23 ಫೆಬ್ರವರಿ 2025

ಸಡಿಲಿನ ಸಿಂಹದ ಮರಿ ಛಾವ


 ಸಡಿಲಿನ ಸಿಂಹದ ಮರಿ  ಛಾವ 


"ಜೈ ಭವಾನಿ","ಹರ ಹರ ಮಹಾದೇವ" "ಜಗದಂಬಾ" ಈ ಘೋಷಣೆಗಳು ಚಿತ್ರ ಮಂದಿರದಿಂದ ಹೊರಬಂದಾಗಲೂ ನನ್ನ  ಕಿವಿಯಲ್ಲಿ ಮಾರ್ಧನಿಸುತ್ತಿದ್ದವು.

ಪ್ರೇಮಿಗಳ ದಿನ ದೇಶಪ್ರೇಮಿಗಳಿಗಾಗಿ ಮಾಡಿದ ಛಾವ ಚಲನಚಿತ್ರ ನೋಡಿದೆ.

ಬಹಳ ದಿನಗಳ ನಂತರ ಒಂದು ಉತ್ತಮ ಐತಿಹಾಸಿಕ ಚಿತ್ರ ನೋಡಿದ ಸಮಾಧಾನವಾಯ್ತು.ಇದು   ಹಿಂದಿ ಭಾಷೆಯ ಐತಿಹಾಸಿಕ ಆಕ್ಷನ್ ಚಿತ್ರವಾಗಿದ್ದು  ಮರಾಠಾ ಸಾಮ್ರಾಜ್ಯದ ಶಿವಾಜಿಯ ಮಗ   ಸಂಭಾಜಿಯ ಜೀವನವನ್ನು ಆಧರಿಸಿದೆ.  ವಿಕ್ಕಿ ಕೌಶಲ್ ಈ ಚಿತ್ರದಲ್ಲಿ ಛತ್ರಪತಿ ಸಂಭಾಜಿ ಪಾತ್ರದಲ್ಲಿ ನಟಿಸಿಲ್ಲ ಬದಲಿಗೆ ಜೀವಿಸಿದ್ದಾರೆ. ಶಿವಾಜಿ ಸಾವಂತ್ ಅವರ ಮರಾಠಿ ಕಾದಂಬರಿ ಆಧಾರಿತ ಈ ಚಿತ್ರವನ್ನು  ಲಕ್ಷ್ಮಣ್ ಉಟೇಕರ್ ಬಹಳ ಅಚ್ಚುಕಟ್ಟಾಗಿ  ನಿರ್ದೇಶನ ಮಾಡಿದ್ದಾರೆ.


ಶಿವಾಜಿಯ ಮರಣದ ನಂತರ  ಮೊಘಲ್ ಚಕ್ರವರ್ತಿ ಔರಂಗಜೇಬನ ಆಸ್ಥಾನದಲ್ಲಿ  ಸಂತೋಷದ ಪಾರ್ಟಿ ಮಾಡುವ ಚರ್ಚೆಯಿಂದ ಆರಂಭವಾಗುವ ಸಿನಿಮಾ ಕುತಂತ್ರದಿಂದ ಸಂಭಾಜಿಯ ಸೆರೆಹಿಡಿದು ಹಿಂಸೆ ನೀಡುವ ದೃಶ್ಯಗಳಿಂದ ಚಿತ್ರ ಮುಕ್ತಾಯವಾಗುತ್ತದೆ.ಚಿತ್ರದ ಮಧ್ಯ ಮಧ್ಯ ಮರಿ ಸಿಂಹದ ಘರ್ಜನೆ, ತಂತ್ರಗಳು ಮತ್ತು ಬುದ್ಧಿವಂತಿಕೆಯಿಂದ ಜನರು ಥಿಯೇಟರ್ ನಲ್ಲಿ ಶಿಳ್ಳೆ ಚಪ್ಪಾಳೆ ಹೊಡೆಯುತ್ತಾರೆ. ಕೊನೆಯ ಇಪ್ಪತ್ತು ನಿಮಿಷಗಳು ಪ್ರೇಕ್ಷಕರ ಕಣ್ಣಾಲಿಗಳು ತೇವವಾಗುತ್ತವೆ. ಶಿವಾಜಿ ಮರಣದ ನಂತರ ಪ್ರಮುಖ ಮೊಘಲ್ ಆಡಳಿತ ಮತ್ತು ವಾಣಿಜ್ಯ ಕೇಂದ್ರವಾದ ಬುರ್ಹಾನ್‌ಪುರದ ಮೇಲೆ  ಹಠಾತ್ ಸಂಭಾಜಿ ದಾಳಿ ಮಾಡಿ ಅಲ್ಲಿನ ಸಂಪತ್ತನ್ನು ವಶಪಡಿಸಿಕೊಳ್ಳುವಾಗ ಯುದ್ಧಭೂಮಿಯಲ್ಲಿ ಸಿಲುಕಿದ  ಶತೃಪಡೆಯ  ಪುಟ್ಟ ಮಗುವನ್ನು ಅದರ ತಾಯಿಯ ಮಡಿಲಿಗೆ ಸುರಕ್ಷಿತವಾಗಿ ತಲುಪಿಸಿ ಯುದ್ದವನ್ನು ಮುಂದುವರೆಸಿದ ಸಂಭಾಜಿಯ ಬಗ್ಗೆ ನನಗೆ ಬಹಳ ಹೆಮ್ಮೆ ಎನಿಸಿತು.

ಇದೇ  ಯುದ್ಧದಲ್ಲಿ ಸಂಭಾಜಿ ಸಿಂಹವಿರುವ ಬೋನಿಗೆ ಬಿದ್ದಾಗ  ತನ್ನ ಬರಿ ಕೈಗಳಿಂದಲೇ ಅದನ್ನು ಕೊಂದು ಅಸಲಿ ಛಾವ ಅಂದರೆ ಸಿಂಹದ ಮರಿಯಾಗಿ ಅಬ್ಬರಿಸಿತ್ತಾ ಬಂದು "ನಾನು ಘರ್ಜಿಸೋಲ್ಲ, ಬೇಟೆಯಾಡ್ತೇನೆ" ಎಂಬ ಡೈಲಾಗ್ ಗೆ ಪ್ರೇಕ್ಷಕರ ಶಿಳ್ಳೆ ಚಪ್ಪಾಳೆ ಹೊಡೆದುಬಿಟ್ಟರು.

 ಔರಂಗಜೇಬನ ಪಾತ್ರದಲ್ಲಿ ನಟಿಸಿರುವ ಅಕ್ಷಯ್ ಖನ್ನಾ ತಣ್ಣನೆಯ ಕ್ರೌರ್ಯ ಹೊರ ಹಾಕುತ್ತಾ ಸಂಭಾಜಿಯನ್ನು ಸೋಲಿಸದ ಹೊರತು ತನ್ನ ಕಿರೀಟಧಾರಣೆ ಮಾಡಲಾರೆ ಎಂದು ಶಪಥ ಮಾಡಿದ. ತನ್ನ ಲಕ್ಷಗಟ್ಟಲೆ ಸೈನ್ಯದ  ಮುಂದೆ ಸಾವಿರ ಲೆಕ್ಕಾಚಾರದ ಮರಾಠರ ಸೈನ್ಯ ಲೆಕ್ಕವಿಲ್ಲ ಎಂದು ಹಗುರವಾಗಿ ಯೋಚಿಸಿ ದಖ್ಖನ್ ಮೇಲೆ ದಾಳಿ ಮಾಡಲು ಆದೇಶ ಮಾಡುತ್ತಾನೆ. ಶಿವಾಜಿಯ ಕಾಲದಿಂದಲೂ ಗೆರಿಲ್ಲಾ ಯುದ್ಧ ತಂತ್ರದಲ್ಲಿ ಪಳಗಿದ ಮರಾಠರು ಛತ್ರಪತಿ ಸಂಭಾಜಿಯ ನೇತೃತ್ವದಲ್ಲಿ ಮೊಘಲರ ಸೇನೆಯನ್ನು ಸೋಲಿಸಿ ಹಿಮ್ಮೆಟ್ಟಿಸುತ್ತಾರೆ.

  ಸಂಭಾಜಿಯನ್ನು  ಪತ್ನಿ ಯೇಸುಬಾಯಿ ಆಗಿ  ರಶ್ಮಿಕಾ ಮಂದಣ್ಣ ಉತ್ತಮವಾಗಿ ಅಭಿನಯಿಸಿದ್ದಾರೆ. ಎಲ್ಲಾ ಕಡೆ ಇರುವಂತೆ  ಮರಾಠಾ ಆಸ್ಥಾನದಲ್ಲಿ ಗುಂಪುಗಾರಿಕೆ, ಒಳಸಂಚು ಬೆಳೆಯುತ್ತದೆ. ಸಂಭಾಜಿಯ ಮಲಸಹೋದರ ರಾಜಾರಾಮ್‌ನನ್ನು ಆಡಳಿತಗಾರನನ್ನಾಗಿ ಪ್ರತಿಷ್ಠಾಪಿಸಲು ಪಿತೂರಿಗಳು ನಡೆಯುತ್ತಲೇ ಇರುತ್ತವೆ.  ಮೊಘಲ್ ರಾಜಕುಮಾರ ಮಿರ್ಜಾ ಅಕ್ಬರ್ ಔರಂಗಜೇಬನ ವಿರುದ್ಧ ದಂಗೆ ಏಳಲು ಸಂಭಾಜಿಯ ಸಹಾಯವನ್ನು ಕೋರುವಾಗ   ಮಲತಾಯಿ ಸೋಯಾರಾಬಾಯಿ ಮತ್ತು ರಾಜಕುಮಾರನ ಜೊತೆಯಲ್ಲಿ   ಪಿತೂರಿಯ ಭಾಗವಾದವರನ್ನು   ಆನೆಯ ಕಾಲಿನಿಂದ ತುಳಿಸಿ ಸಾಯಿಸುವ  ದೃಶ್ಯಗಳನ್ನು ನೋಡಿದಾಗ ಮರಾಠರು ಮೋಸಗಾರರಿಗೆ ಕರುಣೆಗೆ ಅವಕಾಶವಿಲ್ಲದೇ  ತಕ್ಕ ಶಿಕ್ಷೆಗೆ ಗುರಿಪಡಿಸುತ್ತಿದ್ದರು ಎಂಬುದು ತಿಳಿದುಬರುತ್ತದೆ.  

ಔರಂಗಜೇಬನು ಮತ್ತೆ ದಖ್ಖನ್ ಕಡೆ ಯುದ್ಧಕ್ಕೆ ಬರುವ ಸುದ್ದಿ ತಿಳಿದು ನಿರ್ಣಾಯಕ ಯುದ್ದದಲ್ಲಿ ಸಂಗಮೇಶ್ವರದಲ್ಲಿ ಕೇವಲ ನೂರರ ಲೆಕ್ಕದಲ್ಲಿ ಇರುವ ಸೈನಿಕರಿಗೆ ಛತ್ರಪತಿಯು ಹುರಿದುಂಬಿಸುವ ಮಾತುಗಳು ಪ್ರೇಕ್ಷಕರ ಮೈ ನವಿರೇಳಿಸುತ್ತದೆ.ನಾವೂ ಅವರ ಜೊತೆಯಲ್ಲಿ ಹರ ಹರ ಮಹಾದೇವ್ ,ಜೈ ಭವಾನಿ ಎನ್ನಬೇಕು ಎಂಬ ಭಾವ ಮೂಡುತ್ತದೆ.

 ಸಂಭಾಜಿಯ ಮೇಲೆ ಸಾವಿರದ ಲೆಕ್ಕದಲ್ಲಿ ಮುತ್ತಿಗೆ ಹಾಕಿದ ಮೊಘಲರ ಸೈನ್ಯಕ್ಕೆ ಮರಾಠರಲ್ಲಿ ಕೆಲ ದ್ರೋಹಿ ಬಂಧುಗಳು ರಹಸ್ಯ ಮಾಹಿತಿ ನೀಡಿದ್ದು ಕಂಡು ಸಂಭಾಜಿ ಮರುಗುತ್ತಾನೆ.

ಯುದ್ದದಲ್ಲಿ ಗಾಯಗೊಂಡ ಸಂಭಾಜಿಯನ್ನು ಸರಪಳಿ ಹಾಕಿ ಬಂಧಿಸಿ ಅವನೊಂದಿಗೆ ಅವನ ಗೆಳೆಯ ಕವಿ ಕಲಾಷ್ ನನ್ನ ಚಿತ್ರ ಹಿಂಸೆ ನೀಡಿ ಮತಾಂತರ ಮಾಡಲು ಬಲವಂತ ಮಾಡುವಾಗ ಸಂಭಾಜಿಯು ಪ್ರತಿರೋಧ ತೋರಿದ ರೀತಿಯನ್ನು ಚೆನ್ನಾಗಿ ಚಿತ್ರಿಸಲಾಗಿದೆ. ಸಂಭಾಜಿಯ ಕಣ್ಣುಗಳನ್ನು ಕಾದ ಕಬ್ಬಿಣದ ಕೆಂಪನೆಯ ಸರಳುಗಳಿಂದ ಕೀಳುವಾಗ ಸಂಕಟವಾಗುತ್ತದೆ. ಅವರ ಉಗುರು ಕೀಳುತ್ತಾರೆ, ಗಾಯಕ್ಕೆ ಉಪ್ಪು ಕಾರ ಹಾಕಿ ಹಿಂಸಿಸುವಾಗ ಸಂಭಾಜಿಯ  ನರಳದೇ  ಒಂದೇ ಪದ ಉಚ್ಚಾರ ಮಾಡುತ್ತಾರೆ ಅದೇ "ಜಗದಂಬಾ" 

ಕೊನೆಗೆ ನಾಲಿಗೆ ಕೀಳಿಸಿದಾಗಲೂ ಅಸ್ಪಷ್ಟವಾಗಿ ತಾಯಿ ನಾಮ ಸ್ಮರಣೆ ಮಾಡುತ್ತಾನೆ ಸಂಭಾಜಿ!

ಹೀಗೆ ಹಿಂಸಿಸುವಾಗ ದಖ್ಖನ್ ನಿಂದ ಒಂದು ಸುದ್ದಿ ಬರುತ್ತದೆ. ಅದು  ಯೇಸುಬಾಯಿ ರಾಜಾರಾಮ್ ನನ್ನ ಛತ್ರಪತಿ ಸ್ಥಾನದಲ್ಲಿ ಪ್ರತಿಷ್ಟಾಪಿಸಿದ್ದಾರೆ  ಎಂಬುದನ್ನು ತಿಳಿದಾಗ ಸಂಭಾಜಿಗೆ ನೋವಿನಲ್ಲೂ ನಲಿವಾದರೆ.ಔರಂಗಜೇಬ್ ನಿಂತಲ್ಲೇ ಕುಸಿಯುತ್ತಾನೆ.


ಒಟ್ಟಾರೆ ಛಾವ ಒಂದು ಐತಿಹಾಸಿಕವಾದ ಸ್ವರಾಜ್ಯ ಕಲ್ಪನೆಯನ್ನು ಎತ್ತಿ ಹಿಡಿಯುವ ಚಿತ್ರ  ದೇಶಭಕ್ತಿ ಸಾರುವ ಇಂತಹ ಚಿತ್ರವನ್ನು ಎಲ್ಲರೂ ನೋಡಬಹುದು.


ಸಿಹಿಜೀವಿ ವೆಂಕಟೇಶ್ವರ

ತುಮಕೂರು


ಶತೃಗಳ ತಲೆ ತೆಗೆಯುವ ಬದಲಿಗೆ ನಮ್ಮ ತಲೆಯಿಂದ ಅವರನ್ನು ತೆಗೆಯೋಣ.


 


ಶತೃಗಳ ತಲೆ ತೆಗೆಯುವ ಬದಲಿಗೆ 

ನಮ್ಮ ತಲೆಯಿಂದ ಅವರನ್ನು ತೆಗೆಯೋಣ.


ಮೊನ್ನೆ ಮಕ್ಕಳಿಗೆ ಶಾಲಾ ಪ್ರಾರ್ಥನೆಯ ಅವಧಿಯಲ್ಲಿ ಪತ್ರಿಕೆಯನ್ನು ಓದಿಸುವಾಗ ಅಂದಿನ ಸುಭಾಷಿತ ನನ್ನನ್ನು ಬಹಳ ಆಕರ್ಷಿಸಿತು ಅದು ಹೀಗಿತ್ತು.

"ನಮ್ಮ ಶತ್ರುವಿನ ಬಗ್ಗೆ ಸೇಡು ತೀರಿಸಿಕೊಳ್ಳಬೇಕು ಎಂದು ನಿಮಗನಿಸಿದರೆ ಶತೃವಿನ   ತಲೆ ತೆಗೆಯ ಬೇಕಿಲ್ಲ.ಅವರನ್ನು ನಮ್ಮ ತಲೆಯಿಂದ ತೆಗೆದರೆ ಸಾಕು" ಹೌದಲ್ಲವಾ? ಇದರ ಬಗ್ಗೆ ಮಕ್ಕಳಿಗೆ ಬಿಡಿಸಿ ಹೇಳಿದೆ.ಇದೇ ವಿಷಯಕ್ಕೆ ಸಂಬಂಧಿಸಿದಂತೆ ನನ್ನ ಗೆಳೆಯರೊಬ್ಬರು ಕಳಿಸಿದ ಸಂದೇಶ ಪೂರಕವಾಗಿದೆ.

ಜೀವನದಲ್ಲಿ ಕೆಲವರನ್ನು ನಾವೇ ಮೊದಲು ಕ್ಷಮಿಸಿಬಿಡಬೇಕು.

ಅವರು ಕ್ಷಮೆಗೆ ಅರ್ಹರು ಎಂದಾಗಲೀ, ಅವರು ಮಾಡಿದ ತಪ್ಪು ಕ್ಷುಲ್ಲಕ ಎಂದಾಗಲೀ ಅಲ್ಲ.

ಅವರು ಕ್ಷಮೆಗೆ ಅರ್ಹರು ಎಂಬುದಕ್ಕಿಂತ ನಮ್ಮ ಮನಃಶಾಂತಿ, ನೆಮ್ಮದಿ, ಸಮಾಧಾನ ಬಹಳ ಮುಖ್ಯ.

ಒಮ್ಮೆ ಅಂಥವರನ್ನು ಕ್ಷಮಿಸಿಬಿಟ್ಟರೆ ಅವರು ತಮ್ಮ ಪಾಡಿಗೆ ಹೋಗುತ್ತಾರೆ. ನಮ್ಮ ಪಾಡಿಗೆ ನಾವಿರಬಹುದು.

ಒಂದು ವೇಳೆ ಕ್ಷಮಿಸಲಿಲ್ಲ ಎಂದುಕೊಳ್ಳಿ. ಅವರ ವಿರುದ್ಧ ಇನ್ನೂ ಹಗೆ, ವೈರತ್ವ ಮುಂದುವರಿಸಿದರೆ ಏನಾಗುವುದೆಂದರೆ ನಾವು ಅವರ ಬಗ್ಗೆ ಅನಗತ್ಯ ಯೋಚಿಸಬೇಕಾಗುತ್ತದೆ.*

ನಮ್ಮ ಆಲೋಚನೆಯಲ್ಲಿ ಅವರು ನೆಲೆಸುತ್ತಾರೆ. ಅವರ ಬಗ್ಗೆ ಯೋಚಿಸಿದಾಗಲೆಲ್ಲ ನಮ್ಮ ಮೂಡು ಹಾಳಾಗುತ್ತದೆ. ಮನಸ್ಸು ಕದಡಿದ ನೀರಿನಂತಾಗುತ್ತದೆ. ಇದರಿಂದ ನಮ್ಮ ಗುಣಮಟ್ಟದ ಸಮಯವೂ ಇಂಥ ಕ್ಷುಲ್ಲಕ ಸಂಗತಿಗಳಿಗಾಗಿ ಹಾಳಾಗುತ್ತದೆ.

ಹೀಗೆ ಮಾಡುವುದರಿಂದ ಅವರದ್ದೇನೂ ಹೋಗುವುದಿಲ್ಲ. ನಮ್ಮ ಸಮಯ, ನೆಮ್ಮದಿಯೇ ಹಾಳಾಗುತ್ತದೆ.

ಅದರ ಬದಲು ಅಂಥ ವ್ಯಕ್ತಿಗಳನ್ನು ಕ್ಷಮಿಸಿ ಬಿಡಬೇಕು. ಅಷ್ಟರಮಟ್ಟಿಗೆ ನಮ್ಮ ಮನಸ್ಸು ನಿರ್ಮಲವಾಗುತ್ತದೆ, ಹಗುರವಾಗುತ್ತದೆ. ನಾವು ಆ ಹಾಳು ಯೋಚನೆಗಳಿಂದ ದೂರಾಗುತ್ತೇವೆ.

ಅಷ್ಟಕ್ಕೂ ಇಂಥ ಸಂಗತಿಗಳಲ್ಲೇ ಕಾಲ ಕಳೆಯಲು ನಾವೇನು ಸಾವಿರಾರು ವರ್ಷಗಳ ಕಾಲ ಇಲ್ಲಿ ಗೂಟ ಹೊಡೆದುಕೊಂಡು ಇರುತ್ತೇವಾ? ಕೆಲವು ವ್ಯಕ್ತಿ, ಸಂಗತಿ, ಬದುಕು ವಿಷಯಗಳನ್ನು ಅಲ್ಲಲ್ಲಿಯೇ ಬಿಟ್ಟು ಮುಂದಕ್ಕೆ ಹೋಗುತ್ತಿರಬೇಕು. ನಮ್ಮ ನೆಮ್ಮದಿಗೆ ಅದು ಅನಿವಾರ್ಯ.ಅಲ್ಲವೆ?


ಸಿಹಿಜೀವಿ ವೆಂಕಟೇಶ್ವರ

ತುಮಕೂರು

21 ಫೆಬ್ರವರಿ 2025

ಬ್ಯಾಂಕ್ ಗಳು ಗ್ರಾಹಕ ಸ್ನೇಹಿಯಾಗುವುದು ಯಾವಾಗ?

 




 ಕೆಲ  ಬ್ಯಾಂಕುಗಳು ಗ್ರಾಹಕ ಸ್ನೇಹಿಯಲ್ಲ.ಕರ್ನಾಟಕದ ಬ್ಯಾಂಕುಗಳಲ್ಲಿ ಕನ್ನಡೇತರ ಸಿಬ್ಬಂದಿಯಿಂದ ಕನ್ನಡ ಮಾತನಾಡದೇ ಅನ್ಯಭಾಷೆ ಮಾತನಾಡುವ ಪರಿಣಾಮ ಅಲ್ಲಲ್ಲಿ ಗ್ರಾಹಕ ಮತ್ತು ಬ್ಯಾಂಕ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯುತ್ತಿರುವುದನ್ನು ನೋಡುತ್ತೇವೆ. ಅದರ ಜೊತೆಗೆ  ಸೇವೆಗಳನ್ನು ನೀಡುವಾಗ ಅನವಶ್ಯಕ ವಿಳಂಬ ಮಾಡುವುದು. ಗ್ರಾಹಕರೊಂದಿಗೆ ಸೌಜನ್ಯವಾಗಿ ವರ್ತಿಸದಿರುವುದು ಅಲ್ಲಲ್ಲಿ ಕಂಡು ಬರುತ್ತವೆ. ನಿನ್ನೆ ದಿನ ಕ್ಯಾತ್ಸಂದ್ರ ದ ಕೆನರಾ ಬ್ಯಾಂಕ್ ಶಾಖೆಗೆ ಹಣ ಪಾವತಿ ಮಾಡಲು ಹೋದಾಗ ಹಣ ಪಾವತಿ ಸ್ಲಿಪ್ ಅನ್ಯ ರಾಜ್ಯದ ಭಾಷೆ ಪ್ರಿಂಟ್ ಇರುವುದನ್ನು ನೀಡಿದರು. ಕನ್ನಡ ಮತ್ತು ಇಂಗ್ಲೀಷ್ ಮುದ್ರಣದ ಸ್ಲಿಪ್ ಕೊಡಿ ಎಂದಾಗ ಅಲ್ಲಿಯ ಸಿಬ್ಬಂದಿ ಉಡಾಫೆಯಿಂದ ಉತ್ತರಿಸಿದರು.  ನಾನು ಮ್ಯಾನೇಜರ್ ಭೇಟಿ ಮಾಡಿ ವಿಷಯ ಮುಟ್ಟಿಸಿದಾಗ ಅವರು ಕ್ಷಮೆ ಕೇಳಿ ಕನ್ನಡ ಚಲನ್ ಕೊಟ್ಟರು. ಬೇಕಾಬಿಟ್ಟಿ ಸರ್ವೀಸ್ ಚಾರ್ಜ್ ಹಾಕುವ  ಈ ಬ್ಯಾಂಕ್ ಗಳು ಸೇವೆ ನೀಡುವಲ್ಲಿ ಅಸಡ್ಡೆ ತೋರುವ ತನ್ನ ಸಿಬ್ಬಂದಿಗಳಿಗೆ  ಯಾಕೆ ಬುದ್ದಿ ಕಲಿಸಲ್ಲ. ಕೆಲ ಬ್ಯಾಂಕ್  ಸಿಬ್ಬಂದಿ ಯಾಕೆ ಹೀಗೆ?ಇವರು ಗ್ರಾಹಕ ಸ್ನೇಹಿ ಆಗುವುದು ಯಾವಾಗ?


ಸಿಹಿಜೀವಿ ವೆಂಕಟೇಶ್ವರ

ತುಮಕೂರು

 

20 ಫೆಬ್ರವರಿ 2025

ಕಳೆದು ಹೋದ ಪತ್ರಗಳು..

 




ಆ ಪತ್ರಗಳು ಈಗ ಕಳೆದುಹೋಗಿವೆ. ಸ್ಮಾರ್ಟ್ ಪೋನ್, ಲ್ಯಾಪ್‌ಟಾಪ್, ಸಿಸ್ಟಮ್ ಯುಗದಲ್ಲಿ ಬರೆಯುವ ಕಲೆ ಕ್ರಮೇಣವಾಗಿ ಕಡಿಮೆಯಾಗುತ್ತಿದೆ.  ತೀರ್ಥರೂಪ ತಂದೆಯವರಿಗೆ...ಉ. ಕು .ಸಾಂಪ್ರತ ಎಂಬ  ಯೋಗಕ್ಷೇಮದ ವಾಕ್ಯಗಳ ಮೂಲಕ,ನಲ್ಮೆಯ ಗೆಳಯ/ ಗೆಳತಿಗೆ ಸವಿನೆನಪುಗಳು ಮುಂತಾದ ವಾಕ್ಯಗಳಿಂದ  ಆರಂಭವಾಗುತ್ತಿದ್ದ  ಆ ಪತ್ರಗಳು  ಹಿರಿಯರ ಪಾದಗಳಲ್ಲಿ ಆಶೀರ್ವಾದ ಬೇಡುತ್ತಲೋ ನಲ್ಲನಲ್ಲೆಯರ ಸಿಹಿಮುತ್ತುಗಳ ನಿರೀಕ್ಷೆಯಲ್ಲಿ ಕೊನೆಗೊಳ್ಳುತ್ತಿದ್ದವು.  ನವಜಾತ ಶಿಶುವಿನ ಸುದ್ದಿ, ತಾಯಿಯ ಅನಾರೋಗ್ಯದ ನೋವು, ಹಣವನ್ನು ಕಳುಹಿಸುವ ಮನವಿ, ಮತ್ತು ವಿಫಲವಾದ ಬೆಳೆಗಳಿಗೆ ಕಾರಣಗಳು...! ಆ ಸರಳ "ನೀಲಿ ಮತ್ತು ಹಳದಿ  ಕಾಗದದ ಹಾಳೆ"ಯಲ್ಲಿ ನಮ್ಮ ಮನದ  ಭಾವನೆಗಳನ್ನು ಬೇರೆಡೆ ಇರುವ ನಮ್ಮ ಬಂಧುಗಳ ಜೊತೆಯಲ್ಲಿ ಹಂಚಿಕೊಳ್ಳುತ್ತಿದ್ದೆವು. 

ಯುವ ವಧು  ತನಗೆ ಬಂದ ಪತ್ರವನ್ನು ಎದೆಗಪ್ಪಿಕೊಂಡು ಏಕಾಂತದಲ್ಲಿ ಅದನ್ನು  ಓದಲು ಓಡಿಹೋಗುತ್ತಿದ್ದಳು.ಕಣ್ಣೀರಿನಿಂದ ತುಂಬಿದ ಕಣ್ಣುಗಳು. ಅದು ತಾಯಿಯ ಭರವಸೆ, ತಂದೆಯ ಬೆಂಬಲ, ಮಕ್ಕಳ ಭವಿಷ್ಯ ಮತ್ತು ಹಳ್ಳಿಯ ಹೆಮ್ಮೆ ಹೀಗೆ ಪತ್ರಗಳಲ್ಲಿ ಎಲ್ಲವೂ ಅಡಗಿರುತ್ತಿದ್ದವು.

 "ಪೋಸ್ಟ್‌ಮ್ಯಾನ್ ತಂದ  ಪತ್ರವನ್ನು ಅನಕ್ಷರಸ್ಥರಿಗೆ ಕೊಟ್ಟರೆ   ಯಾ‌‌‌ರಾದರೂ ಅದನ್ನು ಗಟ್ಟಿಯಾಗಿ ಓದುತ್ತಿದ್ದರು. ಅನಕ್ಷರಸ್ಥರು ಸಹ ಆ ಪತ್ರಗಳನ್ನು  ಮತ್ತೆ ಮತ್ತೆ ಸ್ಪರ್ಶಿಸುತ್ತಾ, ಒಳಗೆ ಬರೆದ ಭಾವನೆಗಳನ್ನು ಅನುಭವಿಸಲು ಪ್ರಯತ್ನಪಡುತ್ತಿದ್ದರು!

ಈಗ ಒಂದು ಬೆರಳು ಪರದೆಯ ಮೇಲೆ ಸ್ಕ್ರಾಲ್ ಮಾಡುತ್ತಾ ಬರೆಯುವ ಯಾಂತ್ರಿಕ ಬರಹಗಳಿಗೆ ಹೃದಯ ಬೆಸೆಯುವ ಶಕ್ತಿಗಿಂತ  ಹೃದಯಗಳನ್ನು ಮುರಿಯುತ್ತವೆಯೇನೋ ಎಂಬ ಭಾವನೆ ಬರುತ್ತದೆ. ಪತ್ರಗಳನ್ನು ಹತ್ತಾರು ವರ್ಷ ಕಾಪಿಟ್ಟುಕೊಂಡು ಮತ್ತೆ ನೋಡುತ್ತಾ ಓದುತ್ತಾ ಸಂಭ್ರಮಿಸುವವರು ಬಹಳ ಇದ್ದೇವೆ. ಈ ಆಧುನಿಕ ಯುಗದಲ್ಲಿ ಎಂತಹ ಭಾವನೆಗಳಿರುವ ಬರಹವಾದರೂ  ಫೋನ್‌ನಲ್ಲಿ  ಸ್ಟೋರೇಜ್ ಇಲ್ಲದಿದ್ದರೆ ತಕ್ಷಣವೇ ಡಿಲೀಟ್ ಭಾಗ್ಯ ಲಭಿಸುತ್ತದೆ. ಭಾರತದ ಹೆಮ್ಮೆಯ ಪೋಸ್ಟಲ್ ಡಿಪಾರ್ಟ್‌ಮೆಂಟ್ ‌ನ ಹಳದಿ ಮತ್ತು   ನೀಲಿ ಕಾಗದಗಳ ನಂಟು ನನಗಂತೂ ಪದೇ ಪದೇ ನೆನಪಾಗುತ್ತದೆ. ನಿಮಗೆ?


ಸಿಹಿಜೀವಿ ವೆಂಕಟೇಶ್ವರ

ತುಮಕೂರು

 

ದುಬಾರಿ ಬೆಲೆಯ ರೂಬಿ ರೋಮನ್ ದ್ರಾಕ್ಷಿ!


 


ದುಬಾರಿ ಬೆಲೆಯ   ರೂಬಿ ರೋಮನ್ ದ್ರಾಕ್ಷಿ! 

 ದ್ರಾಕ್ಷಿ ದರ ಕೆ.ಜಿಗೆ 8 ಲಕ್ಷ ರೂ.! ದುಬಾರಿ ದ್ರಾಕ್ಷಿಯನ್ನು ಕೊಪ್ಪಳ  ಭಾಗದ ರೈತರು ಕಣ್ಣುಂಬಿಕೊಳ್ಳುವ  ಸದುದ್ದೇಶದಿಂದ ಜಿಲ್ಲಾ ತೋಟಗಾರಿಕೆ ಇಲಾಖೆ ವಿಶಿಷ್ಟ ಪ್ರಯೋಗಕ್ಕೆ ಮುಂದಾಗಿದೆ.


ಶಿವರಾತ್ರಿ ಅಂಗವಾಗಿ ಫೆ.23ರಿಂದ ನಗರದಲ್ಲಿ ನಡೆಯಲಿರುವ 'ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ' ದುಬಾರಿ ಬೆಲೆಯ ದ್ರಾಕ್ಷಿಗೆ ವೇದಿಕೆ ಒದಗಿಸಲಿದೆ. ಹಣ್ಣುಗಳ ಪ್ರದರ್ಶನ ವೇಳೆ ಸದಾ ಒಂದಲ್ಲ ಒಂದು ಹೊಸತನದ ಮೂಲಕ ಗಮನ ಸೆಳೆಯುತ್ತಿರುವ ಜಿಲ್ಲಾ ತೋಟಗಾರಿಕೆ ಇಲಾಖೆ, ಈ ಬಾರಿ ಜಪಾನ್ ಮೂಲದ ರೂಬಿ ರೋಮನ್ ದ್ರಾಕ್ಷಿಯನ್ನು ಪ್ರದರ್ಶಿಸಲು ಸಿದ್ದತೆ ನಡೆಸಿದೆ. ಪ್ರಸಕ್ತ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಕಾಲು ಕೆ.ಜಿ ದ್ರಾಕ್ಷಿ ಮಾತ್ರ ನೋಡಲು ಸಿಗಲಿದೆ.


ರೂಬಿ ರೋಮನ್ ವಿಶೇಷವೆಂದರೆ

ಜಪಾನ್ ದೇಶದಲ್ಲಿ ಸಾಮಾನ್ಯವಾಗಿ ಬೆಳೆಯುವ ವಿಶಿಷ್ಟ ತಳಿಯ ದ್ರಾಕ್ಷಿಯ ಹೆಸರೇ ರೂಬಿ ರೋಮನ್.ಆಕರ್ಷಕ ಕೆಂಪು ಬಣ್ಣದಿಂದ ಕೂಡಿದೆ. ವಿಟೀಸ್ ಲ್ಯಾಬೂನ್ಯನಾ ಬೇಲಿ ಈ ಹಣ್ಣಿನ ವೈಜ್ಞಾನಿಕ ಹೆಸರು. ಜಪಾನ್ ದೇಶದಲ್ಲಿ 2008ರ ವೇಳೆ ಈ ಹಣ್ಣಿನ ಬೆಲೆ 700 ಗ್ರಾಂಗೆ 1 ಲಕ್ಷ ರೂ. ವರೆಗೆ ಇತ್ತು. ವರ್ಷದಿಂದ ವರ್ಷಕ್ಕೆ ಖ್ಯಾತಿ ಪಡೆದು ಬೆಲೆ ಗಗನಮುಖ ಮಾಗಿದೆ. ಸದ್ಯ ಕೆ.ಜಿಗೆ 8 ಲಕ್ಷ ರೂ. ವರೆಗೆ ಬೆಲೆಯಿದೆ.