25 ಅಕ್ಟೋಬರ್ 2023

ಕಾರ್ಬಿನ್ ಕೋವ್ ಬೀಚ್.ನನ್ನ ಬ್ಲಾಗ್ ನ .2000 ಪೋಸ್ಟ್ ನ ಸಂಭ್ರಮ

 


ನಯನ ಮನೋಹರ ಕೋರ್ಬಿನ್ ಕೋವ್ ಬೀಚ್..



ನಯನ ಮನೋಹರ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಮತ್ತು ಜಲ ಸಾಹಸ ಕ್ರೀಡೆಗಳಿಗೆ ಹೆಸರಾದ ಅಂಡಮಾನ್ ನ ಬೀಚ್ ಗಳಲ್ಲಿ ಕಾರ್ಬಿನ್ ಕೋವ್ ಪ್ರಮುಖ ಬೀಚ್.


ಇದು  ಪೋರ್ಟ್ ಬ್ಲೇರ್ನ ಅತಿ ಹೆಚ್ಚು ಭೇಟಿ ನೀಡುವ ಬೀಚ್ ಸಹ  ಆಗಿದೆ.  ಎಟರ್ನಲ್ ಅಂಡಮಾನ್ನ 2017 ರ ಸಮೀಕ್ಷೆಯ ಪ್ರಕಾರ  10 ರಲ್ಲಿ 7 ಜನರು ಅಂಡಮಾನ್  ದ್ವೀಪಗಳಿಗೆ ಭೇಟಿ ನೀಡುವ ಪ್ರವಾಸಿಗರು  ತಮ್ಮ ಪ್ರವಾಸದಲ್ಲಿ  ಈ  ಬೀಚ್ಗೆ ಭೇಟಿ ನೀಡುತ್ತಾರೆ. 


ಕಾರ್ಬಿನ್ಸ್ ಕೋವ್ ಕಡಲತೀರವು ಪೋರ್ಟ್ ಬ್ಲೇರ್ನಲ್ಲಿ 1.5 ಕಿಮೀ ಉದ್ದದವರೆಗೆ ಅರ್ಧಚಂದ್ರಾಕಾರದ ಆಕಾರದಲ್ಲಿ ನಿರ್ಮಿಸಲಾದ ಅತ್ಯಂತ ಉದ್ದವಾದ ತೀರವನ್ನು ಹೊಂದಿದೆ.

ಆ ತೀರದಗುಂಟ ಸಮಾನ ಮನಸ್ಕರ ಜೊತೆಯಲ್ಲಿ ನಡೆಯುವುದೇ ಒಂದು ಸುಂದರ ಅನುಭವ. ಪ್ರೇಮಿಗಳು ದಂಪತಿಗಳು ,ಕುಟುಂಬ ಸಮೇತವಾಗಿ ಸಂಜೆಗೆ ಈ ಬೀಚ್ ಗೆ ಭೇಟಿ ನೀಡುವ ಜನ ಹೆಚ್ಚಾಗಿರುವರು.


ಬಲಭಾಗದಲ್ಲಿ ಸಾಲಾಗಿ ನಿಂತ ತೆಂಗಿನ ಮರಗಳು ಎಡಭಾಗದಲ್ಲಿ ಬಿಳಿ ಮರಳು ಹಸಿರು ಮತ್ತು ನೀಲಿ ಬಣ್ಣದ ನೀರು ನಮ್ಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ. ನಾವು ಬೀಚ್ ನಲ್ಲಿ ನಡೆಯುವಾಗ ಐಸ್ ಕ್ಯಾಂಡಿ ,ಚುರುಮುರಿ ಮಾರುವವರು ಅಡ್ಡಲಾಗಿ ತಮ್ಮ ಪದಾರ್ಥಗಳನ್ನು ಮಾರಲು ಪ್ರಯತ್ನಿಸುವರು.

ನಾವು ಒಂದು ಚುರುಮುರಿ ಕೊಂಡು ತಿಂದೆವು. ರುಚಿ ಕರ್ನಾಟಕದ ರುಚಿಗೆ ಹತ್ತಿರವಿತ್ತು ಆದರೆ ಪ್ರಮಾಣ ಕಡಿಮೆ ಹಣ ಜಾಸ್ತಿ! 


ತೀರದಲ್ಲಿ  ಒಂದು ಕಿಲೋಮೀಟರ್ ವಾಕ್ ಮಾಡಿದ ಮೇಲೆ ನಮಗೆ ಕೆಲವು ಶಿಥಿಲವಾದ ಬಂಕರ್ ಗಳು ಕಾಣುತ್ತವೆ. ಅವು ಎರಡನೇ ಮಹಾಯುದ್ಧದ ಸಮಯದಲ್ಲಿ ಜಪಾನ್ ನವರು ನಿರ್ಮಿಸಿದ ಬಂಕರ್ ಗಳು ಎಂದು ನಮ್ಮ ಟ್ರಾವೆಲ್ ಗೈಡ್ ಮಾಹಿತಿ ನೀಡಿದನು.  

ನಾವು ಬೀಚ್ ನಲ್ಲಿ ವಾಕ್ ಮಾಡುತ್ತಾ ಸೌಂದರ್ಯವನ್ನು ಸವಿಯುವಾಗ ಜೆಟ್ ಸ್ಕಿ, ಬೋಟ್ ರೈಡಿಂಗ್ , ಮುಂತಾದ ವಾಟರ್ ಗೇಮ್ಸ್  ನಲ್ಲಿ ‌ನಿರತ ಯುವಕರು ನೀರಾಟದಲ್ಲಿ ಮೈಮರೆತಿರುವುದನ್ನು ಗಮನಿಸಿದೆ.


ಸ್ವಲ್ಪ ದೂರ ಸಾಗಿದ ನಮಗೆ ಮತ್ತೊಂದು ಬಂಕರ್ ಎದುರಾಯಿತು.

 ಅಲ್ಲಿ ನಿಂತು ನೋಡಿದರೆ  ಹಾವು ದ್ವೀಪವನ್ನು ಕಾಣಬಹುದು.

ಕಡಲತೀರದ ಕೆಳಗೆ ಮತ್ತಷ್ಟು ಬಲಕ್ಕೆ ನಡೆದರೆ, ನೀವು ದೊಡ್ಡ ಮೀನುಗಾರಿಕೆ ದೋಣಿಗಳನ್ನು ಕಾಣಬಹುದು ಮತ್ತು ಹೇರಳವಾಗಿ ದಟ್ಟವಾದ ಮ್ಯಾಂಗ್ರೋವ್ ಕಾಡುಗಳ ಕಾಣಬಹುದು.

 ಹೀಗೆ ಕಾರ್ಬಿನ್ ಕೋವ್ ಬೀಚ್ ನ ಸೌಂದರ್ಯ ಸವಿಯುವ ನಮ್ಮ ಮನಗಳಿಗೆ ಸೂರ್ಯ ದೇವ ಸಂಜೆ 4 .45 ಕ್ಕೆ ಅಸ್ತಂಗತವಾಗಿ  ತಣ್ಣೀರೆರಚಿಬಿಟ್ಟ! ಅಂಡಮಾನ್ ನಲ್ಲಿಯೇ ಹಾಗೆ ಬೆಳಿಗ್ಗೆ ನಾಲ್ಕುವರೆಗೆ ಸೂರ್ಯೋದಯ ಸಂಜೆ ನಾಲ್ಕುಮಕ್ಕಾಲಿಗೆ ಸೂರ್ಯಾಸ್ತ!


ಒಟ್ಟಾರೆಯಾಗಿ ನೀವು ಅಂಡಮಾನ್ ಪ್ರವಾಸ ಕೈಗೊಂಡರೆ  ಪೋರ್ಟ್ ಬ್ಲೇರ್ನಲ್ಲಿ ನೀವು ಭೇಟಿ ನೀಡಬಹುದಾದ ಅತ್ಯುತ್ತಮ ಕಡಲತೀರಗಳಲ್ಲಿ ಕಾರ್ಬಿನ್ ಕೋವ್ ಬೀಚ್ ಸಹ   ಒಂದಾಗಿದೆ. ಎಂದು ಹೇಳಬಹುದು.


ಸಿಹಿಜೀವಿ ವೆಂಕಟೇಶ್ವರ

ತುಮಕೂರು

 





24 ಅಕ್ಟೋಬರ್ 2023

ಚಾರಣ ಪ್ರಿಯರ ಸ್ವರ್ಗ ಸಾವನದುರ್ಗ...

 


ಚಾರಣ ಪ್ರಿಯರ ಸ್ವರ್ಗ  ಸಾವನದುರ್ಗ

ಪರಿಸರ ಪ್ರಿಯರನ್ನು ಮತ್ತು ಚಾರಣ ಪ್ರಿಯರನ್ನು ಕೈ ಬೀಸಿ ಕರೆವ ತಾಣವಾದ ಸಾವನದುರ್ಗಕ್ಕೆ ಸಹೋದ್ಯೋಗಿಗಳ ಜೊತೆಗೂಡಿ ಕಳೆದ ತಿಂಗಳು ಭೇಟಿ ನೀಡಿದ್ದೆವು. ಮಾಗಡಿ ದಾಟಿದ ಕೂಡಲೇ ಕಾಡಿನ ಮರಗಳು ನಮ್ಮನ್ನು ಸ್ವಾಗತಿಸಿ ತಂಪಾದ ಗಾಳಿಯನ್ನು ಸೂಸುತ್ತವೆ. ಮರಗಿಡಗಳ ಸೌಂದರ್ಯವನ್ನು  ಸವಿಯುತ್ತಾ ದಾರಿ ಸಾಗಿದ್ದೇ ಗೊತ್ತಾಗುವುದಿಲ್ಲ. "ಅಗೋ ನೋಡಿ ಅದೇ ಸಾವನ ದುರ್ಗ" ಎಂಬ ಸಹೋದ್ಯೋಗಿಗಳ ಉದ್ಘಾರ ಕೇಳಿದಾಗ ಕಾರ್ ಸ್ಲೋ ಮಾಡುತ್ತಾ ಎಡಕ್ಕೆ ನೋಡಿದಾಗ ಕಂಡ ಅದ್ಭುತ ದೃಶ್ಯ ಕಾವ್ಯ! ಬೃಹತ್ ಬಂಡೆಯ ದುರ್ಗ ಅದೇ ಸಾವನ ದುರ್ಗ.
ಏಷ್ಯಾ ಖಂಡದಲ್ಲೇ ಸಾವನ ದುರ್ಗದ ಬೆಟ್ಟ ಅತೀ ದೊಡ್ಡ ನೈಸರ್ಗಿಕ ಏಕಶಿಲಾ ರಚನೆಯಾಗಿದ್ದರೆ, ಮಧುಗಿರಿಯ ಬೆಟ್ಟ ಏಷ್ಯಾದ ಎರಡನೇ ಅತೀ ದೊಡ್ಡ ಏಕಶಿಲಾ ಬೆಟ್ಟವೆಂದು ಖ್ಯಾತವಾಗಿದೆ. ಸಾವನ ದುರ್ಗ ಬೆಟ್ಟ 1226 ಮೀಟರ್ ಎತ್ತರವಿದೆ. ಇಷ್ಟೇ ಅಲ್ಲದೆ ವೈಜ್ಞಾನಿಕವಾಗಿ ದಖನ್ ಪ್ರಸ್ಥ ಭೂಮಿಯಲ್ಲಿ ಮುಖ್ಯ ಭಾಗವಾಗಿದೆ. ಬೆಟ್ಟದ ಮೇಲೆ ಸುರಿದ ಮಳೆಯೆಲ್ಲ ಅರ್ಕಾವತಿ ನದಿಗೆ ಸೇರಲಿದ್ದು ಅರ್ಕಾವತಿಗೆ ಕಟ್ಟಲಾಗಿರುವ ಮಂಚನಬೆಲೆ ಜಲಾಶಯ ಕೂಡ ಸಾವನದುರ್ಗಕ್ಕೆ ಸನಿಹದಲ್ಲಿದ್ದು ಬೆಟ್ಟ ಹತ್ತಿದರೆ ಕಾಣುತ್ತದೆ. ಸಾವನದುರ್ಗದ ಬೆಟ್ಟ ಸಾಹಸಿ ಚಾರಣಿಗರಿಗೆ ಹೇಳಿ ಮಾಡಿಸಿದಂತಿದ್ದು ಕೊಂಚ ಅಪಾಯಕಾರಿ ಸ್ಥಳವೂ ಕೂಡ. ಸಾವನ ದುರ್ಗದ ಬೆಟ್ಟದ ಪಾತ್ರದಲ್ಲಿ ಎರಡು ದೊಡ್ಡ ಬೆಟ್ಟಗಳಿದ್ದು ಒಂದನ್ನು ಕರಿ ಗುಡ್ಡ ಹಾಗು ಮತ್ತೊಂದನ್ನು ಬಿಳಿಗುಡ್ಡ ಎಂದು ಕರೆಯಲಾಗುತ್ತದೆ. ಕ್ರಿ.ಶ 1340ರ 3 ನೇ ಹೊಯ್ಸಳ ಬಲ್ಲಾಳನ ಮಾಡಬಾಳ್ ನಲ್ಲಿ ದೊರಕಿರುವ ದಾಖಲೆಯ ಪ್ರಕಾರ ಈ ಬೆಟ್ಟವನ್ನು ಸಾವಂದಿ ಎಂದು ಕರೆಯಲಾಗಿದೆ.  ಸಾವನ ದುರ್ಗಾ ಎಂಬ ಹೆಸರು ಬರಲು ಇದನ್ನು ಮುಖ್ಯ ಕಾರಣವಾಗಿ ಪರಿಗಣಿಸಿದರೂ ಮತ್ತೊಂದು ವಾದವಾಗಿ ಸಮಂತರಾಯ ಎಂಬ ಹೆಸರಿನಿಂದ ಸಾವನದುರ್ಗ ಹೆಸರು ಬಂದಿದೆ ಎನ್ನಲಾಗುತ್ತಿದೆ. ಸಾಮಂತರಾಯನು ವಿಜಯನಗರ ಸಾಮ್ರಾಜ್ಯದ ಅಚ್ಯುತರಾಯನಲ್ಲಿ ಸಾಮಂತ ರಾಜನಾಗಿದ್ದವನು. ಆತನಿದ್ದ ಸ್ಥಳ ಮಾಗಡಿ ಪ್ರದೇಶವೇ ಆಗಿದ್ದ ಕಾರಣ ಅವನ ಹೆಸರೇ ಬಂದಿದೆ ಎನ್ನುವ ಊಹೆಗಳಿವೆ.  1638 ರಿಂದ 1728 ರ ವರೆವಿಗೂ ಕೆಂಪೇಗೌಡರ ಎರಡನೇ ರಾಜಧಾನಿಯಾಗಿತ್ತು ಸಾವನದುರ್ಗ. ವಿಜಯನಗರ ಸಾಮ್ರಾಜ್ಯ ಪತನಾನಂತರ ಕೆಲ ಕಾಲದಲ್ಲೇ ಕೆಂಪೇಗೌಡರು ಮಡಿದಾಗ ಮೈಸೂರಿನ ದಳವಾಯಿ ಮಾಗಡಿ ಪ್ರದೇಶವನ್ನು ಆಕ್ರಮಿಸಿಕೊಂಡರು. ಅಲ್ಲಿಂದ ಮುಂದೆ ಮೈಸೂರಿನ ಟಿಪ್ಪುಸುಲ್ತಾನ್ ಆಡಳಿತಕ್ಕೆ ಒಳಪಟ್ಟ ಸಾವನ ದುರ್ಗವನ್ನು ಟಿಪ್ಪು ಸುಲ್ತಾನ್ ಶಿಕ್ಷಿಸುವ ತಾಣವಾಗಿಸಿಕೊಳ್ಳುತ್ತಾನೆ. ತನ್ನ ಸಾಮ್ರಾಜ್ಯದಲ್ಲಿ ಯಾರಾದರೂ ಘೋರ ಅಪರಾಧ ಮಾಡಿದರೆ ಅವರನ್ನು ಬೆಟ್ಟದ ಮೇಲಿನಿಂದ ತಳ್ಳುವ ಶಿಕ್ಷೆಗೆ ಗುರಿಪಡಿಸುತ್ತಿದ್ದನಂತೆ. ಈ ಕಾರಣದಿಂದ ಈ ಸ್ಥಳಕ್ಕೆ ಸಾವಿನ ದುರ್ಗ ಎಂಬ ಹೆಸರು ಬಂದಿದ್ದು, ಮುಂದೆ ಸಾವನ ದುರ್ಗ ಎಂದಾಗಿದೆ ಎಂದು ಕೆಲವರು ತಮ್ಮ ಅಭಿಪ್ರಾಯ ಮಂಡಿಸುತ್ತಾರೆ.ಮುಂದೆ ಟಿಪ್ಪು ಸುಲ್ತಾನನಿಂದ ಮೂರನೇ ಆಂಗ್ಲೋಮೈಸೂರು ಯುದ್ಧದಲ್ಲಿ ಮಾಗಡಿ ಪ್ರದೇಶವನ್ನು ಲಾರ್ಡ್ ಕಾರ್ನ್ ವಾಲಿಸ್ ವಶಪಡಿಸಿಕೊಂಡನು. ಬೆಟ್ಟದ ಬುಡದಲ್ಲಿ ಸಾವಂದಿ ವೀರಭದ್ರ ದೇವರ ಗುಡಿ ಹಾಗು ಲಕ್ಷ್ಮಿ ನರಸಿಂಹ ದೇವರ ಗುಡಿಗಳಿವೆ. ಕರ್ನಾಟಕ ಸರ್ಕಾರ ನಿಭಾಯಿಸುತ್ತಿರುವ ಸಣ್ಣ ಅರಣ್ಯ ಪ್ರದೇಶವು ಇಲ್ಲಿದೆ. 'ಎ ಪ್ಯಾಸೇಜ್ ಟು ಇಂಡಿಯಾ' ಎನ್ನುವ ಹಾಲಿವುಡ್ ಚಿತ್ರವೂ ಸೇರಿದಂತೆ ಬಹಳಷ್ಟು ಚಲನಚಿತ್ರ ಮತ್ತು ಧಾರಾವಾಹಿಗಳ ಚಿತ್ರೀಕರಣ ಸಾವನದುರ್ಗದ ಬೆಟ್ಟ ಪ್ರದೇಶಗಳ ಸುತ್ತ ಮುತ್ತ ಚಿತ್ರೀಕರಿಸಲಾಗಿದೆ.
ವೀಕೆಂಡ್ ನಲ್ಲಿ ಟೆಕ್ಕಿಗಳು ಮತ್ತು ಪ್ರೇಮಿಗಳನ್ನು ಸಾವನ ದುರ್ಗ ಕೈ ಬೀಸಿ ಕರೆಯುತ್ತದೆ.
ಆಸ್ತಿಕರು ಮತ್ತು ಭಕ್ತಾದಿಗಳು
ಸಾವಂದಿ ವೀರಭದ್ರ ದೇವಾಲಯ ಹಾಗು ಲಕ್ಷ್ಮಿ ನರಸಿಂಹ ದೇವರ ದೇವಾಲಯ ಸಂದರ್ಶಿಸಿ ಪುನೀತರಾಗಲು ಸಾವನ ದುರ್ಗದ ಕಡೆ ಪಯಣ ಬೆಳೆಸುತ್ತಾರೆ. ನೀವು ಇದುವರೆಗೂ ಸಾವನದುರ್ಗ ನೋಡಿಲ್ಲವಾದರೆ ಈ ವಾರವೇ ಸಾವನದುರ್ಗಕ್ಕೆ ಹೊರಡಲು ಪ್ಲಾನ್ ಮಾಡಿ...

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529

ಸಾವಿರ ನೆನಪುಗಳು...

 



ಸಾವಿರ ನೆನಪುಗಳು...


ಕೆಲವು ನೆನಪುಗಳೇ ಹಾಗೆ ಪದೇ ಪದೇ ನಮ್ಮನ್ನು ಕಾಡುತ್ತವೆ. ಪುಳಕಗೊಳಿಸುತ್ತವೆ. ಪುನಃ ಪುನಃ ಬಂದು ಮನಕಾನಂದ ನೀಡುತ್ತವೆ. ಮೊನ್ನೆ ಯಾರೋ ಗೆಳೆಯರು ಅವರ ಬಾಲ್ಯ ಮತ್ತು ಯೌವನದ ಹೈಲೈಟ್ ಇರುವ ಮುನ್ನಾಯಿಸಿದ ಸಂದೇಶ ಕಳಿಸಿದ್ದರು. ಅದೇ ಸಮಯಕ್ಕೆ ಮಾರ್ನಾಮಿ ಹಬ್ಬಕ್ಕೆ ನಮ್ಮ ಊರಿಗೆ ಹೋಗಿದ್ದೆ. ಆಗ ನನ್ನ ಬಾಲ್ಯದ ನೆನಪುಗಳು ಒತ್ತರಿಸಿ ಬಂದವು.ಈ ಲೇಖನ ಓದಿ ನಿಮ್ಮ ಬಾಲ್ಯ ನೆನಪಾಗಬಹುದು.


ಆಗ ನಮ್ಮ ಊರ ಕೇರಿಯಲ್ಲಿ ಜುಂಜಪ್ಪಯ್ಯನವರ  ಮನೆಯಲ್ಲಿ ಮಾತ್ರ ರೇಡಿಯೋ ಇತ್ತು ಮಧ್ಯಾಹ್ನ ಒಂದೂವರೆಗೆ "ನಿಮ್ಮ ಮೆಚ್ಚಿನ ಚಿತ್ರಗೀತೆ "ಕೇಳಲು ನಾವು ಹಾಜರಾಗುತ್ತಿದ್ದೆವು.

 ಒಂದು  ಸಲ  ರೇಡಿಯೋನಲ್ಲಿ ಕೇಳಿದರೆ ಸಾಕು ಸಿನಿಮಾ ಹಾಡು  ಬಾಯಿಪಾಠ ಆಗ್ತಿತ್ತು. ಗೌರಿ ಮೊಗವು ಚಂದಿರನಂತೆ.... ನನ್ನ ನಿನ್ನ ಆಸೆ ನನ್ನ ಪ್ರೇಮು ಭಾಷೆ... ಹಸಿರು ಗಾಜಿನ ಬಳೆಗಳೆ... ಮುಂತಾದ ಹಾಡುಗಳು ಈಗಲೂ ನೆನಪಾಗುತ್ತವೆ.

ಪರ ಊರುಗಳಿಗೆ ಪಯಣಿಸಲು ಬಸ್ ಗಳಲ್ಲಿ ಕುಳಿತಿದ್ದರೆ ನಿಂಬಿ‌ಹುಳಿ ಪೇಪರ್ ಮೆಂಟ್ , ಬಿಸ್ಕೆಟ್ ಮಾರಲು ಬಂದು ನಮಗೆ ಮಾರಿ ಹೋಗುತ್ತಿದ್ದರು.

ಸೈಕಲ್ ಎಲ್ಲರ ಮನೆಯಲ್ಲಿ ಇರಲಿಲ್ಲ .ನಮ್ಮ ಬೀದಿಯ ಬಸವರಾಜನ ಮನೆಯಲ್ಲಿ ಮಾತ್ರ ಸೈಕಲ್ ಇತ್ತು ಅವನನ್ನು ಕಾಡಿ ಬೇಡಿ ಒಂದು ರೌಂಡ್ ಸೈಕಲ್ ಪಡೆದು ಓಡಿಸುತ್ತಿದ್ದೆ.


ಆಗ ‌ನಮ್ಮೂರಲಿ ಯಾರ ಮನೆಯಲ್ಲಿ ಮದುವೆಯಾದರೂ ನಮ್ಮ ಮದುವೆಯಂತೆ ಸಂಭ್ರಮಿಸುತ್ತಿದ್ದೆವು.ಮದುವೆ ಅಡುಗೆಗೆ ಕಾಡಿ‌ನಿಂದ ಎತ್ತಿನಗಾಡಿಯಲ್ಲಿ ಸೌದೆ ತರುವುದು, ಅಕ್ಕಿ, ದವಸ ಹಸನು ಮಾಡುವುದು, ಹಪ್ಪಳ ಸಂಡಿಗೆ ಮಾಡುವುದು ಚಪ್ಪರ ಹಾಕುವುದು ಊಟ ಬಡಿಸುವುದು ಮುಂತಾದ ಕೆಲಸಗಳನ್ನು ಹಂಚಿಕೊಂಡು ಮಾಡಿ ಸಂತಸ ಪಡುತ್ತಿದ್ದೆವು.


ಆಗ ತಾನೆ ಬಂದ ಟೇಪ್ ರೆಕಾರ್ಡರ್ ನ್ನು ನಮ್ಮ ದೊಡ್ಡಮ್ಮನ ಮಗ ಹೊರಕೇರಣ್ಣ ತಂದಿದ್ದರು. ಕರೆಂಟ್ ಇಲ್ಲದಿದ್ದರೂ ಸೆಲ್ ಹಾಕಿಕೊಂಡು ಒಂದಾಗಿ ಬಾಳು ಚಿತ್ರದ ಬಳೆಗಳು ಹಾಡುತಿವೆ...ಘಲ್ ಘಲ್ ಎನ್ನುತಿವೆ...ಎಂಬ ಹಾಡನ್ನು ತಿರುಗಿ ತಿರುಗಿಸಿ ಕೇಳಿ ಪುಳಕಗೊಂಡಿದ್ದೆ.


ಸಿನಿಮಾ ನೋಡಲು ಹೊರಕೇದೇಪುರ ಟೆಂಟ್ ಗೆ ನಮ್ಮೂರಿಂದ ಏಳು ಕಿಲೋಮೀಟರ್  ನಮ್ಮ ಗೆಳೆಯರ ಜೊತೆಯಲ್ಲಿ ನಡೆದುಕೊಂಡೇ ಹೋಗುತ್ತಿದ್ದೆವು. ಟೆಂಟ್ ನಲ್ಲಿ ಬೆಂಚ್ ಮತ್ತು ನೆಲದ ಮೇಲೆ ಕುಳಿತು ಸಿನಿಮಾ ನೋಡುವ ಅವಕಾಶದಲ್ಲಿ ನಾವು ನೆಲವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದೆವು. ಪಸ್ಟ್ ಶೋ    ಸಿನಿಮಾ ಬಿಟ್ಟ ಮೇಲೆ 50 ಪೈಸೆ ಕೊಟ್ಟು ಕಾರ ಮಂಡಕ್ಕಿ ಮೆಣಸಿನ ಕಾಯಿ ಬೊಂಡ ತಿಂದು ಕತ್ತಲಲ್ಲಿ ಮತ್ತೆ ಏಳು ಕಿಲೋಮೀಟರ್ ನಡೆದೇ ಮನೆ ಸೇರುತ್ತಿದ್ದೆವು.

ಇನ್ನೂ ಇಂತಹ ಸಾವಿರ ನೆನಪುಗಳಿವೆ ಮುಂದೆ ಹಂಚಿಕೊಂಡು ಸಂತಸಪಡುವೆ.ನಿಮಗೂ ಇಂತಹ ನೆನಪುಗಳು ಮರುಕಳಿಸುತ್ತಿರಬಹುದಲ್ಲವೆ?


ಸಿಹಿಜೀವಿ ವೆಂಕಟೇಶ್ವರ

ಚೌಡಗೊಂಡನಹಳ್ಳಿ 

9900925529 

23 ಅಕ್ಟೋಬರ್ 2023

ಕ್ರಿಕೆಟ್ ಹನಿಗಳು...

 




ಕ್ರಿಕೆಟ್ ಹನಿಗಳು ...



ಕರಾರುವಾಕ್ ಚೆಂಡೆಸತದಿಂದ

ನ್ಯೂಜಿಲೆಂಡ್ ದಾಂಡಿಗರ 

ಬೆವರಿಳಿಸಿದರು ನಮ್ಮ ಶಮಿ|

ಒಂದು ದಿನ ಮೊದಲೇ ಭಾರತೀಯರು ಹೆಮ್ಮೆಯಿಂದ

ಅಚರಿಸಿದೆವು ವಿಜಯದಶಮಿ ||



ಐದು ಓಟಗಳ ಕೊರತೆಯಿಂದ 

ವಿರಾಟ್ ಗೆ   ದೇವರ ದಾಖಲೆ

ಮುರಿಯುವ ಅವಕಾಶ ಮಿಸ್ಸಾಯ್ತು|

ಬೇಸರವಿಲ್ಲ.ದಾಖಲೆಯಾಗಲಿದೆ.

ಈಗ ಭಾರತವು ಅಂಕ ಪಟ್ಟಿಯಲ್ಲಿ

ಮೊದಲ ಸ್ಥಾನ ಪಡೆದಾಯ್ತು|| 


*ಸಿಹಿಜೀವಿ ವೆಂಕಟೇಶ್ವರ*

ತುಮಕೂರು

22 ಅಕ್ಟೋಬರ್ 2023

ಬಿಲ್ಗವನ .



*ಅಂಬೆ*


(ಬಿಲ್ಗವನ)


ಓಂ

ದೇವಿ

ನಮನ

ನಿನ್ನಡಿಗೆ

ಹರಸೆಮ್ಮನು

ಕರುಣದಿಂದಲಿ 

ಭಜಿಸುವೆವು ನಿನ್ನ

ಸಹಸ್ರ ನಾಮದಿಂದಲಿ 

ಮನ್ನಿಸೆಮ್ಮ ತಪ್ಪನು 

ಸದ್ಬುದ್ದಿಯ ನೀಡು

ಒಳಿತು ಮಾಡಿಸು

ಸ್ವಾರ್ಥ ಬಿಡಿಸು

ಕೈಹಿಡಿದು

ಕಾಪಾಡು

ಅಂಬೆ 

ನೀ 


*ಸಿಹಿಜೀವಿ ವೆಂಕಟೇಶ್ವರ*

ತುಮಕೂರು