು ಪ್ರತಿ ದಿನವೂ ತಲೆ ಬಾಚುವಾಗ ಬುದ್ಧನ ಬೋಧನೆಗಳನ್ನು ನೆನಪಿಸಿಕೊಳ್ಳಲು ಸಾಧ್ಯವಾದೀತು ಎಂದು ಹೇಳಿದೆ. 

ಅವರಿಗೆ ಹೌದೆನಿಸಿತು.  ಕೇವಲ ಎರಡು ರೂಪಾಯಿಯ ಬಾಚಣಿಗೆ ಮೂಲಕ ಬುದ್ಧನ ಸಂದೇಶವನ್ನು ಮನೆ ಮನೆಗೆ ತಲುಪಿಸಬಹುದು ಎಂಬ ಐಡಿಯಾವೇ ರೋಚಕವಾಗಿದೆ ಅಂದರು. ಒಂದು ಸಾವಿರ ಬಾಚಣಿಗೆಗೆ ಆರ್ಡರ್ ಮಾಡಿದರು."

ಮಗ ಮುಂದುವರಿಸಿದ "ಅಷ್ಟೇ ಅಲ್ಲ ಅಪ್ಪ.  ಬುದ್ಧನ ಸಂದೇಶಗಳನ್ನು ನಾವೇ ಮುದ್ರಿಸಿ ಕೊಡುವುದಾದರೆ ಬೇರೆ ಆಶ್ರಮಗಳ ಆರ್ಡರ್ ಕೂಡಾ ಪಡೆಯಲು ಸಹಾಯ ಮಾಡುವುದಾಗಿ ಅಲ್ಲಿನ ಸನ್ಯಾಸಿಗಳು ಹೇಳಿದರು." 

ಈ ಮೇಲಿನ ಕಥೆಯನ್ನು ಓದಿದಾಗ ಅಸಾಧ್ಯವಾದದು ಯಾವುದೂ ಇಲ್ಲ ಸ್ವಲ್ಪ ನಮ್ಮ ಮೆದುಳಿಗೆ ಕೆಲಸ ಕೊಡಬೇಕು .ಪ್ರಾಮಣಿಕ ಪ್ರಯತ್ನ ಮಾಡಬೇಕು. ಥಿಂಕ್ ಔಟ್ ಆಪ್ ದಿ ಬಾಕ್ಸ್ ಎಂದರೆ ಇದೇ ಅಲ್ಲವೇ..? ಬೋಳು ತಲೆಯವರಿಗೂ ಬಾಚಣಿಗೆ ಮಾರುವುದಾದರೆ  ಇನ್ನೂ ಎಂತಹ ಅವಕಾಶಗಳು ಇರಬಹುದು? ನನಗೆ ಉದ್ಯೋಗವಿಲ್ಲ ಎಂದು ತಲೆ ಮೇಲೆ ಕೈ ಹೊತ್ತು ಕೂರುವ ಬದಲು ವಿಭಿನ್ನವಾಗಿ ಆಲೋಚಿಸುವ ಮೂಲಕ ತಾನೇ ಉದ್ಯಮಿಯಾಗಿ ಬೆಳೆಬಹುದಲ್ಲವೆ...


ಸಿಹಿಜೀವಿ ವೆಂಕಟೇಶ್ವರ

ತುಮಕೂರು




07 ಸೆಪ್ಟೆಂಬರ್ 2023

ಗೋಮುಖ ವ್ಯಾಘ್ರರು...

 


*ಗೋಮುಖ ವ್ಯಾಗ್ರರು*


ಕಲಿತವರೂ ಗಾಢಾಂಧಕಾರದಲಿಹರು

ತೋರಿಕೆಯ ಬುದ್ದಿವಂತರು ಇವರು

ಸುಳ್ಳೇ ಇವರ ಮನೆ ದೇವರು 

ತಮ್ಮಲ್ಲೇ ಕಚ್ಚಾಡುತ್ತಲೇ ಇರುವರು 

ಬಾಯಲ್ಲಿ ಮಾತ್ರ ಶುಭಕೋರುವರು

ದುಷ್ಟಗುಣದ  ಗೋಮುಖವ್ಯಾಘ್ರರು.


ಸಿಹಿಜೀವಿ ವೆಂಕಟೇಶ್ವರ

ತುಮಕೂರು


01 ಸೆಪ್ಟೆಂಬರ್ 2023

ಉದ್ಯೋಗ ಮತ್ತು ಆತ್ಮ ತೃಪ್ತಿ..

 


ಉದ್ಯೋಗ ಮತ್ತು ಆತ್ಮ ತೃಪ್ತಿ..

ಈಗ ಉದ್ಯೋಗಂ ಪುರುಷ ಲಕ್ಷಣ ಎಂಬ ಮಾತು ಬದಲಾಗಿ ಉದ್ಯೋಗ ಮಾನವ ಲಕ್ಷಣ, ರೋಬಾಟ್ ಲಕ್ಷಣ ಮುಂದುವರೆದು ಯಾಂಬು (ಯಾಂತ್ರಿಕ ಬುದ್ದಿ ಮತ್ತೆ) ಲಕ್ಷಣವಾಗಿದೆ.ಉದ್ಯೋಗ ಗಳಿಸಿದ ಕೂಡಲೆ ತಾನು ಮಾಡುವ
ಉದ್ಯೋಗ ಕ್ಷೇತ್ರದಲ್ಲಿ ನಿಂತ ನೀರಾಗಿರಲು ಯಾರೂ ಇಷ್ಟಪಡುವುದಿಲ್ಲ. ಆದರೆ ಕೆಲವೊಂದು ಕಾರಣಗಳಿಂದ ಹಲವು ವರ್ಷಗಳಿಂದ ಉದ್ಯೋಗದಲ್ಲಿ ಒಂದೇ ಸ್ಥಿತಿಯಲ್ಲಿ ಬಹುತೇಕರು ಇರುತ್ತಾರೆ. ಕರಿಯರ್ನಲ್ಲಿ ಪ್ರಗತಿಯಾಗದೆ ಇರುವುದಕ್ಕೆ ಹಲವು ಕಾರಣಗಳು ಇರಬಹುದು. ಕಂಪನಿಯ ಸ್ಥಿತಿ ಕಾರಣ ಇರಬಹುದು, ಕಂಪನಿಯೊಳಗಿನ ಪೈಪೋಟಿ ಕಾರಣ ಇರಬಹುದು. ಆದರೆ ಕರಿಯರ್ ಯಶಸ್ಸಿಗೆ ನಾವು ಕೂಡ ಕಾರಣ. ನಮ್ಮೊಳಗಿನ ಕೆಲವೊಂದು  ಮನೋಧೋರಣೆಗಳು, ತೊಂದರೆಗಳು ನಮ್ಮ ಯಶಸ್ಸಿಗೆ ಅಡ್ಡಿಯಾಗುತ್ತದೆ ಎಂಬುದು ನಮ್ಮ ಅರಿವಿಗೆ ಬರುವ ಮುನ್ನ ನಮ್ಮ ಕೆರಿಯರ್ ಗ್ರಾಪ್ ಏರದೇ ಕೆಲವೊಮ್ಮೆ ವಿರುದ್ಧ ದಿಕ್ಕಿನಲ್ಲಿ ಪಯಣಿಸಿದ ಉದಾಹರಣೆಗಳಿವೆ.

ಉತ್ತಮವಾದ ಹಾಗೂ ಪ್ರಗತಿಶೀಲ ಜೀವನ ನನ್ನದಾಗಬೇಕೆಂಬುದು ಪ್ರತಿಯೊಬ್ಬರ ಆಸೆ. ಹೀಗಾಗಿ ಮಹತ್ವಾಕಾಂಕ್ಷೆಯ ಹಂಬಲವಿರುವುದು ಮಾನವಸಹಜ ಗುಣ. ವೈಯಕ್ತಿಕವಾಗಿ ಹಾಗೂ ವೃತ್ತಿಪರವಾಗಿ ಇನ್ನಷ್ಟು ಬೆಳೆಯಬೇಕು ಎನ್ನುವುದು ಬಹುತೇಕರ ಆಸೆ. ನಮ್ಮನ್ನು ನಾವು ಸುಧಾರಿಸಿಕೊಳ್ಳುವ ಮೂಲಕ  ಚಿಕ್ಕ ಚಿಕ್ಕ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ  ನಿರೀಕ್ಷಿತ ಎತ್ತರಕ್ಕೆ ಬೆಳೆಯಲು ಸಾಧ್ಯವಿದೆ.

ಸ್ವಾಮಿ ವಿವೇಕಾನಂದರು ಹೇಳಿದಂತೆ ನಿನ್ನ ಮುಂದಿರುವ ಮತ್ತು ಹಿಂದಿರುವ ಶಕ್ತಿಗಿಂತ ನಿನ್ನೊಳಗಿನ ಶಕ್ತಿ ಅಧಿಕ ಆ ಶಕ್ತಿಯನ್ನು ಬಳಸಿಕೊಂಡು
ಸ್ವಯಂ ಬೆಳವಣಿಗೆಯ ಪಯಣ ಮುಂದುವರೆಸಬೇಕು.  ಹುಟ್ಟಿನಿಂದ ಚಟ್ಟದವರೆಗೆ  ಕಲಿಯುವುದು ಸಾಕಷ್ಟಿರುತ್ತದೆ.   ನಮ್ಮನ್ನು ನಾವು ಸುಧಾರಿಸುವ ಅವಕಾಶವೂ ಇರುತ್ತದೆ. ಆ ಅವಕಾಶ ಬಂದಾಗ ಸದುಪಯೋಗ ಪಡಿಸಿಕೊಳ್ಳಲು ಸದಾ ಕಾತರರಾಗಿರೋಣ.

ದೇಶ ಸುತ್ತು ಕೋಶ ಓದು ಎಂಬ ಮಾತಿನಂತೆ ಪುಸ್ತಕಗಳು ಬುದ್ಧಿಮತ್ತೆಯನ್ನು ಹೆಚ್ಚಿಸುವ ಮೂಲಗಳಾಗಿವೆ. ಹೆಚ್ಚೆಚ್ಚು ಪುಸ್ತಕಗಳನ್ನು ಓದಿದಂತೆಲ್ಲ ಹೆಚ್ಚು ಬುದ್ಧಿವಂತರಾಗುತ್ತೇವೆ  ನಮ್ಮನ್ನು ನಾವು ಜ್ಞಾನಸಮೃದ್ಧಗೊಳಿಸಿಕೊಳ್ಳಲು ಪುಸ್ತಕಗಳನ್ನು ಓದಲು  ಪ್ರಾರಂಭಿಸೋಣ. ಪ್ರಾರಂಭದಲ್ಲಿ ಪುಸ್ತಕ ಓದುವುದಕ್ಕೆ ಆಸಕ್ತಿ ಇರುವುದಿಲ್ಲ.ಓದಲು ಆರಂಭಿಸಿದೊಡನೇ ಬೋರ್ ಆಗಿ ಅದನ್ನು ಮುಚ್ಚಿಡಬೇಕೆನ್ನಿಸುತ್ತದೆ. ಆದರೂ ಪುಸ್ತಕ ಓದುವುದನ್ನು ನಿಲ್ಲಿಸಬೇಡಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ಪುಸ್ತಕ ಓದುವ ಹವ್ಯಾಸ ಒಮ್ಮೆ ರುಚಿಸಿದರೆ ಅದರ ಮಜವೇ ಬೇರೆ ಕಳೆದ ವರ್ಷ ನನ್ನ ಕೆಲಸದ ಒತ್ತಡದ ನಡುವೆಯೂ ಐವತ್ತು ಕನ್ನಡ ಪುಸ್ತಕ ಓದಿರುವುದನ್ನು ನಾನು ಹೆಮ್ಮೆಯಿಂದ ಹೇಳುವೆ.

ಇದರ ಜೊತೆಗೆ ಬಹು ಭಾಷೆಯ ಕಲಿಕೆ ನಮ್ಮ ಕೆರಿಯರ್ ಬೆಳವಣಿಗೆಗೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿದೆ. ನಮ್ಮ ಮಾತೃಭಾಷೆ ಹಾಗೂ ಇಂಗ್ಲಿಷ್ ಗೊತ್ತಿದ್ದರೆ ಮಾತ್ರ ಸಾಕು ಎಂದುಕೊಳ್ಳಬೇಡಿ. ಹೇಗಾದರೂ ಸರಿ, ಬೇರೆ ಭಾಷೆಗಳನ್ನು ಕಲಿಯೋಣ. ಸಾಧ್ಯವಾದರೆ ಭಾಷಾ ಕೋರ್ಸ್ಗಳ ಮೂಲಕ, ಒಂದಾದರೂ ವಿದೇಶಿ ಭಾಷೆಯನ್ನು ಕಲಿಯುವುದು ಉತ್ತಮ. ಅನ್ಯ ಭಾಷೆಯನ್ನು ಕಲಿಯುವುದರಿಂದ ಹೊಸ ಕೌಶಲ ಬೆಳೆಸಿಕೊಂಡಂತಾಗುತ್ತದೆ ಜೊತೆಗೆ ಅಲ್ಲಿನ ಸಂಸ್ಕೃತಿಯ ಪರಿಚಯವೂ ಆಗುತ್ತದೆ. ಈ ನಿಟ್ಟಿನಲ್ಲಿ ಈ ವರ್ಷದಿಂದ ನಾನು ಸಂಸ್ಕೃತ ಭಾಷೆಯನ್ನು ಕಲಿಯಲು ಆರಂಭಿಸಿರುವೆ.

ಇಂದಿನ ಆಧುನಿಕ ಜಗದಲ್ಲಿ ಇಂದು ಟ್ರೆಂಡಿಂಗ್ ನಾಳೆ ಹಳತಾಗುತ್ತದೆ.ಅದಕ್ಕೆ ತಕ್ಕಂತೆ ನಾವೂ ಅಪ್ಡೇಟ್ ಆಗುತ್ತಲೇ ಇರಬೇಕು ಇಲ್ಲದಿದ್ದರೆ ಔಟ್ಡೇಟ್ ಆಗುವ ಸಂಭವಿರುತ್ತದೆ. ನಾವು ಸೇರಬಹುದಾದ ಹೊಸ ಕೋರ್ಸ್ ಏನಾದರೂ ಇದೆಯೇ ಎಂಬುದನ್ನು ಪರಿಶೀಲಿಸಿ. ಹೊಸ ಜ್ಞಾನ ಮತ್ತು ಕೌಶಲಗಳನ್ನು ಗಳಿಸಲು ಕೋರ್ಸ್ಗಳು ಉಪಯುಕ್ತ. ಇದಕ್ಕಾಗಿ ದೀರ್ಘಾವಧಿಯ ಸೆಮಿನಾರ್  ವರ್ಕ್ಷಾಪ್ಗಳ ಅಗತ್ಯವಿಲ್ಲ. ಆನ್ಲೈನ್ ತರಬೇತಿಯಾದರೂ ಆದೀತು.  ಒಂದೆರಡು ವರ್ಕ್ಷಾಪ್ಗಳಿಂದಲೇ ಹೊಸ ಒಳದೃಷ್ಟಿಕೋನವನ್ನು ಪಡೆಯಬಹುದು.

ಕೆಲಸದ ಪರಿಸರ ಮತ್ತು ಮನೆಯ ಪರಿಸರ ನಮ್ಮ ಉದ್ಯೋಗದ ಮೇಲೆ ಖಂಡಿತವಾಗಿಯೂ ಪರಿಣಾಮ ಬೀರುತ್ತದೆ.ನಮ್ಮ ಸುತ್ತಮುತ್ತಲಿನ ಪರಿಸರವೂ ನಮಗೊಂದು ಒಳ್ಳೆಯ ಮೂಡ್ ತಂದುಕೊಡಬಲ್ಲದು. ನಾವು ವಾಸಿಸುವ  ಮತ್ತು ಕಚೇರಿಯಲ್ಲಿನ ಸ್ಥಳವು ಸ್ಪೂರ್ತಿದಾಯಕ ಪರಿಸರದಲ್ಲಿದ್ದರೆ ಅದುವೇ ನಮಗೆ ಪ್ರತಿದಿನವೂ ಪ್ರೇರಣೆ ನೀಡಬಲ್ಲದು.

ಉತ್ತಮ ಹವ್ಯಾಸಗಳು ನಮ್ಮ ಮಾನಸಿಕ ಆರೋಗ್ಯಕ್ಕೆ ಪೂರಕ.ಕೆಲವೊಮ್ಮೆ ಈ ಹವ್ಯಾಸಗಳು ನಮ್ಮ ವೃತ್ತಿ ಜೀವನದ ಬೆಳವಣಿಗೆಗೂ ಸಹಕಾರಿಯಾಗುತ್ತವೆ.
ನಮಗಿಷ್ಟವಾದ ಕೆಲವು ಹವ್ಯಾಸಗಳ ಜೊತೆಯಲ್ಲಿ. ಅದಲ್ಲದೇ ನಾವು ಕಲಿಯಬೇಕಿರುವ ಯಾವುದಾದರೂ ಆಟ ಇದೆಯೆ?. ಗಾಲ್ಫ್, ಚಾರಣ, ಬೆಟ್ಟ ಹತ್ತುವುದು, ಡ್ಯಾನ್ಸ್ ಇತ್ಯಾದಿಗಳಿಗೆ ಪ್ರಯತ್ನಿಸಿ ನೋಡಬಹುದು. ಏನಾದರೂ ಹೊಸತನ್ನು ಕಲಿಯುವುದರಿಂದ, ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕ ಯಾವುದಾದರೂ ವಿಭಿನ್ನ ದೃಷ್ಟಿಕೋನಗಳಿಗೆ ತೆರೆದುಕೊಳ್ಳಲು ಸಾಧ್ಯವಾಗುತ್ತದೆ.

ನಮ್ಮ ಕೆರಿಯರ್ ನಲ್ಲಿ ಮುಂದುವರೆಯಲು ಅನವಶ್ಯಕ ಹೆದರಿಕೆ ತ್ಯಜಿಸಬೇಕು.
ಹೆದರಿಕೆ ಎನ್ನುವುದು ಎಲ್ಲರಲ್ಲಿಯೂ ಇರುವಂಥಾದ್ದೇ. ಅನಿಶ್ಚಿತತೆಯ ಭೀತಿ, ಸಾರ್ವಜನಿಕವಾಗಿ ಮಾತನಾಡಲು ಅಂಜಿಕೆ, ರಿಸ್ಕ್ ತೆಗೆದುಕೊಳ್ಳುವಾಗಿನ ಗಾಬರಿ ಇವು ನಮ್ಮನ್ನು ನಾವಿರುವ ಸ್ಥಾನಕ್ಕೇ ಸೀಮಿತಗೊಳಿಸಿಬಿಡುತ್ತವೆ. ನಮ್ಮ ಬೆಳವಣಿಗೆಗೆ ಇವು ಅಡ್ಡಿಯಾಗಿಬಿಡುತ್ತವೆ. ಯಾವ ಕ್ಷೇತ್ರದಲ್ಲಿ ಬೆಳೆಯಬೇಕು ಎಂದುಕೊಳ್ಳುವಿರೋ ಅದರ ಮೇಲೆ ಹೆದರಿಕೆಯ ಛಾಯೆ ಬೀಳದಂತೆ ನೋಡಿಕೊಳ್ಳಬೇಕು.
ವಾಸ್ತವದಲ್ಲಿ ಜೀವಿಸುತ್ತಾ ಗತದಲ್ಲಿ ನಾವು ಮಾಡಿದ ತಪ್ಪುಗಳನ್ನು ತಿದ್ದಿಕೊಂಡು ಕಾಲಕಾಲಕ್ಕೆ ನಮ್ಮ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಂಡು ನಮ್ಮ ಕರ್ತವ್ಯ ನಿಭಾಹಿಸಿದರೆ ನಾವೊಬ್ಬ ಉತ್ತಮ ಕೆಲಸಗಾರರಾಗುವುದರಲ್ಲಿ ಸಂದೇಹವಿಲ್ಲ. ಒಟ್ಟಿನಲ್ಲಿ ಕೆಲಸ ಯಾವುದೇ ಇರಲಿ ಶ್ರದ್ಧೆಯಿಂದ ಬದ್ದತೆಯಿಂದ ಮಾಡಬೇಕು ಎಲ್ಲಕ್ಕಿಂತ ಮಿಗಿಲಾಗಿ ನಾವು ಮಾಡುವ ಕಾರ್ಯ ಆತ್ಮತೃಪ್ತಿ ನೀಡಬೇಕು.

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529